ಸಾರಾಂಶ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಜಿಎಸ್ಟಿ ಪರಿಹಾರದ ವಿಚಾರದಲ್ಲಿ ಒಂದು ಸುಳ್ಳನ್ನು ನೂರು ಸಲ ಹೇಳಿ ಸತ್ಯ ಮಾಡಲು ಹೊರಟಿದ್ದಾರೆ. ಮನಸ್ಸಿನಲ್ಲಿ ಮಂಡಿಗೆ ತಿಂದರೆ ಲೆಕ್ಕ ಕೊಡುವವರು ಯಾರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 11 ಸಾವಿರ ಕೋಟಿ ಅಂತ ಹೇಳುತ್ತಾರೆ. ಯಾವ ಲೆಕ್ಕ ಇದೆ. ಹಲವಾರು ಬಾರಿ ಹೇಳಿದ್ದೇವೆ. 15ನೇ ಹಣಕಾಸಿನಲ್ಲಿ 2014ರಿಂದ ₹ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತ ರಾಜ್ಯಕ್ಕೆ ಬರುತ್ತಿದೆ. ಪ್ರತಿ ವರ್ಷಾಂತ್ಯದಲ್ಲಿ ₹ 3000 ಕೋಟಿ ಬರುತ್ತಿದೆ. ಕೇಂದ್ರದಿಂದ ಬಂದಿದ್ದನ್ನು ಸಿದ್ದರಾಮಯ್ಯ ಹೇಳುವುದಿಲ್ಲ ಎಂದು ಆರೋಪಿಸಿದರು.ಬೆಳಗಾವಿಯಲ್ಲಿ ಕಲ್ಲು ತೂರಾಟ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ದೇಶದಲ್ಲಿ ಅರಾಜಕತೆ, ಹಿಂಸೆ ಮಾಡಬೇಕು ಅನ್ನುವುದು ಒಂದು ವರ್ಗದ ಹುನ್ನಾರ. ಅದಕ್ಕೆ ಕೆಲವು ಶಕ್ತಿಗಳು ಬೆಂಬಲ ನೀಡುತ್ತಿದ್ದಾರೆ. ಉತ್ತರಪ್ರದೇಶದ ರಾಜ್ಯದಲ್ಲಿ ಮೊದಲು ಇತ್ತು. ದಾವಣಗೆರೆ ಘಟನೆ ನಡೆದ ನಂತರ ಕರ್ನಾಟಕದಲ್ಲಿ ನಿಯಂತ್ರಣ ಮಾಡಬೇಕು ಅನ್ನುವ ಆಗ್ರಹ ಮಾಡಿದ್ದೇವು, ನಿಯಂತ್ರಣ ಮಾಡುತ್ತೇವೆ ಅಂದಿದ್ದರು. ಹೆಚ್ಚಿನ ಜಾಗೃತಿ ತೆಗೆದುಕೊಳ್ಳುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಮಂಡ್ಯ, ಮದ್ದೂರು ಘಟನೆ ನೋಡಿದಾಗ ರಾಜ್ಯದಲ್ಲಿ ಸಂಪೂರ್ಣ ಕಾನೂನು ಸುವ್ಯವಸ್ಥಿತ ಕುಸಿದಿದೆ.
ರಾಜ್ಯದಲ್ಲಿ ಉಂಟಾದ ಪ್ರವಾಹದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಳೆದ ಬಾರಿ ಮಳೆಹಾನಿ ಪರಿಹಾರ ಕೊಡುವುದಕ್ಕೆ, ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ಹಣ ನೀಡಿದ್ದಾರೆ. ಈ ಬಾರಿ ಬೆಳೆಹಾನಿ ಘೋಷಣೆ ಮಾಡಿದ್ದಾರೆ. ಇನ್ನೂ ನೀಡಿಲ್ಲ. ನಾನು ಸಿ.ಎಂ ಇದ್ದಾಗ ಎರಡುಪಟ್ಟು ಹೆಚ್ಚು ಬೆಳೆಹಾನಿ ನೀಡಿದ್ದೆ. ಕೇಂದ್ರದ ಹಣವನ್ನ ಕಾಯಲಿಲ್ಲ. ಇವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರದ ಬಗ್ಗೆ ನೆಪ ಹೇಳಬಾರದು ಎಂದು ಆಗ್ರಹಿಸಿದರು.