ಸಾರಾಂಶ
ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ
ಅಮ್ಮಕೊಡವ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನೇತೃತ್ವದಲ್ಲಿ ಅಖಿಲ ಅಮ್ಮಕೊಡವ ಸಮಾಜದ ಅಧ್ಯಕ್ಷ ಬಾನಂಡ ಎನ್. ಪ್ರತ್ಯು ಹಾಗೂ ಸಮಾಜದ ಪದಾಧಿಕಾರಿಗಳ ನಿಯೋಗ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.ಜನಾಂಗದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಕಾಳಜಿಯನ್ನು ಹೊಂದಿದ್ದು, ಹಂತ ಹಂತವಾಗಿ ಸಮಾಜದ ಅಭಿವೃದ್ಧಿಗೆ ವ್ಯವಸ್ಥಿತ ಯೋಜನೆಯನ್ನು ಒದಗಿಸಿಕೊಡಲಾಗುವುದು ಎಂದು ತಿಳಿಸಿದರು.ಅಖಿಲ ಅಮ್ಮಕೊಡವ ಸಮಾಜ ಅಧ್ಯಕ್ಷ ಬಾನಂಡ ಎನ್. ಪ್ರತ್ಯು, ಕೊಡಗಿನಾದ್ಯಂತ ಅಮ್ಮಕೊಡವ ಜನಾಂಗ ವಾಸಿಸುತ್ತಿದ್ದಾರೆ. ಅವರ ಅಭಿವೃದ್ಧಿಗೆ ಪೂರಕವಾಗಿ ವಿಶೇಷ ಅನುದಾನವನ್ನು ಸರ್ಕಾರ ಒದಗಿಸಿಕೊಡುವ ಮೂಲಕ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಮನವಿ ಸಲ್ಲಿಸಿದರು.ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿ ಕಾವೇರಿ ಹಿಲ್ಸ್ ಬಡಾವಣೆಯಲ್ಲಿ ಅಮ್ಮಕೊಡವ ಸಮಾಜದ ಭಾಂದವರು ಶುಭ ಸಮಾರಂಭಗಳನ್ನು ನಡೆಸಲು ಸಣ್ಣ ಕಟ್ಟಡವೊಂದು ಕಾರ್ಯನಿರ್ವಹಿಸುತ್ತಿದೆ. ಆದರೆ ಈ ಕಟ್ಟಡದಲ್ಲಿ ಹೆಚ್ಚಿನ ಜನರು ಸೇರಲು ಸೂಕ್ತ ವ್ಯವಸ್ಥೆ ಇಲ್ಲದೇ ಇರುವುದರಿಂದ ಕಟ್ಟಡವನ್ನು ಮೇಲ್ದರ್ಜೆಗೇರಿಸುವ ಚಿಂತನೆ ಸಮಾಜದ ಭಾಂದವರದ್ದಾಗಿದೆ. ಆಡಳಿತ ಮಂಡಳಿಯವರು ಈ ಬಗ್ಗೆ ನಿರ್ಣಯ ಕೈಗೊಂಡು ಈ ಸ್ಥಳದಲ್ಲಿ ಸಭಾಂಗಣವನ್ನು ನಿರ್ಮಿಸಲು ಯೋಜನೆ ರೂಪಿಸಿಕೊಂಡಿದ್ದು, ೨ ಕೋಟಿ ವೆಚ್ಚ ತಗುಲುವ ಅಂದಾಜು ಹೊಂದಲಾಗಿದೆ. ಸರ್ಕಾರ ಸಭಾಂಗಣ ನಿರ್ಮಿಸಲು ೨ ಕೋಟಿ ಅನುದಾನ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ಕೊಡಗು ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕಾರ್ಯದರ್ಶಿ ಅನಿಲ್ ಪ್ರಸಾದ್, ಪುತ್ತಮನೆ ಯತಿಶ್, ಸುನೀಲ್, ಹೆಮ್ಮಚ್ಚಿಮನೆ ಅಶಿತ್ ಹಾಗೂ ಇತರರು ಇದ್ದರು.