ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ
ಕನ್ನಡಪ್ರಭ ವಾರ್ತೆ ಕಾರವಾರಮುಖ್ಯಮಂತ್ರಿಗಳ ನಿರ್ದೇಶನದಂತೆ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ, ಇಡೀ ಜಿಲ್ಲೆಯ ಅಧಿಕಾರಿಗಳು ಟೀಮ್ ಆಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಮುಖ್ಯಮಂತ್ರಿಗಳು ನಡೆಸಿದ ಸಂವಾದದಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ಮಂಗಳವಾರ ಕ್ರಿಮ್ಸ್ ನಲ್ಲಿ ಅಯೋಜಿಸಿದ್ದ ಸರ್ಕಾರಿ ನೌಕರರು ಮತ್ತು ಮುಖ್ಯಮಂತ್ರಿಗಳೊಂದಿಗಿನ ಸಂವಾದ ಸಭೆಯ ನಂತರ, ಜಿಲ್ಲೆಯಲ್ಲಿ ಸರ್ಕಾರಿ ನೌಕರರು ನೀಡಬೇಕಾದ ಸಾರ್ವಜನಿಕ ಸೇವೆಗಳು, ಪಾರದರ್ಶಕ ಆಡಳಿತ ಹಾಗೂ ಇಲಾಖೆಗಳ ಕಾರ್ಯನಿರ್ವಹಣೆ ಕುರಿತು ನಿರ್ದೇಶನ ನೀಡಿದರು.ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ನಿಯೋಜಿತ ಕೇಂದ್ರಸ್ಥಾನದಲ್ಲೇ ಕಡ್ಡಾಯವಾಗಿ ವಾಸಿಸಬೇಕು. ಕೇಂದ್ರಸ್ಥಾನದಿಂದ ಹೊರಗಡೆ ವಾಸವಿದ್ದು, ಕರ್ತವ್ಯ ನಿರ್ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆ. 15 ರೊಳಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹೆಸರು, ಕಚೇರಿ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ವಾಸದ ವಿಳಾಸದ ವಿವರಗಳನ್ನು ಕ್ರೋಢೀಕರಿಸಿ ಅಧಿಕೃತ ಕೈಪಿಡಿ ಸಿದ್ಧಪಡಿಸಲಾಗುವುದು ಎಂದರು.
ಕಚೇರಿಗಳಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಭ್ರಷ್ಟಾಚಾರದ ಕುರಿತು ದೂರು ನೀಡಲು ಸಾರ್ವಜನಿಕರಿಗೆ ಕಾಣುವಂತೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಹಾಗೂ ಅಗತ್ಯ ಮಾಹಿತಿಯ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳ ಮೇಲೆ ಮುಖ್ಯಮಂತ್ರಿಗಳ ಕಚೇರಿಯಿಂದಲೂ ನಿಗಾ ವಹಿಸಲಾಗುತ್ತಿದ್ದು, ಕರ್ತವ್ಯ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡುವ ನಿರ್ದೇಶನ ಮತ್ತು ಸೂಚನೆ ಅವರ ಕೆಳಹಂತದ ಸಿಬ್ಬಂದಿಗೂ ತಲುಪಿ, ಅವುಗಳ ಸಮರ್ಪಕ ಅನುಷ್ಠಾನ ಆಗಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.