ಸ್ಪರ್ಧೆಗಳಿಂದ ರಚನಾತ್ಮಕ ಮನೋಭಾವ: ಸ್ವಾಮೀಜಿ

| Published : Nov 21 2025, 02:00 AM IST

ಸ್ಪರ್ಧೆಗಳಿಂದ ರಚನಾತ್ಮಕ ಮನೋಭಾವ: ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಸಹಕಾರಿಯಾಗಿದೆ ಎಂದು ಎಲೆರಾಂಪುರ ಕುಂಚಿಟಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಹನುಮಂತನಾಥ ಸ್ವಾಮಿಗಳು ನುಡಿದರು.

ಕನ್ನಡಪ್ರಭ ವಾರ್ತೆ ಶಿರಾ

ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಸಹಕಾರಿಯಾಗಿದೆ ಎಂದು ಎಲೆರಾಂಪುರ ಕುಂಚಿಟಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಹನುಮಂತನಾಥ ಸ್ವಾಮಿಗಳು ನುಡಿದರು.

ಅವರು ಬುಧವಾರ ತಾಲೂಕಿನ ಕಟಾವೀರನಹಳ್ಳಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಕೆ ಮಲ್ಲಣ್ಣ ಮೆಮೋರಿಯಲ್ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಳ್ಳಂಬೆಳ್ಳ ಹೋಬಳಿ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ ಸೃಜನಾತ್ಮಕ ಕೌಶಲ್ಯ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಶಿಕ್ಷಕರು ತರಗತಿ ವೇಳೆಯಲ್ಲಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಭವಿಷ್ಯದಲ್ಲಿ ಉತ್ತಮ ಪ್ರತಿಭಾನ್ವಿತ ವ್ಯಕ್ತಿಯಾಗಿ ಹೊರಹೊಮ್ಮಲು ಸಹಕರಿಸಬೇಕು. ತೀರ್ಪುಗಾರರು ಎಲ್ಲಾ ಮಕ್ಕಳನ್ನು ಸಮಾನವಾಗಿ ಕಾಣುವ ಮೂಲಕ ಪ್ರತಿಭೆ ಇರುವ ಮಕ್ಕಳನ್ನು ತಾಲ್ಲೂಕು ಮಟ್ಟಕ್ಕೆ ಕಳಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರಂಗನಾಥ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಪ್ರೊ. ಕೆ ಚಂದ್ರಣ್ಣ ಅಧ್ಯಕ್ಷತೆ ವಹಿಸಿದ್ದರು. ಇಸಿಓ ನಾಗಭೂಷಣ್, ಬಸವರಾಜು, ಪಂಜಿಗಾನಹಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆರ್ ರಾಮರಾಜ್, ಮಲ್ಲಣ್ಣ ಮೆಮೋರಿಯಲ್ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಕಲ್ಪನಾ, ಪ್ರಾಂಶುಪಾಲರಾದ ನರಸಿಂಹಮೂರ್ತಿ, ಪ್ರಕಾಶ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.