ಹಾವೇರಿ ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ವಿದ್ಯಾರ್ಥಿಗಳ ೯ನೇ ಜಿಲ್ಲಾ ಸಮ್ಮೇಳನ ನಡೆಯಿತು.
ಹಾವೇರಿ: ಶಿಕ್ಷಣ, ಉದ್ಯೋಗ, ಆರೋಗ್ಯಕ್ಕಾಗಿ, ಅನ್ಯಾಯ, ಭ್ರಷ್ಟಾಚಾರ, ಕೋಮುವಾದ ವಿರುದ್ಧವಾಗಿ ವಿದ್ಯಾರ್ಥಿ-ಯುವಜನರು ಐಕ್ಯ ಹೋರಾಟಕ್ಕೆ ಮುಂದಾಗಬೇಕು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ವಿದ್ಯಾರ್ಥಿಗಳ ೯ನೇ ಜಿಲ್ಲಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶವು ಸ್ವಾತಂತ್ರ್ಯ ಪಡೆದು ೮೦ ವರ್ಷ ಆದರೂ ಇಂದಿಗೂ ಶಿಕ್ಷಣ, ಉದ್ಯೋಗ, ಆರೋಗ್ಯಕ್ಕಾಗಿ ವಿದ್ಯಾರ್ಥಿ - ಯುವಜನರು ಪರದಾಡುವಂತಹ ಪರಿಸ್ಥಿತಿ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರುದ್ಯೋಗದ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿವೆ. ಸರ್ಕಾರದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದೆ ನಿರುದ್ಯೋಗಿ ಯುವಕರ ಜೀವನಕ್ಕೆ ಸಹಾಯಕಾರಿ ಆಗುತ್ತಿಲ್ಲ ಎಂದು ಕಿಡಿ ಕಾರಿದರು.ಶಿಕ್ಷಣ ಇಲಾಖೆಯಲ್ಲಿ ಎಷ್ಟೋ ಹುದ್ದೆಗಳು ಭರ್ತಿ ಮಾಡಿಕೊಳ್ಳದ ಕಾರಣ ಇತ್ತ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ನಿರುದ್ಯೋಗಿ ಯುವಕರಿಗೆ ಕೈಗೆ ಉದ್ಯೋಗ ಕೊಡುತ್ತಿಲ್ಲ. ಅದರಿಂದ ವಿದ್ಯಾರ್ಥಿ ಯುವಕರು ಬಲಿಷ್ಠ ಚಳವಳಿ ರೂಪಿಸಬೇಕು ಎಂದರು.
ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಎಸ್ಎಫ್ಐ ದೇಶದ ಅತ್ಯಂತ ದೊಡ್ಡ ವಿದ್ಯಾರ್ಥಿ ಚಳವಳಿ. ಹಾವೇರಿ ಜಿಲ್ಲೆಯಲ್ಲಿ ಪ್ರಾರಂಭವಾಗಿದ ದಿನದಿಂದ ಇಲ್ಲಿಯವರೆಗೆ ಸರ್ಕಾರಿ ಶಾಲಾ-ಕಾಲೇಜು ಹಾಸ್ಟೆಲ್ ಸ್ಥಾಪನೆಗಾಗಿ ವಿದ್ಯಾರ್ಥಿಗಳ ಸಮಸ್ಯೆಗಳ ವಿರುದ್ಧ ನಿರಂತರ ಹೋರಾಟ ರೂಪಿಸಲಾಗಿದೆ ಎಂದರು.ಎಸ್ಎಫ್ಐ ರಾಜ್ಯಾಧ್ಯಕ್ಷ ಶಿವಪ್ಪ ಅಂಬ್ಲಿಕಲ್, ನೂತನ ಜಿಲ್ಲಾಧ್ಯಕ್ಷ ಅರುಣಕುಮಾರ್ ನಗವತ್ ಮಾತನಾಡಿದರು. ಶಂಭುಲಿಂಗ ಸವದತ್ತಿ, ಶೋಭಾ ದೇವರಮನೆ, ಸಿಂಧು ತಳವಾರ, ಪರಶುರಾಮ ಎಸ್., ವೀರನಗೌಡ, ದೀಪಾ, ಶರಣು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಚೈತ್ರಾ ಕೊರವರ ಕಾರ್ಯಕ್ರಮ ನಿರೂಪಿಸಿದರು.