ಕಾರ್ಯ ದಕ್ಷತೆ ಮೆರೆದ ಪೊಲೀಸ್ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ

| Published : Sep 15 2025, 01:01 AM IST

ಕಾರ್ಯ ದಕ್ಷತೆ ಮೆರೆದ ಪೊಲೀಸ್ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಿಲ್ಲಾ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಿಲ್ಲಾ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆಯಿತು.ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ೩೨ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ಹಾಗೂ ೧೨೧ ಸಿಬ್ಬಂದಿಗೆ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದರು. ನಗರದ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡಲು ನೆರವಾದ ೧೯ ವಿಶೇಷ ಕಾರ್ಯ ಪಡೆಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಒಟ್ಟು ೩೨ ಪೊಲೀಸ್ ಅಧಿಕಾರಿಗಳು ಮತ್ತು ೧೪೦ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಲಾಯಿತು.ಕಳೆದ ಮೂರು ತಿಂಗಳ ಅವಧಿಯಲ್ಲಿ ಸಾಕಷ್ಟು ಎಲ್.ಪಿ.ಸಿ ಪ್ರಕರಣಗಳ (ಹಳೆ ಬಾಕಿ ಕೇಸು) ಆರೋಪಿಗಳನ್ನು ಬಂಧಿಸಲಾಗಿದ್ದು, ಇದರಲ್ಲಿ ಮೂಲ್ಕಿ ಠಾಣಾ ಸರಹದ್ದಿನಲ್ಲಿ ೨೭ ವರ್ಷದ ಹಿಂದಿನ ಮತೀಯ ಗಲಭೆ ಪ್ರಕರಣದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿರುವ ೫೨ ಎನ್.ಬಿ.ಡಬ್ಲ್ಯೂ ವಾರಂಟ್ ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ಸೊತ್ತು ಕಳವು ಪ್ರಕರಣಗಳ ಪೈಕಿ ೩೯ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಪತ್ತೆ ಮಾಡಿ ಸುಮಾರು ೧ ಕೋಟಿ ೫ ಲಕ್ಷ ರು. ಮೌಲ್ಯದ ಕಳವಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಸಾಮಾಜಿಕ ಮಾಧ್ಯಮದ ಮೇಲೆ ಇಲಾಖೆಯು ತೀವ್ರ ನಿಗಾ ಇಟ್ಟಿದ್ದು, ದ್ವೇಷ ಭಾಷಣ, ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ, ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಈಗಾಗಲೇ ೨೨ ಆರೋಪಿಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಮುಖ ಪ್ರಕರಣಗಳಲ್ಲಿ ತನಿಖಾಧಿಕಾರಿ ಹಾಗೂ ತನಿಖಾ ಸಹಾಯಕರಾಗಿ ಕರ್ತವ್ಯವನ್ನು ನಿರ್ವಹಿಸಿ ಉತ್ತಮ ಗುಣಮಟ್ಟದ ತನಿಖೆಯನ್ನು ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಗರಿಷ್ಟ ಮಟ್ಟದ ಶಿಕ್ಷೆಯನ್ನು ವಿಧಿಸಲು ಸಹಕರಿಸಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.