ನಿಮ್ಮೆಲ್ಲರ ಅಭಿಮಾನಕ್ಕೆ ನಾನು ಋಣಿಯಾಗಿದ್ದೇನೆ. ಮುಂದಿನ 2028 ರಲ್ಲಿಯೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಂಡಿತ. ಕೊಡಗಿಗೆ ಪ್ರತ್ಯೇಕವಾದ ಬೃಹತ್ ಯೋಜನೆ ನೀಡಲು ಬದ್ಧನಾಗಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಮಡಿಕೇರಿ: ನಿಮ್ಮೆಲ್ಲರ ಅಭಿಮಾನಕ್ಕೆ ನಾನು ಋಣಿಯಾಗಿದ್ದೇನೆ. ಮುಂದಿನ 2028 ರಲ್ಲಿಯೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಂಡಿತ. ಕೊಡಗಿಗೆ ಪ್ರತ್ಯೇಕವಾದ ಬೃಹತ್ ಯೋಜನೆ ನೀಡಲು ಬದ್ಧನಾಗಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಮಡಿಕೇರಿಯಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಭಾಗಮಂಡಲದ ಕಾವೇರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ರಾಜ್ಯಕ್ಕೆ ಉತ್ತಮ ಮಳೆ, ಬೆಳೆ, ಸಮೃದ್ಧಿ ಮತ್ತು ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು.

ನಿಮ್ಮೆಲ್ಲರ ಪ್ರಾರ್ಥನೆ ಫಲಿಸಿದೆ. ನಿಮ್ಮ ಆಸೆಯಂತೆ ಗುರು-ಹಿರಿಯರು, ಪಕ್ಷದ ಆಶೀರ್ವಾದದಿಂದ ನಾನು ಈ ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಮಡಿಕೇರಿ ಶಾಸಕರು ಹಾಗೂ ಆತ್ಮೀಯ ಸ್ನೇಹಿತ ಡಾ. ಮಂತರ್ ಗೌಡ ಸೇರಿದಂತೆ ನೀವೆಲ್ಲರೂ ಇಂದು ಭವ್ಯವಾದ ಸ್ವಾಗತ ನೀಡಿದ್ದೀರಿ ಎಂದು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಎ.ಎಸ್. ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಇಬ್ಬರೂ ಸೇರಿ ಕೊಡಗಿಗೆ ದೊಡ್ಡ ಶಕ್ತಿ ತಂದು ಕಾಂಗ್ರೆಸ್ ಪಕ್ಷವನ್ನು ಪ್ರಬಲಗೊಳಿಸಿದ್ದಾರೆ ಎಂದು ಶ್ಲಾಘಿಸಿದರು. ನಾನು ನಿಮ್ಮೆಲ್ಲರ ಪ್ರತಿನಿಧಿಯಾಗಿ, ನಿಮ್ಮ ಶಾಸಕರೊಂದಿಗೆ ಸೇರಿ ಈ ಜಿಲ್ಲೆಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕ ಯೋಜನೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಸಾವಿರಾರು ಕಾರ್ಯಕರ್ತರು ಡೊಳ್ಳು ಕುಣಿತದೊಂದಿಗೆ ಸಿಎಂಗೆ ಸ್ವಾಗತ ಕೋರಿದರು. ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಅಭಿನಂದನೆ ಸಲ್ಲಿಸಲಾಯಿತು.