ಸಾರಾಂಶ
ಕನ್ನಡಪ್ರಭ ವಾರ್ತೆ ವಿರಾಜಪೇಟೆ
ಪಟ್ಟಣದ ಸೇಂಟ್ ಆನ್ಸ್ ಪದವಿ ಕಾಲೇಜಿನ ಎನ್. ಎಸ್. ಎಸ್. ಘಟಕದ ವಿದ್ಯಾರ್ಥಿಗಳು ಎನ್ ಎಸ್ ಎಸ್ ದಿವಸದ ಪ್ರಯುಕ್ತ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಈ ಶ್ರಮದಾನ ಕಾರ್ಯಕ್ರಮ ಜರುಗಿತು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರು ಹಾಗೂ ಸೆಂಟ್ ಆನ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಮಾಜದ ಒಳಿತು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವಾಗಿದ್ದು ವಿದ್ಯಾರ್ಥಿಗಳು ಸಮಾಜದ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸಬೇಕು ಎಂದರು.
ವಿರಾಜಪೇಟೆ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಶಸ್ತ್ರ ಚಿಕಿತ್ಸಕರಾದ ಡಾ. ವಿಶ್ವನಾಥ್ ಸಿಂಪಿ ಅವರು ಮಾತನಾಡಿ ಸ್ವಚ್ಛತಾ ಅಭಿಯಾನವು ಎನ್. ಎಸ್. ಎಸ್. ನ ಧ್ಯೇಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಸೇವೆಯನ್ನು ಸಮಾಜಕ್ಕೆ ಸಲ್ಲಿಸುತ್ತಿರುವುದು ಗಮನಾರ್ಹವಾಗಿದೆ. ಸೇವಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದರು.ಸಾಮಾಜಿಕ ಕಳಕಳಿಯಲ್ಲಿ ಎನ್ ಎಸ್ ಎಸ್ ನ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದು ಹೇಳಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ಸಾರ್ವಜನಿಕ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಮಹೇಶ್, ಕಚೇರಿ ಸಿಬ್ಬಂದಿ ಇಂದುಲೇಖ, ಹಿರಿಯ ಶುಶ್ರೂಷಕಿ ಸುಲೋಚನಾ, ಉಪನ್ಯಾಸಕರಾದ ಅರ್ಜುನ್, ವಿಲೀನ, ಶಶಿಕಲಾ, ಆಸ್ಪತ್ರೆ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್ಎಸ್ಎಸ್ ಅಧಿಕಾರಿ ಹಾಗೂ ಉಪನ್ಯಾಸಕರಾದ ಶಾಂತಿಭೂಷಣ್ ಅವರು ಸ್ವಾಗತಿಸಿ ನಿರೂಪಿಸಿದರು.
ಎನ್ಎಸ್ಎಸ್ ವಿದ್ಯಾರ್ಥಿಗಳು ಆಸ್ಪತ್ರೆ ಆವರಣದಲ್ಲಿ ಶ್ರಮದಾನವನ್ನು ಮಾಡಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛ ಮಾಡಿದರು. ಮತ್ತು ಪ್ಲಾಸ್ಟಿಕ್, ಪೇಪರ್ ಗಳನ್ನು ತೆಗೆದು ಸ್ವಚ್ಛತಾ ಅಭಿಯಾನ ನಡೆಸಿದರು. ತದನಂತರ ಆಸ್ಪತ್ರೆಯ ಮುಂಭಾಗದ ಹೂದೋಟ ದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.