ಔರಾದ್‌ ಸಮಗ್ರ ಅಭಿವೃದ್ಧಿ ಪರಮ ಸಂಕಲ್ಪ: ಶಾಸಕ ಪ್ರಭು ಚವ್ಹಾಣ

| Published : Aug 16 2025, 12:00 AM IST

ಔರಾದ್‌ ಸಮಗ್ರ ಅಭಿವೃದ್ಧಿ ಪರಮ ಸಂಕಲ್ಪ: ಶಾಸಕ ಪ್ರಭು ಚವ್ಹಾಣ
Share this Article
  • FB
  • TW
  • Linkdin
  • Email

ಸಾರಾಂಶ

ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳನ್ನು ಹೊಂದಿರುವ ಔರಾದ (ಬಿ) ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ಈ ದಿಶೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇನೆ ಎಂದು ಶಾಸಕ ಪ್ರಭು ಬಿ.ಚವ್ಹಾಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ಔರಾದ್

ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳನ್ನು ಹೊಂದಿರುವ ಔರಾದ (ಬಿ) ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ಈ ದಿಶೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇನೆ ಎಂದು ಶಾಸಕ ಪ್ರಭು ಬಿ.ಚವ್ಹಾಣ ತಿಳಿಸಿದರು.

ತಾಲ್ಲೂಕು ಆಡಳಿತದಿಂದ ಆಗಸ್ಟ್ 15ರಂದು ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾಜನತೆಯ ಆಶೀರ್ವಾದದಿಂದ ಜನಸೇವೆ ಮಾಡುವ ಅವಕಾಶ ಸಿಕ್ಕಿದೆ. ಅವರ ನಿರೀಕ್ಷೆಯಂತೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದ ಔರಾದ (ಬಿ) ಕ್ಷೇತ್ರ ಅಭಿವೃದ್ಧಿ ಪಥದತ್ತ ಮುನ್ನುಗ್ಗುತ್ತಿದೆ. ಹಿಂದೆ ರಸ್ತೆಗಳೇ ಇರಲಿಲ್ಲ. ನನ್ನ ನಿರಂತರ ಪ್ರಯತ್ನದಿಂದಾಗಿ ಎರಡು ರಾಷ್ಟ್ರೀಯ ಹೆದ್ದಾರಿಗಳಾಗಿವೆ. ಮಾಳೆಗಾಂವ, ಚಿಮ್ಮೇಗಾಂವ ಗ್ರಾಮಗಳ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಪವರ್ ಗ್ರಿಡ್ ಸೆಂಟರ್ ಮಂಜೂರು ಮಾಡಿಸಿದ್ದು, 164 ಎಕರೆಯಲ್ಲಿ 2147 ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದೆ ಎಂದರು.

ಈ ಹಿಂದೆ ಸಚಿವನಾಗಿದ್ದ ಸಂದರ್ಭದಲ್ಲಿ ಕ್ಷೇತ್ರದ 36 ಕೆರೆಗಳನ್ನು ತುಂಬಿಸುವ 560 ಕೋಟಿಯ ಯೋಜನೆಗೆ ಮಂಜೂರಾತಿ ಪಡೆದಿದ್ದು, ಟೆಂಡರ್ ಆಗಿದೆ. ಜಲ ಜೀವನ ಮಿಷನ್ ಯೋಜನೆಗೆ ₹ 240 ಕೋಟಿಗೂ ಹೆಚ್ಚಿನ ಅನುದಾನ ತಂದಿದ್ದು, ಯೋಜನೆಯ ಬಗ್ಗೆ ಸಾಕಷ್ಟು ದೂರುಗಳಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.

ಔರಾದ(ಬಿ) ಪಟ್ಟಣ ಸರ್ವಾಂಗಿಣ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಪಟ್ಟಣಕ್ಕೆ ಮಾಸ್ಟರ್ ಪ್ಲಾನ್ ಮಂಜೂರು ಮಾಡಿಸಿದ್ದೇನೆ. ಟ್ರೀ ಪಾರ್ಕ, ಹೈಟೆಕ್ ಪಶು ಆಸ್ಪತ್ರೆ, ಪದವಿ ಕಾಲೇಜು, ಡಿಪ್ಲೋಮಾ ಕಾಲೇಜು, ಐಟಿಐ ಕಾಲೇಜು, ವಸತಿ ಶಾಲೆಗಳು, ಸುಸಜ್ಜಿತ ಪಟ್ಟಣ ಪಂಚಾಯಿತಿ ಕಟ್ಟಡ, ಆದರ್ಶ ವಿದ್ಯಾಲಯ ದಲ್ಲಿ ಪಿಯಸಿ ಆರಂಭ, ಶಾಲೆ, ಅಂಗನವಾಡಿ ಕಟ್ಟಡ, ರಸ್ತೆ ಸೇರಿದಂತೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಅವಶ್ಯಕವಾದ ಎಲ್ಲ ಕೆಲಸಗಳನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಔರಾದ(ಬಿ) ಪಟ್ಟಣ ಮಾದರಿಯಾಗಿ ಪರಿರ್ತುನೆಯಾಗಲಿದೆ. ಕಮಲನಗರ ತಾಲ್ಲೂಕಿನಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆ ಯುತ್ತಿವೆ ಎಂದು ತಿಳಿಸಿದರು.

ತಹಸೀಲ್ದಾರ್ ಮಹೇಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಪಟ್ಟಣ ಪಂಚಾಯತ ಅಧ್ಯಕ್ಷೆ ಸರುಬಾಯಿ ಘೂಳೆ, ಧೊಂಡಿಬಾ ನರೋಟೆ, ತಾ.ಪಂ ಅಧಿಕಾರಿ ಕಿರಣ ಪಾಟೀಲ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ ರಂಗೇಶ, ಶಿವಕುಮಾರ ಘಾಟೆ, ಡಾ.ಗಾಯತ್ರಿ, ರವೀಂದ್ರ, ಧೂಳಪ್ಪ ಸೇರಿದಂತೆ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪಿಎಸ್‌ಐ ವಾಸೀಮ್ ಪಟೇಲ್ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು.