ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಿ: ಸಚಿವ ಕೆ. ವೆಂಕಟೇಶ್

| Published : Sep 13 2025, 02:04 AM IST

ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಿ: ಸಚಿವ ಕೆ. ವೆಂಕಟೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ಆಭಿವೃದ್ಧಿ ಕಾಮಗಾರಿಗಳ ವಿವರ ಪಡೆದ ಜಿಲ್ಲಾ ಉಸ್ತುವಾರಿ ಸಚಿವ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ವೆಂಕಟೇಶ್ ಅವರು ಸೂಚಿಸಿದರು.

ಬೆಂಗಳೂರಿನ ವಿಕಾಸಸೌಧದ ಮೂರನೇ ಮಹಡಿಯ ಸಭಾಂಗಣದಲ್ಲಿ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ಆಭಿವೃದ್ಧಿ ಕಾಮಗಾರಿಗಳ ವಿವರ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು 4,585 ಲಕ್ಷ ರು. ವೆಚ್ಚದಲ್ಲಿ ಮಹದೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಕೈಗೊಂಡಿರುವ ಸರತಿ ಸಾಲಿನ ಸಂಕಿರ್ಣ ನಿರ್ಮಾಣದ ಬಾಕಿ ಕೆಲಸವನ್ನು ಬೇಗನೆ ಮುಗಿಸಬೇಕು. ಕಟ್ಟಡಕ್ಕೆ ಬಣ್ಣ ಬಳಿಯುವ, ಕಾರಿಡಾರ್‌ಗಳಿಗೆ ಗ್ರಾನೈಟ್ ಫ್ಲೋರಿಂಗ್ ಇತರೆ ಬಾಕಿ ಕೆಲಸಗಳನ್ನು ವಿಳಂಬ ಮಾಡದೇ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಕ್ಷೇತ್ರದ ಆವರಣದ ವ್ಯಾಪ್ತಿಯಲ್ಲಿ 935 ಲಕ್ಷ ರು. ವೆಚ್ಚದಲ್ಲಿ 6 ವಿವಿಧ ಕೂಡು ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಶೀಘ್ರವೇ ಪೂರ್ಣ ಮಾಡಬೇಕು. ದಾಸೋಹ ಭವನದ ಎದುರು ಭಾಗದಲ್ಲಿ ನಿರ್ಮಿಸಲಾಗುತ್ತಿರುವ ಶೌಚಾಲಯ ಹಾಗೂ ಸ್ನಾನ ಗೃಹ ಕಾಮಗಾರಿಯ ಪ್ರಗತಿಯು ವೇಗದಿಂದ ಆಗಬೇಕು. ಬಸ್ ನಿಲ್ದಾಣದ ಹತ್ತಿರದಲ್ಲಿ ಕೈಗೆತ್ತಿಕೊಂಡಿರುವ ಸ್ನಾನಗೃಹ, ಶೌಚಾಲಯ ನಿರ್ಮಾಣ ಕಾಮಗಾರಿಯನ್ನೂ ಸಹ ತ್ವರಿತವಾಗಿ ಮುಗಿಸಬೇಕು ಎಂದು ಸಚಿವರು ತಿಳಿಸಿದರು.

ಭಕ್ತಾದಿಗಳ ವಾಸ್ತವ್ಯಕ್ಕಾಗಿ ನಿರ್ಮಾಣ ಹಂತದಲ್ಲಿರುವ ಡಾರ್ಮೆಟರಿ ಕಟ್ಟಡದ ನಿರ್ಮಾಣ ಕಾರ್ಯ ಪ್ರಗತಿಯು ವೇಗವಾಗಿ ಸಾಗಬೇಕು. ಕಾಲಮಿತಿಯೊಳಗೆ ಕೆಲಸ ಪೂರ್ಣಗೊಳಿಸಿ ಭಕ್ತಾಧಿಗಳ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಬೇಕು. ದೀಪದಗಿರಿ ಒಡ್ಡುವಿನಲ್ಲಿ ಮಲೆಮಹದೇಶ್ವರಸ್ವಾಮಿ ಪ್ರತಿಮೆಯ ಹೊರ ಆವರಣದ ಸುತ್ತಲು ತಡೆಗೋಡೆ ನಿರ್ಮಾಣದ ಕೆಲಸವು ಆದಷ್ಟು ಶೀಘ್ರ ಆಗಬೇಕು. ತಾಳಬೆಟ್ಟದಿಂದ ಮಲೆಮಹದೇಶ್ವರಸ್ವಾಮಿ ದೇವಸ್ಥಾನದವರೆಗಿನ ಕಾಲ್ನಡಿಗೆ ಮಾರ್ಗದಲ್ಲಿ ಮೆಟ್ಟಿಲು ನಿರ್ಮಾಣ ಹಾಗೂ ಮೂಲಸೌಕರ್ಯ ಕಲ್ಪಿಸುವ ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.ಶಾಸಕರಾದ ಎಂ.ಆರ್. ಮಂಜುನಾಥ್ ಮಾತನಾಡಿ, ಮಹದೇಶ್ವರಸ್ವಾಮಿಯ ಕ್ಷೇತ್ರದಲ್ಲಿನ ದಾಸೋಹಕ್ಕೆ ದಾನಿಗಳಿಂದ ಹೆಚ್ಚು ಪ್ರಮಾಣದಲ್ಲಿ ತರಕಾರಿ, ಇತರೆ ಸಾಮಗ್ರಿಗಳು ಬರುತ್ತಿದೆ. ಈ ಎಲ್ಲವನ್ನು ಸಂಗ್ರಹಿಸಲು ವಿಶಾಲವಾದ ಕೊಠಡಿಗಳ ಅಗತ್ಯವಿದ್ದು, ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಉತ್ತಮವಾಗಿ ಕಟ್ಟಡವನ್ನು ಉಪಯೋಗಿ ಆಗುವಂತೆ ನಿರ್ಮಿಸಬೇಕಿದೆ. ಕ್ಷೇತ್ರದಲ್ಲಿ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣ ವೇಗವಾಗಿ ನಡೆಯಬೇಕು ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಂ.ವಿ. ವೆಂಕಟೇಶ್ ಅವರು ಮಾತನಾಡಿ, ಉದ್ದೇಶಿತ ದಾಸೋಹ ಭವನದಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವ ಘಟಕವೂ ಇರಬೇಕು. ಅಡುಗೆಗೆ ಬಳಸಿದ ನಂತರ ಉಳಿಯುವ ತ್ಯಾಜ್ಯಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಬೇಕು. ಜೈವಿಕ ಘಟಕವನ್ನು ನಿರ್ಮಾಣದಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು. ಈಗಾಗಲೇ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದರು.ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ, ಕ್ಷೇತ್ರದಲ್ಲಿ ನಿರಾಶ್ರಿತರು ಸಹ ಇದ್ದಾರೆ. ಇವರಿಗೆ ಪುನರ್ವಸತಿ ಕೇಂದ್ರ ತೆರೆಯುವ ಅವಶ್ಯಕತೆ ಇದೆ. ಸಮಾಜ ಕಲ್ಯಾಣ ಇಲಾಖೆಯ ಅನುದಾನದ ನೆರವೂ ಸಹ ಪಡೆದುಕೊಂಡು ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಬೇಕಿದೆ. ಉದ್ದೇಶಿತ ಸುಸಜ್ಜಿತ ದಾಸೋಹ ಭವನಕ್ಕೆ ಪ್ರತ್ಯೇಕ ವಿದ್ಯುತ್ ಹಾಗೂ ಜನರೇಟರ್ ವ್ಯವಸ್ಥೆ ಸಹ ಇರಬೇಕಾಗುತ್ತದೆ ಎಂದರು.

ಸಾಲೂರು ಮಠದ ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮಿಜಿಯವರು ಭಕ್ತಾಧಿಗಳ ಸೌಕರ್ಯ ಕಾಮಗಾರಿ ಸಂಬಂಧ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯನಾರಾಯಣ, ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಇಬ್ರಾಹಿಂ ಮೈಗೂರು, ಚಾಮರಾಜನಗರ ವಿಭಾಗೀಯ ನಿಯಂತ್ರಾಣಾಧಿಕಾರಿ ಅಶೋಕ್ ಕುಮಾರ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಕೇಶವಪ್ರಸಾದ್ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

---------------

12ಸಿಎಚ್‌ಎನ್‌51

ಬೆಂಗಳೂರಿನ ವಿಕಾಸಸೌಧದ ಮೂರನೇ ಮಹಡಿಯ ಸಭಾಂಗಣದಲ್ಲಿ ಶ್ರೀ ಮಲೆಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

-------------