ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಎಸ್‌ಐಆರ್ ಮತದಾರರ ಪರಿಷ್ಕರಣೆ ಕಾರ್ಯವು ಪ್ರಾರಂಭವಾಗಿದ್ದು, ನಿಗದಿತ ಅವಧಿಯೊಳಗೆ ಪಾರದರ್ಶಕವಾಗಿ ಕಾರ್ಯವನ್ನು ನಿರ್ವಹಿಸುವಂತೆ ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮತದಾರರ ನೋಂದಣಾಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್‌ಐಆರ್ ಪ್ರಕ್ರಿಯಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಕೈ ಬಿಟ್ಟು ಹೋಗದಂತೆ ಅನರ್ಹ ಮತದಾರರು ಸೇರ್ಪಡೆಯ ಆಗದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನಾಲಯದಂತೆ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಎಲ್ಲ ಮತದಾರರ ನೋಂದಣಾಧಿಕಾರಿಗಳ ಜತೆ ಸಂವಹನ ನಡೆಸಿ ಕ್ಷೇತ್ರದ ಸಮಸ್ಯೆಗಳಿಗೆ ಸಭೆಯಲ್ಲಿ ಪರಿಹಾರ ಸೂಚಿಸಿದರು. ಮತ್ತು ಈಗಾಗಲೇ ಗುರುತಿಸಿರುವ ಬಿಎಲ್‌ಒ ಸೌಲಭ್ಯ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳೊಂದಿಗೆ ಗಣಕೀಕರಣ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳೊಂದಿಗೆ ಕಾರ್ಯ ನಿರ್ವಹಿಸುವಂತೆ ಹೇಳಿದರು.


ಜಿಲ್ಲಾಧಿಕಾರಿ ಡಾ. ಕುಮಾರ ಅವರು ಜಿಲ್ಲಾ ಎಸ್ ಐಆರ್ ಮತದಾರರ ಪರಿಷ್ಕರಣೆ ಪ್ರಗತಿ ಕುರಿತು ಸವಿವರವಾಗಿ ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್ ಅವರಿಗೆ ಮಾಹಿತಿ ನೀಡಿದರು.

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದ್ದು. ಮನೆ-ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ, ಎನುಮರೇಷನ್ ಅರ್ಜಿಗಳನ್ನು ಭರ್ತಿ ಮಾಡಿಕೊಡುವಂತೆ ತಿಳಿಸಲು ಅಗತ್ಯ ಅರಿವು ಮತ್ತು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

ಬಿಎಲ್‌ಒಗಳು ತಮ್ಮ ನಿಗದಿತ ಪ್ರದೇಶದಲ್ಲಿರುವ ಪ್ರತಿಯೊಬ್ಬ ಮತದಾರರ ಮನೆಗೆ ಖುದ್ದಾಗಿ ಭೇಟಿ ನೀಡಿ, ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಿ ಗುರಿಯನ್ನು ಸಾಧಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿ ಯೋಗೇಶ್ವರ್, ಅಪರ ಜಿಲ್ಲಾ ಚುನಾವಣಾಧಿಕಾರಿ ಬಿ.ಸಿ. ಶಿವನಂದಮೂರ್ತಿ ಹಾಗೂ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಜಿಲ್ಲಾ ಮಟ್ಟದ ತಾಲೂಕು ನೋಡಲ್ ಅಧಿಕಾರಿಗಳು ಮತ್ತು ತಾಲೂಕು ಕಾರ್ಯನಿರ್ವಹಣಾ ಅಧಿಕಾರಿಗಳು ಹಾಜರಿದ್ದರು.