ಜನೌಷಧ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಂಡನೆ

| Published : Jun 05 2025, 11:53 PM IST

ಜನೌಷಧ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಂಡನೆ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಜನೌಷಧ ಕೇಂದ್ರಗಳಲ್ಲಿ ತೀರ ಕಡಿಮೆ ಬೆಲೆಯಲ್ಲಿ ಜನರಿಕ್ ಔಷಧಗಳು ದೊರೆಯುತ್ತಿವೆ. ಅಲ್ಲದೆ ಗುಣಮಟ್ಟದ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಜನೌಷಧ ಕೇಂದ್ರಗಳನ್ನು ಮುಚ್ಚಲಿರುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಕಜವೇ ಕಾರ್ಯಕರ್ತರು ಕೆಲಕಾಲ ಧರಣಿ ನಡೆಸಿ ರಾಜ್ಯ ಸರ್ಕಾರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಜನೌಷಧ ಕೇಂದ್ರಗಳಲ್ಲಿ ತೀರ ಕಡಿಮೆ ಬೆಲೆಯಲ್ಲಿ ಜನರಿಕ್ ಔಷಧಗಳು ದೊರೆಯುತ್ತಿವೆ. ಅಲ್ಲದೆ ಗುಣಮಟ್ಟದ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರ ಕಾರ್ಪೊರೇಟ್ ಔಷಧಿ ಕಂಪನಿ ಮತ್ತು ಖಾಸಗಿ ಮೆಡಿಕಲ್ ಅಂಗಡಿಗಳ ಲಾಭಿಗೆ ಮಣಿದು ಸಚಿವ ಗುಂಡೂರಾವ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದರು.

ಬಡ ರೋಗಿಗಳು ಕಾಯಿಲೆಗೆ ಚಿಕಿತ್ಸೆ ಪಡೆಯುವುದು ದೊಡ್ಡ ಸಾಹಸವಾಗಿರುವ ಇಂದಿನ ದಿನಗಳಲ್ಲಿ ದುಬಾರಿ ಬೆಲೆತೆತ್ತು ಗುಣಮಟ್ಟವಲ್ಲದ ಔಷಧಿ ಖರೀದಿಸುವುದು ದುರಂತದ ಸಂಗತಿಯಾಗಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ವೇದಿಕೆ ರಾಜ್ಯಾದ್ಯಂತ ಚಳವಳಿ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿ ತಹಸೀಲ್ದಾರ್ ಡಾ. ಸ್ಮಿತಾ ರಾಮು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಸೆಲ್ವಿ ಮುರುಗೇಶನ್, ಅಹಿಂದ ಸಂಘಟನೆ ನಿಂಗಯ್ಯ, ಅಜ್ಜಹಳ್ಳಿ ಕರಿಗೌಡ, ಶಿವಲಿಂಗಯ್ಯ, ಪಟೇಲ್ ಹರೀಶ್, ಚಿಕ್ಕಣ್ಣ, ವೀರಪ್ಪ, ರೈತ ಮುಖಂಡರಾದ ಹುರುಗಲವಾಡಿ ಉಮೇಶ , ಕೃಷ್ಣ, ರವಿ, ಪುಟ್ಟ ಲಿಂಗಯ್ಯ ಹಾಗೂ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.