ಸಾರಾಂಶ
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ವ್ಯಕ್ತಿಯ ಸದೃಢವಾದ ಮಾನಸಿಕ ಮತ್ತು ದೈಹಿಕ ಆರೋಗ್ಯ ಬೆಳವಣಿಗೆಗೆ ಕ್ರೀಡೆಯು ಪೂರಕ ಶಕ್ತಿಯಾಗಿದೆ ಎಂದು ಆಲೂರು ಸಿದ್ದಾಪುರ ಸರ್ಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅಭಿಪ್ರಾಯ ಪಟ್ಟರು.ಅವರು ಆಲೂರುಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಗ್ರಾಮೀಣ ಕ್ರೀಡಾಂಗಣದಲ್ಲಿ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಧಿಕಾರಿಗಳ ಕಚೇರಿ ಹಾಗೂ ಆಲೂರು ಸಿದ್ದಾಪುರ ಸರ್ಕಾರಿ ಪ. ಪೂ. ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಬೆಳವಣಿಗೆ ಮತ್ತು ಕ್ರೀಡಾ ಕ್ಷೇತ್ರದ ಬೆಳವಣಿಗೆಗಾಗಿ ಕ್ರೀಡಾಕೂಟಗಳನ್ನು ನಡೆಸಲಾಗುತ್ತದೆ. ವಿದ್ಯಾರ್ಥಿಗಳು ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಿಕೊಂಡು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದರು. ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಸೋಲು ಗೆಲವುವನ್ನು ಸಮವಾಗಿ ಸ್ವೀಕರಿಸಿ ಈ ಮೂಲಕ ಉತ್ತಮವಾಗಿ ಪ್ರದರ್ಶನ ನೀಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ತಾಲೂಕು ದೈಹಿಕ ಶಿಕ್ಷಣ ಇಲಾಖೆಯ ಪರಿವೀಕ್ಷಕಿ ಸುಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ವೈಜ್ಞಾನಿಕ ಭರಾಟೆಯಲ್ಲಿ ಕ್ರೀಡೆಯ ಮಹತ್ವವನ್ನು ಕಳೆದುಕೊಳ್ಳುತ್ತಿದ್ದೇವೆ. ಸ್ಪೂರ್ತಿದಾಯಕವಾದ ಕ್ರೀಡಾ ಕ್ಷೇತ್ರವನ್ನು ಮುನ್ನಡೆಸಲು ಶಾಲಾ ಕಾಲೇಜು ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮದ ಜೊತೆಯಲ್ಲಿ ಕ್ರೀಡಾಪ್ರೇಮವನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಆಲೂರುಸಿದ್ದಾಪುರ ಪಿಡಿಒ ಹರೀಶ್ ಮಾತನಾಡಿ, ಪೋಷಕರು ತಮ್ಮ ಮಕ್ಕಳು ಉನ್ನತ ಅಧಿಕಾರಿಗಳಾಗಬೇಕು ಎಂದು ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಕ್ರೀಡೆಯ ಬಗ್ಗೆ ತಾತ್ಸಾರ ಮನೋಭಾವನೆಯಿಂದ ಇಂದು ನಮ್ಮ ದೇಶ ಒಲಿಪಿಂಕ್ ಮತ್ತು ವಿಶ್ವ ಮಟ್ಟದ ಕ್ರೀಡಾಕೂಟದಲ್ಲಿ ದೇಶಕ್ಕೆ ಚಿನ್ನದ ಪದಕವನ್ನು ತಂದುಕೊಡಲು ತುಂಬಾ ಕಷ್ಟ ಪಡುವಂತಾಗಿದೆ ಎಂದು ವಿಷಾದಿಸಿದರು.ಕಾರ್ಯಕ್ರಮದಲ್ಲಿ ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಿ.ಎಂ.ಹೇಮಂತ್, ಆಲೂರುಸಿದ್ದಾಪುರ ಮೊರಾರ್ಜಿ ವಸತಿ ಶಾಲಾ ಪ್ರಾಂಶುಪಾಲೆ ಕೆ.ಆರ್.ಭಾರತಿ, ದಾನಿ ಮತ್ತು ಲೋಕಪಯೋಗಿ ಇಲಾಖೆಯ ನಿವೃತ್ತ ಅಭಿಯಂತರ ಸೋಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಆಲೂರುಸಿದ್ದಾಪುರ ಗ್ರಾ. ಪಂ. ಅಧ್ಯಕ್ಷೆ ಮೀನಾಕ್ಷಿ, ಸದಸ್ಯೆ ದಮಯಂತಿ ಕರುಂಬಯ್ಯ, ಆಲೂರುಸಿದ್ದಾಪುರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್, ಎಸ್ಡಿಎಂಸಿ ಉಪಾಧ್ಯಕ್ಷ ಪೊನ್ನಪ್ಪ, ತಾಲೂಕು ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಕರುಂಬಯ್ಯ, ಶನಿವಾರಸಂತೆ ವಿಘ್ನೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಟಿ. ಪಿ. ಶಿವಪ್ರಕಾಶ್ ಮುಂತಾದವರು ಹಾಜರಿದ್ದರು.
ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಕ್ರೀಡಾಕೂಟದ ಧ್ವಜರೋಹಣ ನೆರವೇರಿಸಿದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹರೀಶ್ ಕ್ರೀಡಾಜ್ಯೋತಿ ಸ್ವೀಕರಿಸಿ ಓಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.