ಸಾರಾಂಶ
ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸ್ಪರ್ಧಾತ್ಮಕ ಶಿಕ್ಷಣದ ಅವಶ್ಯಕತೆ ಇದೆ ಎಂದು ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಸರ್ದಾರ್ ಬಲಬೀರ್ ಸಿಂಗ್ ಹೇಳಿದರು. ಇಲ್ಲಿಯ ಜನಸೇವಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಜನಸೇವಾ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ, ಬೀದರ್
ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸ್ಪರ್ಧಾತ್ಮಕ ಶಿಕ್ಷಣದ ಅವಶ್ಯಕತೆ ಇದೆ ಎಂದು ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಸರ್ದಾರ್ ಬಲಬೀರ್ ಸಿಂಗ್ ಹೇಳಿದರು.ಇಲ್ಲಿಯ ಜನಸೇವಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಜನಸೇವಾ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಆಧುನಿಕ ಯುಗದ ಸವಾಲು ಸಮರ್ಥವಾಗಿ ಎದುರಿಸಲು ಮಕ್ಕಳಿಗೆ ಗುಣಮಟ್ಟದ ಸ್ಪರ್ಧಾತ್ಮಕ ಶಿಕ್ಷಣ ಕೊಡಬೇಕಿದೆ ಎಂದು ತಿಳಿಸಿದರು.ಜನಸೇವಾ ಶಾಲೆ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ನೀಡುತ್ತಿದೆ. ಸಮಾಜಮುಖಿ ಚಟುವಟಿಕೆಗಳಲ್ಲೂ ಸಕ್ರೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಜ್ಯೋತಿರ್ಮಯಾನಂದ ಸ್ವಾಮೀಜಿ ಉದ್ಘಾಟನೆ ನೆರವೇರಿಸಿ, ಮಕ್ಕಳು ಸ್ವಾಮಿ ವಿವೇಕಾನಂದರ ಆದರ್ಶ - ತತ್ವ ಪಾಲಿಸಬೇಕು. ನೂತನ ಸಭಾ ಭವನ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗಲಿದೆ ಎಂದರು.ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ, ಮಕ್ಕಳು ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು. ಪರಿಶ್ರಮದ ಮೂಲಕ ಅದನ್ನು ಸಾಕಾರಗೊಳಿಸಬೇಕು ಎಂದು ನುಡಿದರು.ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಸಂಘ ಸಂಸ್ಥೆಗಳು, ಗಣ್ಯರ ಸಹಕಾರದೊಂದಿಗೆ ಜನಸೇವಾ ಶಾಲೆ ವಿವಿಧ ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿದೆ. ಜಿಲ್ಲೆಯ ಶಿಕ್ಷಣದ ಗುಣಮಟ್ಟ ವೃದ್ಧಿಗೆ ತನ್ನದೆಯಾದ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದರು.ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ, ಗ್ಲೊಬಲ್ ಸೈನಿಕ ಅಕಾಡೆಮಿ ಅಧ್ಯಕ್ಷ ಶರಣಪ್ಪ ಸಿಕೇನಪುರ, ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಸ್ವಾಮಿ, ಉಪಾಧ್ಯಕ್ಷ ಕಾಶಿನಾಥ ಕಾಡವಾದ, ಖಜಾಂಚಿ ಶಿವರಾಜ್ ಹುಡೇದ್, ಆಡಳಿತ ಮಂಡಳಿ ಸದಸ್ಯ ಬಿ.ಎಸ್. ಕುದರೆ, ಶಿವಲಿಂಗಪ್ಪ ಜಲಾದೆ, ಆಡಳಿತಾಧಿಕಾರಿ ಸೌಭಾಗ್ಯವತಿ, ಶಿಕ್ಷಕ ಸತೀಶಕುಮಾರ,. ಪ್ರೌಢಶಾಲೆ ಮುಖ್ಯಶಿಕ್ಷಕ ರಾಹುಲ್ ಮತ್ತಿತರರು ಇದ್ದರು.