ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸಿ: ಉಸ್ತುವಾರಿ ಕಾರ್ಯದರ್ಶಿ

| Published : Sep 19 2025, 01:03 AM IST

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸಿ: ಉಸ್ತುವಾರಿ ಕಾರ್ಯದರ್ಶಿ
Share this Article
  • FB
  • TW
  • Linkdin
  • Email

ಸಾರಾಂಶ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದ ಎಲ್ಲ ವರ್ಗದ ಜನರ ಸಮೀಕ್ಷೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.

ಮಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದ ಎಲ್ಲ ವರ್ಗದ ಜನರ ಸಮೀಕ್ಷೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.ನಗರದ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಈ ಸಮೀಕ್ಷೆಯಲ್ಲಿ ಸಮಾಜದ ಎಲ್ಲ ಜಾತಿ, ಧರ್ಮ ಮತ್ತು ವರ್ಗಗಳ ಪ್ರತಿಯೊಬ್ಬರ ವಿವರಗಳನ್ನು ಪಡೆಯಲಾಗುವುದು. ಈಗಾಗಲೇ ಪ್ರತಿ ಮನೆಗೆ ಸ್ಟಿಕ್ಕರ್ ಅಂಟಿಸಲಾಗಿದ್ದು, ಇದರ ಆಧಾರದ ಮೇಲೆ ಜಿಪಿಎಸ್ ಮಾಹಿತಿಯೊಂದಿಗೆ ಸಮೀಕ್ಷೆ ನಡೆಸಲಾಗುವುದು. ಪ್ರತಿ ಮನೆಗೂ ಗಣತಿದಾರರು ಬಂದು ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಿ, 60 ಪ್ರಶ್ನೆಗಳಿಗೆ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಿದರು. ಸಮೀಕ್ಷೆಯಲ್ಲಿ ಪ್ರತಿಯೊಬ್ಬರ ಕುಟುಂಬ ಶೈಕ್ಷಣಿಕ, ವೈವಾಹಿಕ ಸ್ಥಾನಮಾನ, ಸರ್ಕಾರದಿಂದ ಪಡೆದ ಸೌಲಭ್ಯಗಳು, ಉದ್ಯೋಗ, ರಾಜಕೀಯ ಪ್ರಾತಿನಿಧ್ಯ ವಿವರ, ಜಮೀನು ವಿವರ, ಕೃಷಿ ಜಾನುವಾರು, ಕುಡಿಯುವ ನೀರು, ನಿವೇಶನ, ಶೌಚಾಲಯ, ಮತ್ತಿತರ ಮಾಹಿತಿ ಪಡೆಯಲಿದ್ದಾರೆ. ಇದರಿಂದ ದೊರಕುವ ಮಾಹಿತಿಯು ಸರ್ಕಾರದ ನೀತಿ ನಿರೂಪಣೆಯಲ್ಲಿ ಹಾಗೂ ವಿವಿಧ ಯೋಜನೆಗಳ ಜಾರಿಗೆ ಸಹಕಾರಿಯಾಗುವುದು ಎಂದು ತುಳಸಿ ಮದ್ದಿನೇನಿ ಹೇಳಿದರು.ಸಮೀಕ್ಷೆಯಲ್ಲಿ ಯಾವುದೇ ವಿವಾದಾತ್ಮಕ ಪ್ರಶ್ನೆಗಳು ಇರುವುದಿಲ್ಲ. ಪ್ರತಿ ಮನೆಯ ಸಮೀಕ್ಷೆಗೆ ಅಂದಾಜು 40 ನಿಮಿಷ ಸಮಯ ತಗುಲಲಿದೆ. ಸಮೀಕ್ಷೆಗೆ ಶಿಕ್ಷಕರು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಸಿಬ್ಬಂದಿಗಳನ್ನು ಬಳಸಲಾಗುವುದು. ಮನೆಗೆ ಸಮೀಕ್ಷೆದಾರರು ಬಂದಾಗ ಸರಿಯಾದ ಮಾಹಿತಿ ನೀಡಿ ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ., ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರರು ಇದ್ದರು.