ಕನ್ನಡಪ್ರಭ ವಾರ್ತೆ ಸುರಪುರ

ಪ್ರತಿಯೊಂದು ಮನೆಗೂ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಹಾಗೂ ಜನಪ್ರತಿನಿಧಿಯಾಗಿ ನನ್ನ ಮೊದಲ ಆದ್ಯತೆಯಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ತಾಲೂಕಿನ ದೇವಾಪುರ ಗ್ರಾಮದಲ್ಲಿ ಮಂಗಳವಾರ ಯಾದಗಿರಿ ಜಿ.ಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾ.ಪಂ. ಹಾಗೂ ದೇವಾಪುರ ಗ್ರಾ.ಪಂ ಸಹಯೋಗದಲ್ಲಿ ‘ಜಲ ಅರ್ಪಣ ದಿವಸ’ದ ಅಂಗವಾಗಿ ಹಮ್ಮಿಕೊಂಡಿದ್ದ 24×7 ಕುಡಿಯುವ ನೀರು ಸರಬರಾಜು ಯೋಜನೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಜಲವೇ ಜೀವನವಾಗಿದ್ದು, ಶುದ್ಧ ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಈ ಯೋಜನೆಯಿಂದ ದೇವಾಪುರ ಗ್ರಾಮದ ಪ್ರತಿಯೊಂದು ಕುಟುಂಬಕ್ಕೂ ದಿನದ 24 ಗಂಟೆಯೂ ಸುರಕ್ಷಿತ ಹಾಗೂ ಸ್ವಚ್ಛ ಕುಡಿಯುವ ನೀರು ಲಭ್ಯವಾಗಲಿದೆ. ಇದರಿಂದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದ್ದು, ಗ್ರಾಮೀಣ ಭಾಗದ ಮಹಿಳೆಯರ ನೀರಿಗಾಗಿ ಅಲೆದಾಟವು ತಪ್ಪಲಿದೆ ಎಂದರು.

ಸುರಪುರದ ಪ್ರತಿಯೊಂದು ಗ್ರಾಮವು ಅಭಿವೃದ್ಧಿಯ ಪಥದಲ್ಲಿ ಸಾಗಬೇಕು ಎಂಬುದು ತಮ್ಮ ಆಶಯ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.


ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ಅಧಿಕಾರಿಗಳು, ಗ್ರಾಮ ಪಂಚಾಯತ ಸಿಬ್ಬಂದಿ ಹಾಗೂ ಸಹಕರಿಸಿದ ಗ್ರಾಮಸ್ಥರನ್ನು ಶಾಸಕರು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಣಮಂತ್ರಾಯ ಪಾಟೀಲ, ತಾ.ಪಂ. ಇಒ ಬಸವರಾಜ ಸಜ್ಜನ, ಜಿ.ಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ವಜ್ಜಲ, ವೆಂಕೋಬ ಯಾದವ, ಮಲ್ಲಣ್ಣ ಸಾಹುಕಾರ ಮುಧೋಳ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ಸೇರಿದಂತೆ ಮುಖಂಡರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

------

ಫೋಟೋ: ಸುರಪುರ ತಾಲೂಕಿನ ದೇವಾಪುರ ಗ್ರಾಮದಲ್ಲಿ ಮಂಗಳವಾರ ಜಲ ಅರ್ಪಣ ದಿವಸದ ಅಂಗವಾಗಿ 24×7 ಕುಡಿಯುವ ನೀರು ಸರಬರಾಜು ಯೋಜನೆಯನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ತಾ.ಪಂ. ಇಒ ಬಸವರಾಜ ಸಜ್ಜನ, ವೆಂಕೋಬ ಯಾದವ ಸೇರಿದಂತೆ ಅಧಿಕಾರಿಗಳು ಇದ್ದರು.

ಜು.29 ಸುಆರ್ ಯು–1