ಕೃಷ್ಣೆಗೆ ಸಿಎಂ ಸಿದ್ಧರಾಮಯ್ಯ ಬಾಗಿನ ಅರ್ಪಣೆ

| Published : Aug 22 2024, 12:51 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಕೃಷ್ಣಾ ನದಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಸ್ಥಳೀಯ ಸಚಿವರು, ಶಾಸಕರು ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಅಲ್ಲದೇ, ಗಂಗಾ ಪೂಜೆ ಸಲ್ಲಿಸಿ ನಾಡಿನ ರೈತರ ಹಿತ ಕಾಪಾಡುವಂತೆ ಪ್ರಾರ್ಥಿಸಿದರು. ಸಿಎಂ ಸಿದ್ದರಾಮಯ್ಯ ಕೃಷ್ಣೆಗೆ ಬಾಗಿನ ಅರ್ಪಿಸುತ್ತಿರುವುದು ಇದು ಐದನೇ ಬಾರಿ.

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಕೃಷ್ಣಾ ನದಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಸ್ಥಳೀಯ ಸಚಿವರು, ಶಾಸಕರು ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಅಲ್ಲದೇ, ಗಂಗಾ ಪೂಜೆ ಸಲ್ಲಿಸಿ ನಾಡಿನ ರೈತರ ಹಿತ ಕಾಪಾಡುವಂತೆ ಪ್ರಾರ್ಥಿಸಿದರು. ಸಿಎಂ ಸಿದ್ದರಾಮಯ್ಯ ಕೃಷ್ಣೆಗೆ ಬಾಗಿನ ಅರ್ಪಿಸುತ್ತಿರುವುದು ಇದು ಐದನೇ ಬಾರಿ. ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ ನೇರವಾಗಿ ರಸ್ತೆಯ ಮೂಲಕ ಆಲಮಟ್ಟಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಕೃಷ್ಣೆಯ ಜಲಧಿಗೆ ಪೂಜೆ ಸಲ್ಲಿಸಿದರು.ಬಾಗಿನ ಅರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸಿದ್ದರು. ಸಚಿವರಾದ ಎಂ.ಬಿ.ಪಾಟೀಲ, ಆರ್.ಬಿ.ತಿಮ್ಮಾಪುರ, ಶಾಸಕರಾದ ಎಚ್.ವೈ.ಮೇಟಿ, ಯಶವಂತರಾಯಗೌಡ ಪಾಟೀಲ, ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ಅಶೋಕ ಮನಗೂಳಿ, ಪ್ರಕಾಶ ರಾಠೋಡ, ಸಂಗಮೇಶ ಬಬಲೇಶ್ವರ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಇಲಾಖೆಯ ಆಯುಕ್ತ ಮೊಹಮ್ಮದ್ ಮೊಹಸಿನ್, ಕೆಬಿಜೆಎನ್ಎಲ್ ಎಂಡಿ ಕೆ.ಪಿ.ಮೋಹನರಾಜ್, ಬಿಟಿಡಿಎ ಮುಖ್ಯ ಎಂಜಿನಿಯರ್ ಡಿ.ಬಸವರಾಜ ಇತರರು ಇದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿಯ ಯಾವುದೇ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿರಲಿಲ್ಲ. ಸಂಸದ ರಮೇಶ ಜಿಗಜಿಣಗಿ ಸೇರಿ ಅವಳಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಅತಿಥಿಗಳಾಗಿದ್ದರು. ಆದರೆ, ಬಿಜೆಪಿಯ ಯಾವೊಬ್ಬ ಶಾಸಕರು, ಸಂಸದರು ಹಾಜರಾಗಲಿಲ್ಲ. ಕಾರ್ಯಕ್ರಮ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವ ಹಿನ್ನಲೆಯಲ್ಲಿ ಆಲಮಟ್ಟಿಯಲ್ಲಿ ಭಾರಿ ಭದ್ರತೆಯನ್ನು ಹೆಚ್ಚಳ ಮಾಡಿತ್ತು. ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ವಿವಿಧ ಸಂಘಟನೆಗಳು ಹಾಗೂ ನೂರಾರು ಜನರು ತಮ್ಮ ಬೇಡಿಕೆಗಳ ಬಗ್ಗೆ ಮನವಿಗಳನ್ನು ಸಲ್ಲಿಸಿದರು.

2 ಗಂಟೆ ತಡವಾಗಿ ಆಗಮನ:

ನಿಗದಿಯಂತೆ ಮಧ್ಯಾಹ್ನ 1ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಗಿನ ಸಲ್ಲಿಸಬೇಕಿದ್ದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹಾಗೂ ಡಿಸಿಎಂ ಎರಡು ಗಂಟೆ ವಿಳಂಬವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮ ಮಧ್ಯಾಹ್ನ 3 ಗಂಟೆ ಆರಂಭವಾಯಿತು.ಕಾರ್ಯಕ್ರಮ ಹಿನ್ನಲೆ ಜಲಾಶಯದ ವೃತ್ತ, ಗೇಟ್, ಬಾಗಿನ ಸ್ಥಳವನ್ನು ಸಂಪೂರ್ಣ ಹೂವುಗಳು ಹಾಗೂ ರಂಗೋಲಿಗಳಿಂದ ಸಿಂಗಾರಗೊಳಿಸಲಾಗಿತ್ತು. ಹೀಗಾಗಿ, ಬುಧವಾರ ಆಲಮಟ್ಟಿ ಜಲಾಶಯ ಮತ್ತು ಆವರಣ ಮಧುವನಗಿತ್ತಿಯಂತೆ ಕಂಗೊಳಿಸುತ್ತಿತ್ತು.