ತುಮಕೂರು: ಜಿಲ್ಲೆಯ ಶಿರಾ ತಾಲೂಕು ಮಾರನಗೆರೆ ಗೊಲ್ಲರಹಟ್ಟಿಯಲ್ಲಿ ವಿಷಪೂರಿತ ಆಹಾರ ಸೇವಿಸಿ 32 ಕುರಿ ಹಾಗೂ 2 ಮೇಕೆಗಳು ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಸಂತ್ರಸ್ತ ಮಾಲೀಕರಾದ ಬಲರಾಮ ಬಿನ್ ಮಾರಣ್ಣ ಅವರಿಗೆ ಪರಿಹಾರ ಹಣ ಮಂಜೂರಾತಿ ಆದೇಶ ಪತ್ರವನ್ನು ನೀಡಿದರು. ನಗರದ ಸರ್ಕಾರಿ ಪ್ರವಾಸಿ ಮಂದಿರದಲ್ಲಿಂದು ಮಾಲೀಕನಿಗೆ ಪರಿಹಾರ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅನುಗ್ರಹ ಕೊಡುಗೆ ಯೋಜನೆಯಡಿ ತಲಾ ಒಂದು ಕುರಿ, ಮೇಕೆಗೆ 7,500 ರು.ಗಳಂತೆ 2,55,000 ರು.ಗಳ ಪರಿಹಾರ ಆದೇಶ ಪತ್ರವನ್ನು ನೀಡಲಾಯಿತು. ಜಿಲ್ಲಾಡಳಿತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಕೂಡಲೇ ಸ್ಪಂದಿಸಿ ಸಂತ್ರಸ್ತ ಮಾಲೀಕರಿಗೆ ಪರಿಹಾರ ನೀಡಲು ಕ್ರಮವಹಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಹೆಚ್.ಎಂ. ಶಿವಪ್ರಸಾದ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಜಿಲ್ಲಾ ಅನುಷ್ಠಾನಾಧಿಕಾರಿ ಡಾ. ಮೋಹನ್ ಹಾಗೂ ಶಿರಾ ಮುಖ್ಯ ವೈದ್ಯಾಧಿಕಾರಿ ಡಾ. ಸಂಪತ್‌ಕುಮಾರ್ ಹಾಜರಿದ್ದರು.