ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಹಾಗೂ ಎಚ್.ವೈ.ಮೇಟಿ ನಿಧನದಿಂದ ಖಾಲಿಯಾದ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹಾಗೂ ಗೆಲುವಿಗೆ ಪೂರಕವಾಗಿ ವರದಿ ನೀಡಲು ಉಸ್ತುವಾರಿ ಸಮಿತಿಗಳನ್ನು ರಚಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಹಾಗೂ ಎಚ್.ವೈ.ಮೇಟಿ ನಿಧನದಿಂದ ಖಾಲಿಯಾದ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹಾಗೂ ಗೆಲುವಿಗೆ ಪೂರಕವಾಗಿ ವರದಿ ನೀಡಲು ಉಸ್ತುವಾರಿ ಸಮಿತಿಗಳನ್ನು ರಚಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಉಸ್ತುವಾರಿ ಸಮಿತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ.
ಇವರ ಜತೆಗೆ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಕೆ.ಎಚ್. ಮುನಿಯಪ್ಪ, ಜಮೀರ್ ಅಹಮದ್ಖಾನ್, ಈಶ್ವರ್ ಖಂಡ್ರೆ, ಕೃಷ್ಣಬೈರೇಗೌಡ, ಶರಣ್ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ವಿಧಾನಪರಿಷತ್ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್, ಶಾಸಕರಾದ ತನ್ವೀರ್ ಸೇಠ್, ವಿ.ಆರ್. ಸುದರ್ಶನ್, ಎಚ್.ಎಂ. ರೇವಣ್ಣ, ಎಚ್. ಆಂಜನೇಯ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.ಬಾಗಲಕೋಟೆ ಉಸ್ತುವಾರಿ ಸಮಿತಿ:
ಬಾಗಲಕೋಟೆ ಉಪಚುನಾವಣೆ ಉಸ್ತುವಾರಿ ಸಮಿತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಪರಿಷತ್ ಸದಸ್ಯ ವಸಂತಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ.ಉಳಿದಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಬೈರತಿ ಸುರೇಶ್, ರಹೀಂ ಖಾನ್, ಸಿ.ಎಸ್. ನಾಡಗೌಡ, ರಾಜಶೇಖರ್ ಪಾಟೀಲ್, ವಿಜಯಾನಂದ ಕಾಶಪ್ಪನವರ್, ಎಫ್.ಎಚ್. ಜಕ್ಕಪ್ಪನವರ್, ಬಸನಗೌಡ ಬಾದರ್ಲಿ, ಸೋಮಣ್ಣ ಬೇವಿನಮರದ್ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.
ಅಭ್ಯರ್ಥಿ ಆಯ್ಕೆ ಬಗ್ಗೆ ವರದಿಗೆ ಸೂಚನೆ:ಸಮಿತಿಗಳು ಸಂಬಂಧಪಟ್ಟ ಕ್ಷೇತ್ರದಲ್ಲಿ ಪಕ್ಷದ ಸಂಭಾವ್ಯ ಅಭ್ಯರ್ಥಿಯನ್ನು ಕೆಪಿಸಿಸಿಗೆ ಶಿಫಾರಸು ಮಾಡಲು ಹಾಗೂ ಸದರಿ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲುವಿಗೆ ಅಗತ್ಯವಾದ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಸಚಿವರು, ಶಾಸಕರು, ಸಂಸದರು, ಜಿಲ್ಲಾ ಹಾಗೂ ಬ್ಲಾಕ್ ಅಧ್ಯಕ್ಷರು ಸೇರಿದಂತೆ ಎಲ್ಲ ನಾಯಕರನ್ನೂ ಸಮಾಲೋಚನೆ ನಡೆಸಿ ಕೆಪಿಸಿಸಿಗೆ ತಕ್ಷಣ ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
