ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವತೋಮುಖ ಅಭಿವೃದ್ಧಿ ಹಾಗೂ ಆಡಳಿತ ಸುಧಾರಣೆಗೆ ರಾಜ್ಯ ಸರ್ಕಾರ ಸದಾ ಸಿದ್ಧವಾಗಿದ್ದು, ಎಂತಹದೇ ಸವಾಲುಗಳಿದ್ದರೂ ಬದ್ಧತೆಯಿಂದ ಕೆಲಸ ಮಾಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವತೋಮುಖ ಅಭಿವೃದ್ಧಿ ಹಾಗೂ ಆಡಳಿತ ಸುಧಾರಣೆಗೆ ರಾಜ್ಯ ಸರ್ಕಾರ ಸದಾ ಸಿದ್ಧವಾಗಿದ್ದು, ಎಂತಹದೇ ಸವಾಲುಗಳಿದ್ದರೂ ಬದ್ಧತೆಯಿಂದ ಕೆಲಸ ಮಾಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ತಿಳಿಸಿದರು.ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಯಿಂದ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗುರುವಾರ ಮಾತನಾಡಿದ ಅವರು. ಕಳೆದ 13 ವರ್ಷಗಳಲ್ಲಿ ಈ ಭಾಗದ ಅಭಿವೃದ್ಧಿಗೆ 30 ಸಾವಿರ ಕೋಟಿ ರೂ. ಅಧಿಕ ಅನುದಾನ ಹರಿದುಬಂದಿದೆ. ಪ್ರಸಕ್ತ ಸರ್ಕಾರವು ಕಳೆದ 40 ತಿಂಗಳುಗಳಲ್ಲಿ ₹1,45,000 ಕೋಟಿಗೂ ಹೆಚ್ಚು ಹಣವನ್ನು ಗ್ಯಾರಂಟಿ ಯೋಜನೆಗಳು ಸೇರಿದಂತೆ ಮೂಲಭೂತ ಸೌಕರ್ಯ ಹಾಗೂ ಜನರ ಕಲ್ಯಾಣಕ್ಕಾಗಿ ನೀಡಿದೆ. ಇದಲ್ಲದೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಡಿ ಬರುವ 7 ಜಿಲ್ಲೆಗಳು, 41 ವಿಧಾನಸಭಾ ಕ್ಷೇತ್ರಗಳು, 50 ತಾಲೂಕುಗಳು ಹಾಗೂ ಸುಮಾರು 1.12 ಕೋಟಿ ಜನರ ಅಭಿವೃದ್ಧಿಗಾಗಿ 18,000 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ ಎಂದರು.
ಅಕ್ಷರ ಆವಿಷ್ಕಾರದಡಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಶಾಲೆ) ಸ್ಥಾಪನೆ, ಶಿಕ್ಷಣ ಕ್ಷೇತ್ರ, ಆರೋಗ್ಯ ಹಾಗೂ ಉದ್ಯೋಗ ಆವಿಷ್ಕಾರದಡಿ ನೂರಾರು ಕೋಟಿ ಅನುದಾನ ಬಿಡುಗಡೆ,ಅಲ್ಲದೆ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂತರ್ಜಲ ಅಭಿವೃದ್ಧಿಗೆ ಈಗಾಗಲೇ ₹200 ಕೋಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚುವರಿಯಾಗಿ 250 ಕೋಟಿ ನೀಡಲಾಗುವುದು. ಅಲ್ಲದೆ ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ವಿಧಾನಸಭಾ ಕ್ಷೇತ್ರಗಳಲ್ಲಿ ಮೂಲಭೂತ ರಸ್ತೆ ಸೌಕರ್ಯ ಸುಧಾರಿಸಲು ₹1000 ಕೋಟಿ ವೆಚ್ಚದಲ್ಲಿ ಸುಮಾರು 1,150 ಕಿಲೋಮೀಟರ್ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.ಹೊಸ ತಾಲೂಕುಗಳ ಘೋಷಣೆಯಾಗಿ ಸುಮಾರು ಏಳು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ, ಆಡಳಿತ ಯಂತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ಸಾರ್ವ ಜನಿಕ ಸೇವೆಗಳನ್ನು ತಲುಪಿಸಲು ಪ್ರಜಾಸೌಧಗಳ ನಿರ್ಮಾಣ, ಇಂಡಸ್ಟ್ರಿಯಲ್ ಹಬ್ಗಳ ಸ್ಥಾಪನೆ, ಕಲ್ಯಾಣ ಕರ್ನಾಟಕ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಪ್ರೊಫೆಸರ್ ಗೋವಿಂದರಾವ್ ಸಮಿತಿಯಿಂದ ಮಹತ್ವದ ವರದಿ ಸಲ್ಲಿಕೆ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲು ಡಾ.ಛಾಯಾ ದೇವಗಾಂವ್ಕರ್ ಅವರ ನೇತೃತ್ವ ದಲ್ಲಿ ಶಿಕ್ಷಣ ತಜ್ಞರ ಸಮಿತಿ ರಚಿಸಲಾಗಿದ್ದು, ಅದರ ವರದಿಯೂ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಕಳೆದ 100 ದಿನಗಳ ಸಾಧನೆ ಹಾಗೂ ಮುಂದಿನ 500 ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳ ಕುರಿತು ದೃಢ ಸಂಕಲ್ಪ ಕಾರ್ಯಕ್ರಮದಲ್ಲಿ ಚರ್ಚಿಸಿ, ಕಾರ್ಯತಂತ್ರ ರೂಪಿಸಲಾಗಿದೆ ಎಂದು ವಿವರಿಸಿದರು.ಈ ವೇಳೆ ಪಥ ಸಂಚಲನದಲ್ಲಿ ಭಾಗವಹಿಸಿ ಪೊಲೀಸ್ ಸೇರಿದಂತೆ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಭೋಸರಾಜು, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಪಂ ಸಿಇಒ ಈಶ್ವರ್ ಕಾಂದೂ, ಎಸ್ಪಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ, ಮುಖಂಡರಾದ ಕೆ.ಶಾಂತಪ್ಪ, ಜಯಣ್ಣ, ಸೇರಿ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಸಂಘಟನೆಯ ಮುಖಂಡರು, ವಿದ್ಯಾರ್ಥಿಗಳು ಇದ್ದರು.