ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸಲಹೆ

| Published : Aug 21 2024, 12:39 AM IST

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸಲಹೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕರು ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಕರೆ ನೀಡಿದ್ದಾರೆ.

ಹಾವೇರಿ: ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ರಾಜ್ಯದ ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಕರೆ ನೀಡಿದ್ದಾರೆ. ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ಸ್ಥಾಪಿಸಿ, ಪೂಜಿಸಿದ ನಂತರ ಕೆರೆ-ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿರುತ್ತದೆ. ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ ಮತ್ತು ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸುವುದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ ೧೯೭೪ರ ಕಲಂ ೩೩(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಐಪಿಸಿ ಸೆಕ್ಷನ್ ೧೮೬೦ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ ಮತ್ತು ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು. ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ ಮತ್ತು ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು. ಶಬ್ದ ಮಾಲಿನ್ಯ ನಿಯಮದಂತೆ ಧ್ವನಿವರ್ಧಕ, ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟು ಮಾಡುವ ಉಪಕರಣಗಳ ಬಳಕೆಗೆ ಇಲಾಖೆಗಳಿಂದ ಅನುಮತಿ ಪಡೆಯಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಪೆಂಡಾಲ್‌ಗಳಲ್ಲಿ ಬಲೂನ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‌ಗಳು, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಥರ್ಮೊಕೋಲ್ ಬಳಸದಂತೆ ನಿಗವಹಿಸಬೇಕು ಎಂದು ಅವರು ತಿಳಿಸಿದ್ದಾರೆ. ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು ಮತ್ತು ಲೋಟಗಳು, ಫೋರ್ಕಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್‌ಬಾಕ್ಸಗಳು, ಆಮಂತ್ರಣ ಪತ್ರಗಳು, ಸಿಗರೇಟ್ ಪ್ಯಾಕೆಟ್‌ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಮಂಗಳು ಮತ್ತು ಪ್ಲಾಸ್ಟಿಕ್ ಸ್ಟಿಕರ್‌ಗಳನ್ನು ಬಳಸದಂತೆ ನಿಗಾವಹಿಸಬೇಕು. ಈ ನಿಯಮಗಳ ಉಲ್ಲಂಘನೆಯು ಶಿಕ್ಷಾರ್ಹ ಅಪರಾಧವಾಗಿದ್ದು, ದಂಡವನ್ನು ಸಹ ಒಳಗೊಂಡಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.