ಮಡಿಕೇರಿ: ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿರುವಾಗಲೇ ರಾಜ್ಯದ ಜನತೆಗೆ ಸರ್ಕಾರ ನೀಡಲು ಮುಂದಾಗಿರುವ ಶಾಶ್ವತ ವಾಸಸ್ಥಳ ಪ್ರಮಾಣ ಪತ್ರ ತೀವ್ರ ವಿವಾದಕ್ಕೀಡಾಗಿದೆ. ಈ ವಿಚಾರವನ್ನು ಚುನಾವಣಾ ಆಯೋಗದ ವಿವೇಚನೆಗೆ ಬಿಡಬೇಕು. ಜನರಿಗೆ ಅನುಕೂಲವಾಗುವಂತೆ ಆಯೋಗವೇ ಸೂಕ್ತ ಆದೇಶ ಹೊರಡಿಸಲಿ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಹೇಳಿದರು.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಿಂದ ರಾಜ್ಯದ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳಬಾರದು. ಈ ಉದ್ದೇಶಕ್ಕಾಗಿ ಅರ್ಹರಿಗೆ ವಾಸಸ್ಥಳ ದೃಢೀಕರಣ ಪ್ರಮಾಣಪತ್ರ ನೀಡಲಾಗುತ್ತಿದ್ದು, ತಹಸೀಲ್ದಾರ್ ಕಚೇರಿಗೆ ಅಲೆದಾಡುವ ಸಾರ್ವಜನಿಕರ ತೊಂದರೆ ತಪ್ಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಪಿಆರ್‌ಸಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರಾದಿಯಾಗಿ ನಾಮನಿರ್ದೇಶಿತ ಸದಸ್ಯರ ೨ ವರ್ಷದ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೊಸ ನೇಮಕಾತಿಗೆ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಹೊಸಬರ ನೇಮಕವಾಗುವವರೆಗೂ ಹಾಲಿ ಪದಾಧಿಕಾರಿಗಳೇ ಮುಂದುವರಿಯಲಿದ್ದಾರೆ ಎಂದು ಧರ್ಮಜಾ ಉತ್ತಪ್ಪ ತಿಳಿಸಿದರು.ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಬಿಎಲ್‌ಒ, ಬಿಎಲ್‌ಎಗಳಿಗೆ ಸೂಕ್ತ ತರಬೇತಿ ಸಿಕ್ಕಿಲ್ಲ ಎಂಬ ಮಾಹಿತಿ ಇದೆ. ಈ ಬಗ್ಗೆ ನಿಗಾ ವಹಿಸಬೇಕು. ಕೆಲವೊಂದು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು.ಎಸ್‌ಐಆರ್ ಎನ್ಯುಮರೇಷನ್ ಫಾರಂ ಭರ್ತಿ ಮಾಡುವ ವಿಧಾನಗಳ ಕುರಿತು ಪಕ್ಷದ ಮುಖಂಡ ತೆನ್ನೀರ ಮೈನಾ ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಕೊಲ್ಯದ ಗಿರೀಶ್, ಹಂಸ, ಸೂರಜ್ ಹೊಸೂರು ಹಾಜರಿದ್ದರು.