ಹಿಂದುಳಿದ ವರ್ಗ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ: ಶಾಸಕ ಜಿ.ಎಸ್. ಪಾಟೀಲ

| Published : Oct 06 2025, 01:01 AM IST

ಸಾರಾಂಶ

ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಅವರು ಕೂಡ ಹಿಂದುಳಿದ ವರ್ಗಗಳ ಪರ ಕಾಳಜಿ ಹೊಂದಿದ್ದು, ಪ್ರಮುಖವಾಗಿ ಹಿಂದುಳಿದ ವರ್ಗಗಳ ಸಂಘಟನೆಗೆ ಕಾಂಗ್ರೆಸ್ ಅವಿರತವಾಗಿ ಶ್ರಮಿಸುತ್ತಿದೆ.

ರೋಣ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸಮಾನತೆಗಳು ಭಾರತೀಯ ಸಂವಿಧಾನದ ಮುಖ್ಯ ಉದ್ದೇಶಗಳಾಗಿದ್ದು, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದ್ದು, ಅಭಿವೃದ್ಧಿಗೆ ಸದಾ ಸಿದ್ಧವಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ಭಾನುವಾರ ಪಟ್ಟಣದ ಅಕ್ಕಮಹಾದೇವಿ ಕಲ್ಯಾಣಮಂಟಪದಲ್ಲಿ ಜಿಲ್ಲಾ ಕಾಂಗ್ರೆಸ್ ರೋಣ ವಿಧಾನಸಭೆ ಮತಕ್ಷೇತ್ರ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ರೋಣ ವಿಧಾನಾಸಭಾ ಮತಕ್ಷೇತ್ರ ವಾಯ್ಸ್ ಆಫ್ ಒಬಿಸಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಶ್ರೀಮಂತರ, ಮೇಲ್ವರ್ಗದ ರಾಜಕೀಯ ಹಿಡಿತಕ್ಕೆ ಅಂಕುಶ ಹಾಕುತ್ತಾ ಬಂದಿದ್ದು, ಕರ್ನಾಟಕದಾದ್ಯಂತ ಇರುವ 108 ಜಾತಿಗಳು ಹಿಂದುಳಿದ ವರ್ಗಕ್ಕೆ ಒಳಪಡುತ್ತಿದ್ದು, ಆರ್ಥಿಕ, ಸಾಮಾಜಿಕ, ರಾಜಕೀಯ ನ್ಯಾಯ ಕಲ್ಪಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಅವರು ಕೂಡ ಹಿಂದುಳಿದ ವರ್ಗಗಳ ಪರ ಕಾಳಜಿ ಹೊಂದಿದ್ದು, ಪ್ರಮುಖವಾಗಿ ಹಿಂದುಳಿದ ವರ್ಗಗಳ ಸಂಘಟನೆಗೆ ಕಾಂಗ್ರೆಸ್ ಅವಿರತವಾಗಿ ಶ್ರಮಿಸುತ್ತಿದೆ ಎಂದರು.

ದೇಶದಲ್ಲಿ ಸಮಾನತೆ ತರಬೇಕಿದೆ. ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಸಿಗಬೇಕು.‌ ಹಿಂದುಳಿದ ವರ್ಗಗಳನ್ನು ಒಗ್ಗೂಡಿಸಲು ಕಾಂಗ್ರೆಸ್ ಅವಿರತ ಶ್ರಮಸುತ್ತಿದೆ. ಹಿಂದುಳಿದ ವರ್ಗದ ಜನಾಂಗದ ಏಳ್ಗೆಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂದರು.

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಸೋಂಪೂರ ಮಾತನಾಡಿ, ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ ಜಾರಿಗೆ ತಂದ ಉಳುವವನೇ ಒಡೆಯ ಕಾನೂನು ಹಿಂದುಳಿದ ವರ್ಗಗಳಿಗೆ ಆರ್ಥಿಕ ನ್ಯಾಯ ಒದಗಿಸಿದ್ದು, ಅವರ 20 ಅಂಶಗಳ ಕಾರ್ಯಕ್ರಮವು ಹಿಂದುಳಿದ ವರ್ಗಗಳ ಆರ್ಥಿಕ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿತು. ದೇವರಾಜ ಅರಸು, ವೀರಪ್ಪ ಮೊಯ್ಲಿ, ಎಸ್. ಬಂಗಾರಪ್ಪ ಮತ್ತು ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.

ರೋಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೀರಣ್ಣ ಶೆಟ್ಟರ, ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ‌ ಸಮಿತಿ ಅಧ್ಯಕ್ಷ ಮಿಥುನ‌ ಪಾಟೀಲ, ಯುವ ಕಾಂಗ್ರೆಸ್ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಕ್ಷಯ ಪಾಟೀಲ ಮಾತನಾಡಿದರು.

ಅಧ್ಯಕ್ಷತೆಯನ್ನು ಕಾಂಗ್ರೆಸ್ ಹಿರಿಯ ಮುಖಂಡ ವಿ.ಆರ್. ಗುಡಿಸಾಗರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಒಬಿಸಿ ಘಟಕದ ಉಪಾಧ್ಯಕ್ಷ ಶಿವಾನಂದ ಪಾಚಂಗಿ, ಒಬಿಸಿ ಜಿಲ್ಲಾಧ್ಯಕ್ಷ ಎಫ್.ಎಚ್. ಅಗಸಿಮನಿ, ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ, ಪುರಸಭೆ ಅಧ್ಯಕ್ಷ ಬಸಮ್ಮ ಕೊಪ್ಪದ, ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ, ಶರಣಗೌಡ ಪಾಟೀಲ ಸರ್ಜಾಪೂರ ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ರಮೇಶ ಪಲ್ಲೇದ, ಉಪಾಧ್ಯಕ್ಷ ಯಚ್ಚರಗೌಡ ಗೋವಿಂದಗೌಡ್ರ, ಶ್ರೀಕಾಂತ ಅವದೂತ, ಶಿವರಾಜ ಘೋರ್ಪಡೆ, ಮಂಜುಳಾ ಹುಲ್ಲಣ್ಣವರ, ನಾಜಬೇಗಂ ಯಲಿಗಾರ, ಮಂಜುಳಾ ರೇವಡಿ, ಸಿದ್ದು ಯಾಳಗಿ, ಈರಣ್ಣ ಯಾಳಗಿ, ಪರಶುರಾಮ ಅಳಗವಾಡಿ, ಆರ್.ಜಿ. ಬಸವರಡ್ಡಿ, ಬಸವರಾಜ ನವಲಗುಂದ, ಡಾ. ಶಶಿಧರ ಹೂಗಾರ ಇತರರು ಇದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ‌ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ ನಿರೂಪಿಸಿದರು. ರೋಣ ಒಬಿಸಿ ಅಧ್ಯಕ್ಷ ಶರಣಪ್ಪ ಬಾವಿ ವಂದಿಸಿದರು.