ಸಾರಾಂಶ
ಕುಂದಾಣ: ಮೇ ೨೫ರಂದು ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎಸ್.ಪಿ. ಮುನಿರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ದೇವನಹಳ್ಳಿ ತಾಲೂಕಿನ ಕತ್ತಿಮಾರಮ್ಮ ದೇವಾಲಯದಲ್ಲಿ ಬಮೂಲ್ ನಿರ್ದೇಶಕ ಸ್ಥಾನದ ಅಭ್ಯರ್ಥಿ ಆಯ್ಕೆ ನಂತರ ಮಾತನಾಡಿದ ಅವರು, ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ತಾಲೂಕಿನ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಒಮ್ಮತದಿಂದ ಎಸ್.ಪಿ.ಮುನಿರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಅಭ್ಯರ್ಥಿ ಹಾಲು ಒಕ್ಕೂಟದ ಎಲ್ಲಾ ಅಧ್ಯಕ್ಷರನ್ನು ಭೇಟಿ ಮಾಡಿ ಮತಯಾಚಿಸಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸರ್ಕಾರ ಹಾಲು ಉತ್ಪಾದಕಕರು, ಡೇರಿಗಳಿಗೆ ಮತ್ತಷ್ಟು ಯೋಜನೆ ನೀಡುವ ಆಲೋಚನೆ ಸರ್ಕಾರದ ಮುಂದಿದೆ. ಪಕ್ಷದ ಅಭ್ಯರ್ಥಿ ಎಸ್.ಪಿ.ಮುನಿರಾಜು ಅವರಿಗೆ ಹೆಚ್ಚು ಮತಗಳನ್ನು ನೀಡಿ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು ಎಂದು ಹೇಳಿದರು.ಬಮೂಲ್ ನಿರ್ದೇಶಕ ಸ್ಥಾನದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ಪಿ.ಮುನಿರಾಜು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ತಾಲೂಕಿನ ಎಲ್ಲಾ ಮುಖಂಡರ ಮಾರ್ಗದರ್ಶನದಲ್ಲಿ ಸಭೆ ಸೇರಿ ಒಮ್ಮತದಿಂದ ನಿರ್ದೇಶಕ ಸ್ಥಾನದ ಅವಕಾಶ ನನಗೆ ಕಲ್ಪಿಸಿದ್ದಾರೆ. ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ಎಲ್ಲರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇನೆ. ಕಳೆದ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧಿಸಿ ೯ ಮತಗಳಿಂದ ಸೋತಿದ್ದೇನೆ. ಸಹಕಾರ ಸಂಘದ ಎಲ್ಲಾ ಅಧ್ಯಕ್ಷರ ಬಳಿ ನನಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡುತ್ತೇನೆ. ಸರ್ಕಾರ ಹಾಗೂ ಬಮೂಲ್ನಿಂದ ದೊರೆಯುವ ಸೌಲಭ್ಯಗಳನ್ನು ಸಹಕಾರ ಸಂಘಗಳಿಗೆ ತಲುಪಿಸುತ್ತೇನೆ. ತಾಲೂಕಿನಲ್ಲಿ ೧೬೩ ಸಹಕಾರ ಸಂಘಗಳಿದ್ದು, ೪ ಸಹಕಾರ ಸಂಘಗಳು ಅನರ್ಹರಾಗಿದ್ದು ೧೫೯ ಸಹಕಾರ ಸಂಘಗಳ ಅಧ್ಯಕ್ಷರು ಮತದಾನ ಮಾಡಲಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ತಾಲುಕು ಅಧ್ಯಕ್ಷ ಸಿ.ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ರಾಮಚಂದ್ರಪ್ಪ, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ಮುಖಂಡರಾದ, ಕೆ.ಸಿ.ಮಂಜುನಾಥ್, ಡಿ.ಎಂ.ದೇವರಾಜು ಸೇರಿದಂತೆ ತಾಲೂಕಿನ ಮುಖಂಡರು ಕಾರ್ಯಕರ್ತರು ಇತರರಿದ್ದರು.೦೧ ಕುಂದಾಣ ಚಿತ್ರಸುದ್ದಿ:
ಬಮುಲ್ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭಾಗವಹಿಸಿದ್ದರು.