- ಶಿಕ್ಷಕರ ಅಹವಾಲುಗಳಿಗೆ ಬಿಇಒ ಭರವಸೆ । ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ‘ಗುರು ಸ್ಪಂದನ’ ಕಾರ್ಯಕ್ರಮಕನ್ನಡಪ್ರಭ ವರ್ತೆ ಕಮಲನಗರ

ಶಿಕ್ಷಕರ ವೃತ್ತಿ ಬದುಕಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ವಿವಿಧ ಆಡಳಿತಾತ್ಮಕ ವಿಚಾರಗಳ ಕುರಿತು ನೇರವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಗುರುಸ್ಪಂದನ ಕಾರ್ಯಕ್ರಮ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಔರಾದ್‌ (ಬಿ) ಕ್ಷೇತ್ರ ಶಿಕ್ಷಣಾಧಿಕಾರಿ ವಾಗಂಬರ ಗಾಯಕವಾಡ ಹೇಳಿದರು.

ಅವರು ಕಮಲನಗರ ಪಟ್ಟಣದ ಕರ್ನಾಟಕ ಪಬ್ಲಿಕ್‌ ಶಾಲೆಯ ಸಭಾಂಗಣದಲ್ಲಿ ಇತ್ತೀಚೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಆಯೋಜಿಸಿದ್ದ ಗುರುಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಕರು ಎದುರಿಸುತ್ತಿರುವ ಬಡ್ತಿ, ಗಳಿಕೆ ರಜೆ, ನಾಮಿನಿ, ಟೈಮ್‌ಬಾಂಡ್‌ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಅವುಗಳನ್ನು ನಿಯಮಾನುಸಾರ ಶೀಘ್ರವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಿಕ್ಷಕರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ನಿರ್ವಹಿಸುವದರ ಜೊತೆಗೆ, ಇಲಾಖೆಯೊಂದಿಗೆ ಉತ್ತಮ ಸಮನ್ವಯ ಸಾಧಿಸಬೇಕು ಎಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಂಢರಿ ಆಡೆ ಮಾತನಾಡಿ, ಶಿಕ್ಷಕರ ವಿವಿಧ ಸಮಸ್ಯೆಗಳನ್ನು ಗುರುಸ್ಪಂದನದ ಮೂಲಕ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದು, ಅವುಗಳಿಗೆ ಶಾಶ್ವತ ಪರಿಹಾರ ದೊರೆಯುವ ನಿಟ್ಟಿನಲ್ಲಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.


ತಾಲೂಕು ಅಧ್ಯಕ್ಷ ವಿಜಯಕುಮಾರ ನುದನೂರೆ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಇಲಾಖೆ ತ್ವರಿತವಾಗಿ ಸ್ಪಂದಿಸಿದರೆ ಕಾರ್ಯನಿರ್ವಹಣೆಯಲ್ಲಿ ಮತ್ತಷ್ಟು ಉತ್ಸಾಹ ಮೂಡಲಿದೆ. ಹೀಗಾಗಿ ಬಾಕಿ ಇರುವ ಸಮಸ್ಯೆಗಳನ್ನು ಆಧ್ಯತೆಯ ಮೇರೆಗೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಪಬ್ಲಿಕ್‌ ಶಾಲೆಯ ಮುಖ್ಯಶಿಕ್ಷಕ ಲಿಂಗಾನಂದ ಮಹಾಜನ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಮಹಾಜನ, ಶಾಂತಕುಮಾರ ಗುಡಮೆ, ರಾಜಕುಮಾರ ವಡಗಾವೆ, ದಿಲೀಪ ವಾನಖೇಡೆ, ಶಿಲ್ಪಾ ಚಿಂಚೋಳೆ, ಮೀರಾ ಪಾಟೀಲ್‌, ವಿವೇಕಾನಂದ ಢಗೆ, ರೋಹಿದಾಸ ಮೇತ್ರೆ, ಶಿಕ್ಷಣ ಇಲಾಖೆಯ ಸಿಬ್ಬಂದಿ ಗುರುಸಿದ್ದಯ್ಯ, ರವಿರಾಜ, ಶಿವಕುಮಾರ ಶಿಂಧೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.