ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸಲೆಂದೇ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ

| Published : Mar 24 2024, 01:35 AM IST / Updated: Mar 24 2024, 03:02 PM IST

ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸಲೆಂದೇ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡಿದರೆ, ಇನ್ನೊಂದಡೆ ಕಡಿಮೆ ಸ್ಥಾನ ಗಳಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಜೀನಾಮೆ ಕೊಡಬೇಕಾಗಬಹುದು ಎಂದರು. 

ಬಿಜೆಪಿ ಮೇಲೆ ಯಡಿಯೂರಪ್ಪ ಕುಟುಂಬದ ಹಿಡಿತ ತಪ್ಪಿಸಲೆಂದೇ ನನ್ನ ಸ್ಪರ್ಧೆ ಎಂದ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ರಾಘವೇಂದ್ರ ಸೋಲುತ್ತಾರೆ. 

ಅಲ್ಲಿಗೆ ಪಕ್ಷದ ಮೇಲಿನ ಯಡಿಯೂರಪ್ಪ ಕುಟುಂಬದ ಹಿಡಿತ ಶೇ.30ರಷ್ಟು ಕಡಿಮೆಯಾಗುತ್ತದೆ. ಬಿ. ವೈ.ವಿಜಯೇಂದ್ರ ಅಧ್ಯಕ್ಷ ಸ್ಥಾನದಿಂದ ಇಳಿದರೆ ಶೇ.60 ಹಿಡಿತ ಕಡಿಮೆಯಾಗುತ್ತದೆ. 

ಹಾಗೆಯೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನ ಪಡೆಯುವುದರಿಂದ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಲೆಕ್ಕಾಚಾರ ಮಂಡಿಸಿದರು.

ಗೀತಾ ಡಮ್ಮಿ ಕ್ಯಾಂಡಿಡೇಟ್: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗೀತಾಗೆ ಟಿಕೆಟ್ ಸಿಗಲು ಯಡಿಯೂರಪ್ಪ-ಸಿದ್ದರಾಮಯ್ಯನವರ ಹೊಂದಾಣಿಕೆ ರಾಜಕಾರಣ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. 

ಬಿ. ವೈ.ರಾಘವೇಂದ್ರ ಸುಲಭವಾಗಿ ಗೆಲ್ಲಬೇಕೆಂಬ ಕಾರಣಕ್ಕೆ ದುರ್ಬಲ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕೆ ಇಳಿಸಲಾಗಿದೆ. 

ಗೀತಾ ಶಿವರಾಜ್ ಕುಮಾರ್ ಡಮ್ಮಿ ಕ್ಯಾಂಡಿಡೇಟ್ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳುತ್ತಿದ್ದಾರೆ. ಇದು ನಾನು ಹೇಳುವ ಮಾತಲ್ಲ, ಇದು ಆ ಪಕ್ಷದ ನೊಂದ ಕಾರ್ಯಕರ್ತರ ಮಾತು ಎಂದರು. 

ಇದರಿಂದ ಕಾಂಗ್ರೆಸ್ ನಲ್ಲಿ ಅನೇಕರಿಗೆ ಅಸಮಾಧಾನ ಉಂಟಾಗಿದೆ. ಇವರೆಲ್ಲರೂ ಇದೀಗ ನನಗೆ ಬೆಂಬಲಕ್ಕೆ ನಿಂತಿದ್ದಾರೆ. ನಾನು ರಾಷ್ಟ್ರಭಕ್ತರ ವೇದಿಕೆಯಿಂದ ಸ್ಪರ್ಧಿಸುತ್ತಿದ್ದು, ಸ್ಪರ್ಧೆ ಘೋಷಣೆ ಮಾಡಿದ ಬಳಿಕ ಎಲ್ಲ ಭಾಗಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ.

ಎಲ್ಲ ವಿಧಾನಸಭಾ ಕ್ಷೇತ್ರಕ್ಕೆ ಹೋಗಿದ್ದೇನೆ, ಈ ವೇಳೆಯಲ್ಲಿ ಸಿಕ್ಕ ಬೆಂಬಲ ಅಭೂತಪೂರ್ವ. ನಾನು ಇದನ್ನು ನಿರೀಕ್ಷಿಸಿಯೇ ಇರಲಿಲ್ಲ. 

ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಬೆಂಬಲದ ಮಾತುಗಳ ಆಡುತ್ತಿದ್ದಾರೆ. ರಾಷ್ಟ್ರಭಕ್ತ ಮುಸ್ಲಿಮರು ಕೂಡ ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದು, ನಿತ್ಯ ರಾಜ್ಯದ ಎಲ್ಲ ಕಡೆಗಳಿಂದ ದೂರವಾಣಿ ಕರೆಗಳು ಬರುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಅದೃಶ್ಯ ಮತದಾರರು ನನ್ನ ಕೈಹಿಡಿಯಲಿದ್ದಾರೆ ಎಂದರು.

ಅದೃಶ್ಯ ನಾಯಕರ ಬೆಂಬಲ: ನನ್ನ ಜೊತೆಗೆ ಶಿವಮೊಗ್ಗ ನಗರದ ನಗರಪಾಲಿಕೆ ಮಾಜಿ ಸದಸ್ಯರು, ಮಾಜಿ ಮೇಯರ್‌ಗಳು, ಮುಖಂಡರು ಇದ್ದಾರೆ. 

ಕೆಲವರಿಗೆ ಅನಿವಾರ್ಯವಾಗಿ ಇಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಅವರು ಅದೃಶ್ಯ ನಾಯಕರಾಗಿ ನನ್ನ ಜೊತೆಗಿರುತ್ತಾರೆ ಎಂದರು. ಈಗಲೂ ನಾನು ಬಿಜೆಪಿಯಲ್ಲಿಯೇ ಇದ್ದೇನೆ. 

ಮುಂದೆಯೂ ಇರುತ್ತೇನೆ. ಬಿಜೆಪಿ ನನ್ನ ತಾಯಿ. ಕೆಲವರು ತಾಯಿಯಿಂದ ನನ್ನನ್ನು ಬೇರ್ಪಡಿಸಲು ಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗಲ್ಲ ಎಂದರು.

ಗೋಷ್ಠಿಯಲ್ಲಿ ಮಾಜಿ ಮೇಯರ್ ಗಳಾದ ಸುವರ್ಣ ಶಂಕರ್, ಏಳು ಮಲೈ ಬಾಬು ಮತ್ತು ಶಿವಕುಮಾರ್, ಮಾಜಿ ಉಪ ಮೇಯರ್ ಗಳಾದ ಶಂಕರ್ ಗನ್ನಿ, ಲಕ್ಷ್ಮೀನಾಯ್ಕ್, ಮಾಜಿ ಸದಸ್ಯರಾದ ವಿಶ್ವಾಸ್, ಪ್ರಭು ಮತ್ತಿತರರಿದ್ದರು.

ಕಾರ್ಯಕರ್ತರಲ್ಲಿ ಅತೃಪ್ತಿ: ರಾಜ್ಯ ಬಿಜೆಪಿಯಲ್ಲಿ ಹಿಂದುತ್ವದ ಪರವಾಗಿ ನಿಲ್ಲುವವರು ಎಂದರೆ ಬಸನಗೌಡ ಪಾಟೀಲ್ ಯತ್ನಾಳ್, ಸಿ. ಟಿ. ರವಿ, ಪ್ರತಾಪ್ ಸಿಂಹ ಮತ್ತಿತರನ್ನು ಪಕ್ಕಕ್ಕೆ ಸರಿಸಲಾಗುತ್ತಿದೆ. 

ಎಲ್ಲವೂ ಒಂದು ಕುಟುಂದವರೇ ಸೇರಿ ನಿರ್ಧರಿಸುತ್ತಿದ್ದಾರೆ, ಇಡೀ ರಾಜ್ಯದಲ್ಲಿ ಯಡಿಯೂರಪ್ಪ ಕುಟುಂಬ ರಾಜಕಾರಣದಿಂದ ಬೇಸತ್ತ ಲಕ್ಷಾಂತರ ಕಾರ್ಯಕರ್ತರಲ್ಲಿ ಅತೃಪ್ತಿ ಇದೆ. ಇವರ ಪರವಾಗಿ, ಈ ವಿಷಯದ ಪರವಾಗಿ ನಾನು ಸ್ಪರ್ಧಿಸುತ್ತಿದ್ದೇನೆ. ಇವರೆಲ್ಲ ನನ್ನ ಜೊತೆಗಿದ್ದಾರೆ. - ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವ

ಮಾ.26ರಂದು ಸಮಾವೇಶ: ಮಾ. 26ರಂದು ಬೆಳಗ್ಗೆ 11 ಗಂಟೆಗೆ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಭಾಗದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಕರೆಯಲಾಗಿದೆ. 

ಸುಮಾರು ೪ ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಮಾ.28ರಂದು ತಮ್ಮ ಚುನಾವಣಾ ಕಚೇರಿ ಮನೆಯ ಆವರಣದಲ್ಲಿ ಉದ್ಘಾಟನೆಗೊಳ್ಳಲಿದ್ದು, ವಿಶೇಷ ವ್ಯಕ್ತಿಯೊಬ್ಬರು ಹಾಗೂ ಐದು ಮಂದಿ ಮುತ್ತೈದೆಯರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.