ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಜೂ.4ರಂದು ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಜಾಗರೂಕತೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುವಂತೆ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಜೂ.4ರಂದು ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಜಾಗರೂಕತೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುವಂತೆ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚಿಸಿದರು.ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಮತ ಎಣಿಕೆ ಹಿನ್ನೆಲೆಯಲ್ಲಿ ಸೂಕ್ಷ್ಮ ವೀಕ್ಷಕರು ಹಾಗೂ ಮತ ಎಣಿಕೆ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಚುನಾವಣಾ ಮತ ಎಣಿಕೆ ತರಬೇತಿ ಕಾರ್ಯಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.ಮತ ಎಣಿಕೆಯು ನಗರದ ನಂಜನಗೂಡು ರಸ್ತೆಯಲ್ಲಿರುವ ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ನಿಗದಿತ ಸಮಯಕ್ಕೆ ಸರಿಯಾಗಿ ಚುನಾವಣಾಧಿಕಾರಿಗಳ ಕಚೇರಿಯಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಬೇಕು. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ ಹಾಗೂ ಸ್ಮಾರ್ಟ್ ವಾಚ್ಗಳನ್ನು ಮತ ಎಣಿಕೆ ಕೇಂದ್ರಕ್ಕೆ ತರುವಂತಿಲ್ಲ ಎಂದು ತಿಳಿಸಿದರು. ಮತ ಎಣಿಕೆ ಕೇಂದ್ರದ ಕಾರ್ಯನಿರ್ವಹಣೆಗೆ ನಿಯೋಜಿಸಲಾಗಿರುವ ಮಾಸ್ಟರ್ ಟ್ರೈನರ್ಗಳು, ಮತ ಎಣಿಕೆ ಅಧಿಕಾರಿ, ಸಿಬ್ಬಂದಿಗಳು ಎಣಿಕೆ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಮತ ಎಣಿಕೆಯು ಸುಸೂತ್ರವಾಗಿ ನಡೆಯಲು ಕಾರ್ಯೋನ್ಮುಖರಾಗಬೇಕು ಎಂದರು.
ತರಬೇತಿ ನೋಡಲ್ ಅಧಿಕಾರಿ ಲಿಂಗರಾಜೇ ಅರಸ್ ಅವರು ಪವರ್ ಪಾಯಿಂಟ್ ಮೂಲಕ ಮತ ಎಣಿಕೆಯ ಕಾರ್ಯ ಚಟುವಟಿಕೆಗಳನ್ನು ವಿವರಿಸಿ ಮಾತನಾಡಿ, ವಿದ್ಯುನ್ಮಾನ ಮತ ಯಂತ್ರದ ಮತ ಎಣಿಕೆ ಕಾರ್ಯವು ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಮತ ಎಣಿಕೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ತರಬೇತಿಯಲ್ಲಿ ಸರಿಯಾದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಡೆದು ಕರ್ತವ್ಯ ನಿರ್ವಹಿಸಬೇಕು ಎಂದರು.ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರು ಹಾಗೂ ಸಂಪನ್ಮೂಲ ವ್ಯಕ್ತಿ ಸವೀನ, ಮಾಸ್ಟರ್ ಟ್ರೈನರ್ ಗಳು, ಅಧಿಕಾರಿಗಳು, ಇತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.