ಸಾರಾಂಶ
ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.
ಹುಬ್ಬಳ್ಳಿ: ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ. ಇದಕ್ಕೆ ಹಳೇ ಹುಬ್ಬಳ್ಳಿ, ಕೆಜೆ ಹಳ್ಳಿ-ಡಿಜೆ ಹಳ್ಳಿ ಹಾಗೂ ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆಗಳೇ ಪ್ರಮುಖ ಸಾಕ್ಷಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮತಾಂಧ ಶಕ್ತಿಗಳಿಗೆ ಹೆದರಿಕೆಯೇ ಇಲ್ಲದಂತಾಗಿದೆ. ಮೈಸೂರಿನ ಉದಯಗಿರಿಯಲ್ಲಿ ನಡೆದ ಘಟನೆ ಪೂರ್ವ ನಿಯೋಜಿತವಾಗಿದೆ. ಈ ಘಟನೆಯ ಕುರಿತು ಸಮಗ್ರ ತನಿಖೆಯಾಗಬೇಕಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಹಿಂದಿನ ಘಟನೆಗಳಲ್ಲಿನ ಆರೋಪಿಗಳನ್ನು ಬಿಡದೇ ಕಠಿಣ ಶಿಕ್ಷೆಗೆ ಗುರಿಪಡಿಸಿದ್ದರೆ ಮೈಸೂರಲ್ಲಿ ಗಲಭೆ ನಡೆಯುತ್ತಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪಿಎಫ್ಐ, ಎಸ್ಡಿಪಿಐ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ. ತುಷ್ಟೀಕರಣ ನೀತಿ ಇದೇ ರೀತಿ ಮುಂದುವರಿದಲ್ಲಿ ರಾಜ್ಯದಿಂದಲೂ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದರು.
ನಷ್ಟ ವಸೂಲಿ ಮಾಡಲಿ:
ಗೃಹ ಸಚಿವ ಡಾ. ಜಿ. ಪರಮೇಶ್ವರ ತಮ್ಮ ಐಡಿಯಾಲಜಿಗೆ ತಕ್ಕಂತೆ ಮಾತನಾಡುವುದನ್ನು ಕೈಬಿಟ್ಟು, ಗಲಭೆಯ ವೇಳೆ ಆಗಿರುವ ನಷ್ಟವನ್ನು ಗಲಭೆಕೋರರಿಂದ ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತಿದ್ದರೆ ಇದನ್ನು ಮಾಡಲಿ ಎಂದು ಜೋಶಿ ಸವಾಲು ಹಾಕಿದರು. ಅಲ್ಲದೆ, ಆರ್ಎಸ್ಎಸ್ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಕಚ್ಚಾಟದಿಂದಾಗಿ ರಾಜ್ಯದಲ್ಲಿ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದಲಿತರು ಮುಖ್ಯಮಂತ್ರಿಯಾಗಲು ನಮ್ಮ ವಿರೋಧವಿಲ್ಲ. ಆದರೆ, ಇದನ್ನು ಹಾದಿ ಬೀದಿ ರಂಪ ಮಾಡಿ ಆಡಳಿತಯಂತ್ರ ಕುಸಿಯುವಂತೆ ಮಾಡಿದರೆ ಸಹಿಸಲು ಆಗುವುದಿಲ್ಲ ಎಂದರು.