ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದಲ್ಲಿ ಅನೇಕ ಕಡೆ ರಸ್ತೆ ಬದಿ ವ್ಯಾಪಾರವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಖಾಸಗಿ ಕ್ಲಿನಿಕ್ ವೈದ್ಯ ಡಾ.ಸುಬ್ರಮಣ್ಯ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ ಮತ್ತು ಕೆಆರ್‌ಎಸ್ ಪಕ್ಷದ ರವಿಕೃಷ್ಣರೆಡ್ಡಿ ಭಾವಚಿತ್ರ ಇಟ್ಟು ಪ್ರತಿಭಟನೆ ನಡೆಸಿದರು. ಡಾ. ಸುಬ್ರಮಣ್ಯ ಮಾತನಾಡಿ ರಸ್ತೆ ಬದಿ ವ್ಯಾಪಾರದಿಂದ ಪಾದಚಾರಿಗಳು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಗೊತ್ತಿದ್ದು, ಗೊತ್ತಿಲ್ಲದಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ರಸ್ತೆ ಬದಿ ವ್ಯಾಪಾರವನ್ನು ತೆರವುಗೊಳಿಸಲು ಭಾನುವಾರದ ತನಕ ಕಾಲಾವಕಾಶ ನೀಡಲಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.ಸೋಮವಾರದಿಂದ ಭುವನೇಶ್ವರಿ ತರಕಾರಿ ಮಾರುಕಟ್ಟೆಯಲ್ಲಿ ನಿರ್ಮಿಸಿರುವ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಇದರಿಂದ ಬಿ.ಎಂ. ರಸ್ತೆಯಲ್ಲಿ ವಾಹನಗಳ ನಿಲುಗಡೆ ಮತ್ತು ಪಾದಚಾರಿಗಳಿಗೆ ಅನುಕೂಲವಾಗುತ್ತದೆ ಎಂದರು. ಪಟ್ಟಣ ಪೊಲೀಸ್ ಠಾಣೆಯ ಅಧಿಕಾರಿಗಳು, ಸಂಚಾರ ಠಾಣೆಯ ಅಧಿಕಾರಿಗಳು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು. ಪುರಸಭೆ ವತಿಯಿಂದ ರಸ್ತೆ ಬದಿ ವ್ಯಾಪಾರ ತೆರವು ಗೊಳಿಸುವ ಸಹಕಾರ ಕೆಲಸಕ್ಕೆ ಪೊಲೀಸರು ನೀಡಬೇಕು. ನಿರ್ಲಕ್ಷ್ಯ ಧೋರಣೆ ಸಲ್ಲದು ಎಂದು ಹೇಳಿದರು.