ಅಯ್ಯಪ್ಪಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗೆ ಖಂಡನೆ

| Published : Dec 03 2023, 01:00 AM IST

ಅಯ್ಯಪ್ಪಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗೆ ಖಂಡನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಅಯ್ಯಪ್ಪ ಸೇವಾ ಸಂಘದ ಸದಸ್ಯರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಸಾಮಾಜಿಕ ಜಾಲತಾಣದಲ್ಲಿ ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಅಯ್ಯಪ್ಪ ಸೇವಾ ಸಂಘದ ಸದಸ್ಯರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಶನಿವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಸಮಾವೇಶಗೊಂಡ ಸದಸ್ಯರು ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರು ಅಲ್ಲಿಂದ ಮಿನಿವಿಧಾನ ಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವೇಳೆ ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ಮಾತನಾಡಿ, ವಿಜಯಪುರ ಜಿಲ್ಲೆಯ ಸಿಂದಗಿ ನಿವಾಸಿ ಜಗದೀಶ ಕಲಬುರಗಿ ಎಂಬ ವ್ಯಕ್ತಿ ಅಯ್ಯಪ್ಪ ಸ್ವಾಮಿಯ ಜನ್ಮ ದಿನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ. ಬಹುಶಃ ಆ ವ್ಯಕ್ತಿಗೆ ತಂದೆ, ತಾಯಿ ಹಾಗೂ ಯಾರು ಹೇಳುವವರಿಲ್ಲ ಅನಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಂದೆ-ತಾಯಿ ನಂಬಿಕೆ, ಗುರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯುತ್ತೇವೆ. ದೇವರು ಹಾಗೂ ಗುರು ಬಗ್ಗೆ ನಂಬಿಕೆ ಇಲ್ಲದವರು ಇಂತಹ ಮಾತುಗಳನ್ನಾಡುತ್ತಾರೆ. ಹೆಚ್ಚು ಪ್ರಚಾರ ಪಡೆಯುವ ಸಲುವಾಗಿ ಸನಾತನ ಧರ್ಮ ಹಾಗೂ ದೇವರ ಬಗ್ಗೆ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ, ಯಾವುದೇ ಧರ್ಮದ ಬಗ್ಗೆ ಈ ರೀತಿಯಾಗಿ ಹಗುರವಾಗಿ ಮಾತನಾಡಬಾದರು ಎಂದರು.

ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಗದೀಶನ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನ ಸಹ ಮಾಡಲಾಗಿದೆ. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್‌ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಆನಂದ ಗುರು ಸ್ವಾಮಿ, ಉಮೇಶ ಬಿ, ಮೋಹನ ಗುರುಸ್ವಾಮಿ, ರಾಮಚಂದ್ರ ಕರನಡೆ ಸೇರಿದಂತೆ ನೂರಾರು ಅಯ್ಯಪ್ಪ ಮಾಲಾಧಾರಿಗಳು ಪಾಲ್ಗೊಂಡಿದ್ದರು.