ಫಲಿತಾಂಶ ಸುಧಾರಣೆಗೆ ಮುತುವರ್ಜಿವಹಿಸಿ

| Published : May 23 2025, 12:55 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಶಿಕ್ಷಣ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆಯು ಹೆಚ್ಚಿನ ಮುತುವರ್ಜಿ ವಹಿಸಿ ಶ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯ ಶಿಕ್ಷಣ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆಯು ಹೆಚ್ಚಿನ ಮುತುವರ್ಜಿ ವಹಿಸಿ ಶ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ-೨ರ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಈ ಬಾರಿ ಜಿಲ್ಲೆಯ ಫಲಿತಾಂಶ ಅತ್ಯಂತ ಕಳಪೆ ಮಟ್ಟದಲ್ಲಿ ಬಂದಿದ್ದು, ಇದನ್ನು ನಾವೆಲ್ಲರೂ ಗಂಭೀರವಾಗಿ ಪರಿಗಣಿಸಬೇಕಾಗಿದೆ. ೮ನೇ ತರಗತಿಯಿಂದ ೧೦ ತರಗತಿಯವರೆಗೂ ಒಂದೇ ತರನಾಗಿ ಹೋಲುವಂತಹ ವಿಷಯಾಧಾರಿತ ಪಠ್ಯ ಪುಸ್ತಕಗಳಿರುತ್ತವೆ. ಮಕ್ಕಳಿಗೆ ಶಿಕ್ಷಕರು ಪ್ರತಿನಿತ್ಯ ಅವರ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಭಯಮುಕ್ತ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು. ನಿರಂತರವಾಗಿ ಪುನರಾವರ್ತನೆ ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಿ, ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹೆಚ್ಚು ಗಮನ ನೀಡಬೇಕು. ಫಲಿತಾಂಶ ವೃದ್ಧಿಗಾಗಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಆದ್ಯತೆ ಮೇಲೆ ಗಮನ ಹರಿಸಬೇಕು ಎಂದು ಹೇಳಿದರು.

ಪ್ರಸಕ್ತ ವರ್ಷ ಪರೀಕ್ಷೆಗಳು ಅತ್ಯಂತ ಪಾರದರ್ಶಕ ಹಾಗೂ ನಕಲು ಮುಕ್ತವಾಗಿ, ಯಾವುದೇ ತೊಂದರೆಯಾಗದೇ ಜರುಗಿದ್ದು ಸಂತಸ ತಂದಿದೆ. ಇದೇ ರೀತಿ ಮುಂಬರುವ ಪರೀಕ್ಷೆಗಳು ಸುಸೂತ್ರವಾಗಿ ಜರುಗಿಸಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ತುಂಬಾ ಕಳಪೆ ಮಟ್ಟದಲ್ಲಿದೆ. ಇದು ಕಳವಳಕಾರಿ ವಿಷಯವಾಗಿದೆ. ಶಿಕ್ಷಕರು ಮಕ್ಕಳಿಗೆ ಪಾಠ ಮಡುವಾಗ ಪ್ರಿತಿ, ವಿಶ್ವಾಸ, ಸಹನೆಯಿಂದ ಪಾಠ ಮಾಡಬೇಕು. ಮಕ್ಕಳು ಮನೆಯಲ್ಲಿ ವಿದ್ಯಾಭ್ಯಾಸದೆಡೆಗೆ ತೊಡಗಿಕೊಳ್ಳುವಂತೆ ಪಾಲಕರು ಕೂಡ ಮಕ್ಕಳತ್ತ ಗಮನ ಹರಿಸಬೇಕು. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಯಾವುದೇ ಗೊಂದಲಕ್ಕೀಡಾಗದಂತೆ ಸುಸೂತ್ರವಾಗಿ ನಡೆಸಲಾಗಿದೆ. ಅದೇ ರೀತಿ ಮುಂದಿನ ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆಯಲು ಪೊಲೀಸ್ ಇಲಾಖೆ ಎಲ್ಲ ರೀತಿ ಸಹಾಯ ಸಹಕಾರ ನೀಡಲಿದೆ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಟಿ.ಎಸ್ ಕೊಲ್ಹಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಮುಖ್ಯ ಯೊಜನಾಧಿಕಾರಿ ನಿಂಗಪ್ಪ ಗೋಠೆ, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಪರಶುರಾಮ ಹಿಟ್ನಳ್ಳಿ, ಶಿಕ್ಷಣ ಇಲಾಖೆಯ ಹಿರಿಯ ಉಪನ್ಯಾಸಕಿ ತಿ.ಕುಲಕರ್ಣಿ, ತಾಲೂಕು ಬಿಇಒಗಳು, ಮಾರ್ಗಾಧಿಕಾರಿಗಳು, ಖಜಾನೆ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರು, ವಲಯ ನಿರೀಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.