ಪ್ರಸಕ್ತ ವರ್ಷದ ಕರಾವಳಿ ಉತ್ಸವ ಡಿಸೆಂಬರ್ 20ರಿಂದ ಆರಂಭವಾಗಲಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಮತ್ತು ಸಾಹಸಮಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ
ಮಂಗಳೂರು: ಪ್ರಸಕ್ತ ವರ್ಷದ ಕರಾವಳಿ ಉತ್ಸವ ಡಿಸೆಂಬರ್ 20ರಿಂದ ಆರಂಭವಾಗಲಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಮತ್ತು ಸಾಹಸಮಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಮಂಗಳವಾರ ಕರಾವಳಿ ಉತ್ಸವ ಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಡಲ ತೀರಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು 6 ಬೀಚ್ಗಳಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಪಣಂಬೂರು, ಉಳ್ಳಾಲ, ಸೋಮೇಶ್ವರ, ಸಸಿಹಿತ್ಲು, ತಣ್ಣೀರು ಬಾವಿ ಮತ್ತು ಬ್ಲೂ ಫ್ಲಾಗ್ ಬೀಚ್ಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.ಸಸಿಹಿತ್ಲು ಬೀಚ್ನಲ್ಲಿ ಸಾಹಸ ಕ್ರೀಡೆಗಳು, ತಣ್ಣೀರುಬಾವಿ ಬ್ಲೂ ಫ್ಲಾಗ್ ಬೀಚ್ನಲ್ಲಿ ವೈನ್ ಚೀಸ್ ಕೇಕ್ ಫೆಸ್ಟ್, ತಣ್ಣೀರುಬಾವಿ ಬೀಚ್ನಲ್ಲಿ ಮ್ಯೂಸಿಕ್ ಫೆಸ್ಟಿವಲ್ ಮತ್ತು ಟ್ರಯತ್ಲಾನ್, ಉಳ್ಳಾಲ ಬೀಚ್ನಲ್ಲಿ ಫುಟ್ಬಾಲ್, ವಾಲಿಬಾಲ್ ಮತ್ತು ಮತ್ತಿತರ ಕ್ರೀಡೆಗಳು, ಪಣಂಬೂರ್ ಬೀಚ್ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಸೋಮೇಶ್ವರ ಬೀಚ್ನಲ್ಲಿ ಸಂಗೀತ ಸಂಜೆ ಮತ್ತು ಯೋಗ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಅಲ್ಲದೆ ಎಲ್ಲ ಬೀಚ್ಗಳಲ್ಲಿ ಆಹಾರ ಉತ್ಸವಗಳು ನಡೆಯಲಿದ್ದು, ವೈವಿಧ್ಯಮಯ ತಿಂಡಿ ತಿನಿಸುಗಳ ಮೇಳ ನಡೆಯಲಿದೆ. ಕದ್ರಿ ಪಾರ್ಕ್ನಲ್ಲಿ ಕಲಾ ಪರ್ಬ ಕಾರ್ಯಕ್ರಮ, ಫಲಪುಷ್ಪ ಪ್ರದರ್ಶನ ನಡೆಯಲಿದೆ. ಮಂಗಳೂರು ನಗರದಲ್ಲಿ ಚಲನಚಿತ್ರ ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಡಿಸೆಂಬರ್ 27, 28ರಂದು ನೆಹರು ಮೈದಾನದ ಫುಟ್ಬಾಲ್ ಕ್ರೀಡಾಂಗಣದಲ್ಲಿ ಫುಟ್ಬಾಲ್ ಕ್ರೀಡಾ ಸ್ಪರ್ಧೆ ನಡೆಯಲಿದೆ. ಪಿಳಿಕುಳ ಉದ್ಯಾನವನದಲ್ಲಿಯೂ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರನ್ನು ಆಕರ್ಷಿಸಲು ಹೆಲಿಕಾಪ್ಟರ್ ಸಂಚಾರ ಕೂಡ ಆಯೋಜಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ ಮತ್ತಿತರರು ಇದ್ದರು.