ಗದಗ ಜಿಲ್ಲೆಯಲ್ಲಿ ನಾಯಿ ಕಡಿತದ ಪ್ರಕರಣಗಳು ದಾಖಲಾಗದೇ ಇದ್ದಲ್ಲಿ ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಇಲಾಖಾಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಗದಗ: ಜಿಲ್ಲೆಯಲ್ಲಿ ನಾಯಿ ಕಡಿತದ ಪ್ರಕರಣಗಳು ದಾಖಲಾಗದೇ ಇದ್ದಲ್ಲಿ ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಇಲಾಖಾಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಬೇಕು. ಇದರ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೀರಿನ ಮಾದರಿ ವಿಶ್ಲೇಷಣೆಗೆ ಸಂಬಂಧಿಸಿದಂತೆ ಕೇಂದ್ರೀಯ ಅಂತರ್ಜಲ ಮಂಡಳಿ ನೀರಿನ ಮಾದರಿ ರಾಸಾಯನಿಕ ವಿಶ್ಲೇಷಣೆ ಮಾಡಿದ್ದು, ಕೆಲವೊಂದು ಕಡೆ ಅರ್ಸೆನಿಕ್ ಯುರೇನಿಯಂ ಪ್ರಮಾಣ ಪರಿಮಿತಿಗಿಂತ ಹೆಚ್ಚಾಗಿರುವುದು ಕಂಡುಬಂದಿದೆ. ಅಂತಹ ಸ್ಥಳಗಳನ್ನು ಗುರುತಿಸಿ ಮಾದರಿಗಳನ್ನು ಶೇಖರಿಸಿ ಪರೀಕ್ಷಿಗೊಳಪಡಿಸಬೇಕು ಎಂದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿ, ಜಿಲ್ಲೆಯಲ್ಲಿ 2025ರ ಜನವರಿಯಿಂದ ನವೆಂಬರ್‌ವರೆಗೆ 3929 ಕರುಳುಬೇನೆ, 3774 ಟೈಫಾಯಿಡ್, 47- ಹೆಪಟೈಟೀಸ್–ಎ, 118 ಡೆಂಘೀ ಹಾಗೂ 3 ಚಿಕೂನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ. 2025ರ ಜನವರಿಯಿಂದ ನವೆಂಬರ್‌ವರೆಗೆ ಒಟ್ಟು 326804 ಸಂಶಯಾಸ್ಪದ ಮಲೇರಿಯಾ ರಕ್ತದ ಲೇಪನಗಳನ್ನು ಸಂಗ್ರಹಿಸಿದ್ದು, ಅದರಲ್ಲಿ 7 ಖಚಿತ ಪ್ರಕರಣಗಳು ವರದಿಯಾಗಿವೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗಿದೆ. ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ವಿಶ್ವ ರೇಬಿಸ್ ದಿನವನ್ನು ಮುಂಡರಗಿಯ ತೋಂಟದಾರ್ಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅ. 3ರಂದು ಆಚರಿಸಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೂ 9008 ನಾಯಿ ಕಡಿತ ಹಾಗೂ 1541 ಇತರೆ ಪ್ರಾಣಿಗಳ ಕಡಿತ ವರದಿಯಾಗಿವೆ ಎಂದರು.ಸಭೆಯಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ, ಇಲಿ ಜ್ವರ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ, ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ಕಾರ್ಯಕ್ರಮ ಕುರಿತು ಚರ್ಚಿಸಲಾಯಿತು.

ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ವೈ.ಕೆ. ಭಜಂತ್ರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರುಡಿ, ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಡಾ. ಅರುಂಧತಿ ಕುಲಕರ್ಣಿ ಸೇರಿದಂತೆ ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.