ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ರಾಜೀನಾಮೆ ನೀಡಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

| Published : Sep 01 2024, 01:52 AM IST / Updated: Sep 01 2024, 12:46 PM IST

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ರಾಜೀನಾಮೆ ನೀಡಲಿ: ವಿಶ್ವೇಶ್ವರ ಹೆಗಡೆ ಕಾಗೇರಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಡಾ, ವಾಲ್ಮೀಕಿ ಹಗರಣ ಸೇರಿದಂತೆ ದಿನದಿಂದ ದಿನಕ್ಕೆ ಸರ್ಕಾರದಿಂದ ಒಂದೊಂದು ಹಗರಣ ಹೊರಕ್ಕೆ ಬರುತ್ತಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.

ಶಿರಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆದಷ್ಟು ಶೀಘ್ರವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರದಿಂದ ಹೊರ ಹೋಗಲಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಶನಿವಾರ ನಗರದ ಪಂಡಿತ್ ದೀನ ದಯಾಳ ಸಭಾಭವನದಲ್ಲಿ ಬಿಜೆಪಿ ನಗರ ಮಂಡಳದಿಂದ ಏರ್ಪಡಿಸಿದ್ದ ಸದಸ್ಯತ್ವ ಅಭಿಯಾನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ದುರಂತದ ಹಾಗೂ ಭ್ರಷ್ಟ ಸರ್ಕಾರವನ್ನು ನೋಡುತ್ತಿದ್ದೇವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಬೇಸತ್ತಿದ್ದಾರೆ. ಮುಡಾ, ವಾಲ್ಮೀಕಿ ಹಗರಣ ಸೇರಿದಂತೆ ದಿನದಿಂದ ದಿನಕ್ಕೆ ಸರ್ಕಾರದಿಂದ ಒಂದೊಂದು ಹಗರಣ ಹೊರಕ್ಕೆ ಬರುತ್ತಿದೆ. ಜನರ ಕಷ್ಟಕ್ಕೆ ಸ್ಪಂದಿಸಲು ರಾಜ್ಯ ಸರ್ಕಾರದ ಹಣವಿಲ್ಲ. ಕಾಂಗ್ರೆಸ್‌ನವರ ಒಳಜಗಳ, ಭ್ರಷ್ಟಾಚಾರದಿಂದ ಸರ್ಕಾರ ಉರುಳಿ ಬೀಳುತ್ತದೆ ಎಂದರು.

ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಮಾಡಿರುವ ತಪ್ಪಿನಿಂದ ಇನ್ನು ಸುಧಾರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಅನೇಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ದೇಶದಲ್ಲಿ ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ಅಪ್ರಸ್ತುವಾಗಿ, ಜನರ ವಿಶ್ವಾಸದ ಜತೆ ದೇಶದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ದೇಶದ ಅಭಿವೃದ್ಧಿ ಮಾಡುವ ಮೂಲಕ ಜನರ ವಿಶ್ವಾಸವನ್ನು ಬಿಜೆಪಿ ಗಳಿಸುತ್ತಿದೆ ಎಂದರು.

ಶಿರಸಿ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ. ಇನ್ನು ಇರುವ ೧ ವರ್ಷ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿ, ಬರುವ ನಗರಸಭೆಯಲ್ಲಿ ಇನ್ನಷ್ಟು ಸ್ಥಾನ ಗೆಲ್ಲಬೇಕು. ಮುಂದಿನ ದಿನಗಳಲ್ಲಿ ಬಹುಮತದಲ್ಲಿ ಬಿಜೆಪಿ ಅಧಿಕಾರ ನಡೆಸಬೇಕು. ಆ ನಿಟ್ಟಿನಲ್ಲಿ ಅಧ್ಯಕ್ಷ- ಉಪಾಧ್ಯಕ್ಷರಿಗೆ ಉಳಿದ ಸದಸ್ಯರು ಸಹಕಾರ ನೀಡಬೇಕು ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮನೆಗಳಿಗೆ ನೀರು ನುಗ್ಗಿದರೆ ₹10 ಸಾವಿರ, ಅತಿವೃಷ್ಟಿಯಿಂದ ಮನೆ ಕಳೆದುಕೊಂಡಿರುವರಿಗೆ ₹5 ಲಕ್ಷ ನೀಡಲಾಗುತ್ತಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮನೆಗಳಿಗೆ ನೀರು ನುಗ್ಗಿದರೆ ₹5 ಸಾವಿರ ಮನೆ ಕಳೆದುಕೊಂಡವರಿಗೆ ಕೇವಲ ₹1.15  ಲಕ್ಷ ನೀಡುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರಕ್ಕೆ ಜನರ ಆಶೋತ್ತರಗಳನ್ನು ಈಡೇರಿಸಲು ಹಣವಿಲ್ಲ ಎಂದು ಆರೋಪಿಸಿದರು.

ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ ಮಾತನಾಡಿ, ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿಯಾಗಿಸಲು ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ ಎಂದರು.

ಮಾಜಿ ಶಾಸಕ ವಿವೇಕಾನಂದ ವೈದ್ಯ, ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ ಭಟ್, ಸ್ಥಾಯಿ ಸಮಿತಿ ಅಧ್ಯಕ್ಷ ಕುಮಾರ ಬೋರ್ಕರ, ನಗರ ಮಂಡಳ ಪ್ರಧಾನ ಕಾರ್ಯದರ್ಶಿ ನಾಗರಾಜ ನಾಯ್ಕ, ಸಂಚಾಲಕ ಮಾದೇವ ಚಲುವಾದಿ ಮತ್ತಿತರರು ಇದ್ದರು.