ಮಾತು ತಪ್ಪಿದ ಸಿಎಂ, 12ರಿಂದ ಅಹೋರಾತ್ರಿ ಧರಣಿ

| Published : Aug 09 2025, 12:09 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಹಯೋಗದಲ್ಲಿ ಆ.12 ರಿಂದ 14ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಹಯೋಗದಲ್ಲಿ ಆ.12 ರಿಂದ 14ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ಕನಿಷ್ಠ ₹15 ವೇತನ ಕೊಡಬೇಕೆಂದು ಒತ್ತಾಯಿಸಿ, ಕಳೆದ ಜನವರಿ 7 ರಿಂದ 10ನೇ ತಾರೀಖಿನವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಅಹೋರಾತ್ರಿ ಧರಣಿ ಸತ್ಯಾಗ್ರಹ ವೇಳೆ ಸಿಎಂ ಸಿದ್ದರಾಮಯ್ಯನವರು ಸಂಧಾನ ಸಭೆ ನಡೆಸಿ ₹10000 ಹಾಗೂ ಬಜೆಟ್‌ನಲ್ಲಿ ಸಾವಿರ ರು. ಘೋಷಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ನಮ್ಮ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದೂರಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ವೇತನ ಏರಿಕೆ ಮಾಡುವುದನ್ನು ಬಿಟ್ಟು, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಜನಸಂಖ್ಯೆ, ಶಿಕ್ಷಣ, ಮೌಲ್ಯಮಾಪನ ಹೆಸರಿನಲ್ಲಿ ಕೈ ಬಿಡುವ ನಿರ್ಧಾರದಿಂದ ನೋಟಿಸ್‌ಗಳನ್ನು ನೀಡಲಾಗಿದೆ. ಇದರಿಂದ ಆಶಾ ಕಾರ್ಯಕರ್ತೆಯರು ಆತಂಕದಲ್ಲಿದ್ದಾರೆ. ಹೀಗಾಗಿ ನೋಟಿಸ್ ನೀಡಿದ ಕಾರ್ಯಕರ್ತೆಯರ ಸೇವೆಯನ್ನು ಮುಂದುವರಿಸಬೇಕು. ಸರ್ಕಾರ ನೀಡಿದ ಭರವಸೆಯಂತೆ ₹10 ಸಾವಿರ ಗ್ಯಾರಂಟಿ ಹಾಗೂ ಒಂದು ಸಾವಿರ ಹೆಚ್ಚುವರಿ ಹಣ ಸೇರಿ ₹11 ಸಾವಿರ ವೇತನ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ 31 ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಅದರಂತೆ ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತೇವೆ. ಈ ಮೂರು ದಿನಗಳ ಕಾಲ ನಡೆಯಲಿರುವ ಧರಣಿಯಲ್ಲಿ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಪಾಲ್ಗೊಳ್ಳುತ್ತಾರೆ. ಇಷ್ಟಾದರೂ ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಜಡಗಣ್ಣವರ, ಜಿಲ್ಲಾ ಕಾರ್ಯದರ್ಶಿ ಗೀತಾ ರಾಯವಗೋಳ, ಜಿಲ್ಲಾ ಉಪಾಧ್ಯಕ್ಷ ರೂಪ ಅಂಗಡಿ,ರೀಟಾ ಫರ್ನಾಂಡಿಸ್, ಜಯಶ್ರೀ ನಾವಿ, ಸುಜಾತಾ ಕಾಡಮಠ, ಸುಮಿತ್ರಾ ಹಿರೇಮಠ ಉಪಸ್ಥಿತರಿದ್ದರು.