ಸಾರಾಂಶ
ಗದಗ: ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರುಪ್ ಬಿ ವೃಂದದ ಹುದ್ದೆಗಳಿಗೆ ಜ.19 ಮತ್ತು 25ರಂದು ಪರೀಕ್ಷೆ ನಡೆಸುತ್ತಿದ್ದು. ಜಿಲ್ಲೆಯಲ್ಲಿ ಪರೀಕ್ಷೆಗಳು ಸುವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಹಾಗೂ ಪರೀಕ್ಷಾ ಅಕ್ರಮಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ 9ಪರೀಕ್ಷಾ ಕೇಂದ್ರಗಳಲ್ಲಿ ಜ.19 ಮತ್ತು 25 ರಂದು ಪರೀಕ್ಷೆಗಳು ಜರುಗುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಗೋಡೆ ಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ತ್ರಿಸದಸ್ಯ ಸಮಿತಿ ನೇಮಕ: ಪರೀಕ್ಷೆ ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರು, ಸ್ಥಳೀಯ ನಿರೀಕ್ಷಣಾಧಿಕಾರಿ, ಮಾರ್ಗಾಧಿಕಾರಿ ಮತ್ತು ತ್ರಿ-ಸದಸ್ಯ ಸಮಿತಿ ನೇಮಿಸಲಾಗಿದೆ. ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು.ವಿಕಲಚೇತನರಿಗೆ ನೆಲಮಹಡಿಯ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯುವ ವ್ಯವಸ್ಥೆಯಾಗಬೇಕು. ಒಟ್ಟಾರೆ ಯಾವುದೇ ಅಕ್ರಮ, ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ಜರುಗಿಸಬೇಕೆಂದು ತಿಳಿಸಿದರು.
ಪ್ರತಿಬಂಧಕಾಜ್ಞೆ ಜಾರಿ: ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ ಪರಿಮಿತಿಯೊಳಗೆ ಜ.19 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 1ರ ವರೆಗೆ ಹಾಗೂ ಜ. 25 ರಂದು ಮಧ್ಯಾಹ್ನ 1 ರಿಂದ ಸಂಜೆ 6ರ ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶ ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶ ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್ಸ್ಟಾಲ್, ಫೋಟೋ ಕಾಪಿಯರ್ ಬಂದು ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆ ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ನಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿ ನಿಷೇಧಿಸಿದೆ. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ ಎಂದರು.
ವಸ್ತ್ರ ಸಂಹಿತೆ: ಶೂ, ಸಾಕ್ಸ್ ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣ, ಮೊಬೈಲ್ ಬ್ಲೂ ಟೂಥ್ , ಕ್ಯಾಲ್ಕುಲೇಟರ್, ವೈಟ್ಫ್ಲುಡ್, ವೈರ್ಲೆಸ್ ಸೆಟ್ಸ್ ,ಪೇಪರ್ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬು ತೋಳಿನ ಶರ್ಟ್ ಮತ್ತು ಯಾವುದೇ ಆಭರಣ ಮೆಟಲ್ ಮತ್ತು ನಾನ್ಮೆಟಲ್ (ಮಂಗಳಸೂತ್ರ ಹಾಗೂ ಕಾಲುಂಗುರ ಹೊರತುಪಡಿಸಿ) ಪುಲ್ಲೋವರ್ಸ, ಜಾಕೆಟ್, ಸ್ವೆಟರ್ ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಹೀಯರಿಂಗ್ ಆ್ಯಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಆರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿದೆ. ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತ್ರ ಸಂಹಿತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ಮೆಟಲ್ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್ ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. ಕಿವಿ, ಬಾಯಿ ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ಇರುವುದಿಲ್ಲ. ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದು ವಿವರಿಸಿದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಸಂಕದ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ, ಪಾರದರ್ಶಕತೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಸೇರಿದಂತೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ.,ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ, ಡಯಟ್ ಪ್ರಾಚಾರ್ಯ ಜಿ.ಎಲ್. ಬಾರಾಟಕ್ಕೆ, ಖಜಾನೆ ಇಲಾಖೆ ಉಪನಿರ್ದೇಶಕ ಹರಿನಾಥ ಬಾಬು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳು: ನಗರದ ಕೆ.ಎಲ್.ಇ ಸೊಸೈಟಿಸ್ ಜೆ.ಟಿ.ಕಾಲೇಜ್, ಸಿ.ಎಸ್.ಪಾಟೀಲ ಬಾಲಕರ ಪ್ರೌಢಶಾಲೆ, ಸಿ.ಎಸ್.ಪಾಟೀಲ ಬಾಲಕಿಯರ ಪ್ರೌಢಶಾಲೆ, ವಿ.ಡಿ.ಎಸ್.ಟಿ. ಗಂಡುಮಕ್ಕಳ ಪ್ರೌಢಶಾಲೆ, ವಿ.ಡಿ.ಎಸ್.ಟಿ. ಹೆಣ್ಣುಮಕ್ಕಳ ಸಂಯುಕ್ತ ಪಿಯು ಕಾಲೇಜ್, ಬೆಟಗೇರಿಯ ಎ.ಎಸ್.ಎಸ್.ಕಾಮರ್ಸ್ ಕಾಲೇಜ್, ನಗರದ ಶಾಸ್ತ್ರೀಜಿ ಹೈಸ್ಕೂಲ್, ಮುಳಗುಂದ ರಸ್ತೆಯಲ್ಲಿನ ಸರ್ಕಾರಿ ಪಪೂ ಕಾಲೇಜ್, ಸಿದ್ದಲಿಂಗನಗರದ ಬಸವೇಶ್ವರ ಪ್ರೌಢಶಾಲೆ.