ಸಾರಾಂಶ
ನಾರಾಯಣ ಹೆಗಡೆ
ಕನ್ನಡಪ್ರಭ ವಾರ್ತೆ ಹಾವೇರಿಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಅವರನ್ನು ಮಣಿಸಿ ಕಾಂಗ್ರೆಸ್ನ ಯಾಸೀರ್ ಅಹ್ಮದ್ ಖಾನ್ ಪಠಾಣ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸತತ ನಾಲ್ಕು ಸಲ ಗೆದ್ದು ಬಿಜೆಪಿ ಭದ್ರಕೋಟೆ ಎನಿಸಿದ್ದ ಶಿಗ್ಗಾಂವಿ ಕ್ಷೇತ್ರ ಈಗ ಕಾಂಗ್ರೆಸ್ ಪಾಲಾಗಿದೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರದಲ್ಲಿ ಪುತ್ರನನ್ನು ಕಣಕ್ಕಿಳಿಸಿ ರಾಜಕೀಯ ಭವಿಷ್ಯ ರೂಪಿಸುವ ತಂದೆಯ ಕನಸು ಭಗ್ನವಾಗಿದೆ. ಅಹಿಂದ ಮತಗಳೇ ನಿರ್ಣಾಯಕವಾಗಿರುವ ಕ್ಷೇತ್ರವು ಒಂದು ಕಾಲದಲ್ಲಿ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು. ಬಸವರಾಜ ಬೊಮ್ಮಾಯಿ ೨೦೦೮ರಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ್ದರು. ಅಲ್ಲಿಂದ ಸತತ ನಾಲ್ಕು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಎದುರಾದ ಉಪ ಚುನಾವಣೆಯಲ್ಲಿ ತಮ್ಮ ಪುತ್ರ ಭರತ ಬೊಮ್ಮಾಯಿ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದರು. ಪುತ್ರನ ಪಟ್ಟಾಭಿಷೇಕಕ್ಕೆ ನಡೆಸಿದ ಪ್ರಯತ್ನ ಫಲಕೊಡಲಿಲ್ಲ. ಹಲವು ಆರೋಪಗಳ ಮಧ್ಯೆಯೂ ಕ್ಷೇತ್ರದ ಮತದಾರ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರಿಂದ ಕೈ ಬಾವುಟ ರಾರಾಜಿಸುವಂತಾಗಿದೆ.ಖಾದ್ರಿ ಬೆಂಬಲ, ಕೈ ಸಂಘಟಿತ ಹೋರಾಟ: ಕಾಂಗ್ರೆಸ್ ಟಿಕೆಟ್ ಹಂಚಿಕೆ ವೇಳೆ ಅಸಮಾಧಾನಗೊಂಡು ಬಂಡಾಯದ ಬಾವುಟ ಹಾರಿಸಿದ್ದ ಅಜ್ಜಂಪೀರ್ ಖಾದ್ರಿ ಮನವೊಲಿಸುವಲ್ಲಿ ಯಶಸ್ವಿಯಾದ ಕೈ ನಾಯಕರು ಖಾದ್ರಿ ಅವರನ್ನು ವಿಶ್ವಾಸಕ್ಕೆ ಪಡೆದು ಪ್ರಚಾರ ನಡೆಸಿದರು. ಅಲ್ಲದೇ ಸಚಿವರಾದ ಸತೀಶ ಜಾರಕಿಹೊಳಿ, ಮಯೂರ ಜಯಕುಮಾರ್, ಶಿವಾನಂದ ಪಾಟೀಲ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಜಮೀರ್ ಅಹಮದ್ ಸೇರಿದಂತೆ ಕಾಂಗ್ರೆಸ್ ನಾಯಕರು ಕ್ಷೇತ್ರದಲ್ಲೇ ಠಿಕಾಣಿ ಹೂಡಿ ಆಯಾ ಸಮುದಾಯದ ಮತ ಕ್ರೋಡೀಕರಣ ಮಾಡಲು ಶಕ್ತಿ ಮೀರಿ ಪ್ರಯತ್ನ ಹಾಕಿದರು. ಅಲ್ಲದೇ ಟಿಕೆಟ್ ಆಕಾಂಕ್ಷಿಗಳೆಲ್ಲ ಭಿನ್ನಮತ ಮರೆತು ಪಕ್ಷದ ಪರವಾಗಿ ಕೆಲಸ ಮಾಡಿದರು. ಸಣ್ಣಪುಟ್ಟ ಸಮುದಾಯದ ಮತಗಳೂ ಕೈತಪ್ಪದಂತೆ ನೋಡಿಕೊಂಡರು. ಪ್ರತಿ ಚುನಾವಣೆಯಲ್ಲಿ ಬೊಮ್ಮಾಯಿ ಪರವಾಗಿರುತ್ತಿದ್ದ ಕುರುಬ, ಪಂಚಮಸಾಲಿ, ದಲಿತರ ಮತಗಳನ್ನು ಸೆಳೆಯುವಲ್ಲಿ ಕೈ ನಾಯಕರು ಯಶಸ್ವಿಯಾದರು. ಇದರೊಂದಿಗೆ ಅಲ್ಪಸಂಖ್ಯಾತ ಮತಗಳು ಸಂಪೂರ್ಣವಾಗಿ ಕೈ ಪಾಲಾಗಿದ್ದರಿಂದ ನಿರೀಕ್ಷೆಗೂ ಮೀರಿದ ಮತಗಳು ಬಂದವು. ಇದರಿಂದ ಯಾಸೀರ್ ಖಾನ್ ಪಠಾಣ ಭರ್ಜರಿ ಜಯಭೇರಿ ಬಾರಿಸುವಂತಾಯಿತು.
ಫಲಿಸದ ಬೊಮ್ಮಾಯಿ ತಂತ್ರ: ಸತತ ನಾಲ್ಕು ಚುನಾನಣೆಗಳಲ್ಲಿ ಗೆದ್ದಿದ್ದ ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿ ಸಾಕಷ್ಟು ಹಿಡಿತ ಹೊಂದಿದ್ದರು. ಆದರೆ, ಈ ಸಲ ಅವರ ಚುನಾವಣಾ ತಂತ್ರ ಪುತ್ರನನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅಪ್ಪನನ್ನು ಬೆಂಬಲಿಸಿದ್ದ ಮತದಾರರು ಪುತ್ರನಿಗೆ ಜೈ ಎನ್ನಲಿಲ್ಲ. ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದರೂ ಅವು ಅವರ ಕೈಹಿಡಿಯಲಿಲ್ಲ. ಚುನಾವಣೆ ಹೊತ್ತಿನಲ್ಲಿ ಎದ್ದಿದ್ದ ವಕ್ಫ್ ವಿವಾದ, ಹಿಂದುತ್ವದ ಅಸ್ತ್ರ ಕ್ಷೇತ್ರದಲ್ಲಿ ಅಷ್ಟಾಗಿ ಕೆಲಸ ಮಾಡಿದಂತಿಲ್ಲ.ಅಲ್ಲದೇ ಕುಟುಂಬ ರಾಜಕಾರಣವನ್ನು ಕ್ಷೇತ್ರದ ಜನ ಒಪ್ಪಲಿಲ್ಲ.
ಕೈ ಭದ್ರಕೋಟೆಯಾದ ಜಿಲ್ಲೆ: ಜಿಲ್ಲೆಯಲ್ಲಿರುವ ೬ ವಿಧಾನಸಭಾ ಕ್ಷೇತ್ರಗಳ ಪೈಕಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ೫ ಕಡೆ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಶಿಗ್ಗಾಂವಿಯಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ, ಉಪಚುನಾವಣೆ ಶಿಗ್ಗಾಂವಿ ಕ್ಷೇತ್ರವನ್ನು ತೆಕ್ಕೆಗೆ ಹಾಕಿಕೊಳ್ಳುವ ಮೂಲಕ ಜಿಲ್ಲೆಯ ಎಲ್ಲ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದೆ.ಸಾಮಾನ್ಯ ಕುಟುಂಬದಿಂದ ಬಂದ, ಅಲ್ಪಸಂಖ್ಯಾತ ಸಮುದಾಯದ ನನ್ನನ್ನು ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಹಾಗೂ ಶಿಗ್ಗಾಂವಿ ಕ್ಷೇತ್ರದ ಜನ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ನನ್ನ ಗೆಲುವಿಗೆ ಕಾರಣರಾದ ಕಾಂಗ್ರೆಸ್ ಮುಖಂಡರು ಹಾಗೂ ಎಲ್ಲ ಸಮಾಜದ ಗುರು ಹಿರಿಯರಿಗೆ, ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಕ್ಷೇತ್ರವನ್ನು ಗೆಲ್ಲಲೇಬೇಕು ಎಂದು ಶಪಥ ಮಾಡಿದ್ದ ಸಚಿವರಾದ ಈಶ್ವರ ಖಂಡ್ರೆ, ಶಿವಾನಂದ ಪಾಟೀಲ, ಸತೀಶ ಜಾರಕಿಹೊಳಿ, ಮಯೂರ ಜೈಕುಮಾರ್ ನಾಲ್ಕು ತಿಂಗಳಿಂದ ನಿರಂತರವಾಗಿ ಕೆಲಸ ಮಾಡಿ ಗೆಲುವಿಗೆ ಕಾರಣರಾಗಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗದಲ್ಲಿ ಕ್ಷೇತ್ರ ಹಿಂದುಳಿದಿದೆ. ಅದನ್ನು ಮುಂದಿನ ದಿನಗಳಲ್ಲಿ ಎಲ್ಲ ಸಹಕಾರದೊಂದಿಗೆ ಅಭಿವೃದ್ಧಿಪಡಿಸುತ್ತೇನೆ ಎಂದು ವಿಜೇತ ಕಾಂಗ್ರೆಸ್ ಅಭ್ಯರ್ಥಿ
ಯಾಸೀರ್ಖಾನ್ ಪಠಾಣ ಹೇಳಿದರು.ಶಿಗ್ಗಾಂವಿ-ಸವಣೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ಗೆಲುವು ಸಾಧಿಸಿದೆ. ಪಕ್ಷದ ಸೋಲಿನ ಕಾರಣಗಳ ಬಗ್ಗೆ ಬೂತ್ ಮಟ್ಟದಲ್ಲಿ ಚರ್ಚಿಸಲಾಗುವುದು. ನಾನು ಚುನಾವಣೆಯಲ್ಲಿ ಸೋತಿದ್ದೇನೆ ಅಷ್ಟೇ, ಆದರೆ ಈ ಕ್ಷೇತ್ರದ ಅಭಿವೃದ್ಧಿಗೆ, ಜನರ ಪರವಾಗಿ ಸದಾ ದುಡಿಯುತ್ತೇನೆ. ಮುಂದಿನ ದಿನಗಳಲ್ಲಿ ಈ ಸೋಲಿನ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ನನಗೆ ಮತ ನೀಡಿದ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಪರಾಜಿತ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದರು.