ಸಾರಾಂಶ
ಕೊಪ್ಪಳ:
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದಿಂದ ರೋಸಿ ಹೋಗಿದ್ದ ಜನರು ಈಗ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನೆಮ್ಮದಿಯಾಗಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದ್ದಾರೆ.ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹೊಸಪೇಟೆಯಲ್ಲಿ ನಡೆಯುವ ಸರ್ಕಾರದ ಸಾಧನಾ ಸಮಾವೇಶದ ಕುರಿತ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಎರಡು ವರ್ಷ ರಾಜ್ಯದಲ್ಲಾಗಿರುವ ಅಭಿವೃದ್ಧಿ ಮತ್ತು ಸರ್ಕಾರ ಕೊಡಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕರೆತರುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಭಯ್ಯಾಪುರ ಮಾತನಾಡಿ, ಜಿಲ್ಲೆಯಿಂದ ಸಮಾವೇಶದಲ್ಲಿ 20ರಿಂದ 30 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ಈ ಕುರಿತು ತಾಲೂಕು ಹಂತದಲ್ಲಿಯೂ ಪೂರ್ವಭಾವಿ ಸಭೆ ನಡೆಸಿದ್ದು, ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗಿದೆ ಎಂದರು.ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಮತ್ತು ಅಭಿಮಾನಿಗಳನ್ನು ಕರೆತರುವ ಹೊಣೆಯನ್ನು ಆಯಾ ಗ್ರಾಮಮಟ್ಟದ ಪದಾಧಿಕಾರಿಗಳು ಮಾಡಬೇಕಾಗುತ್ತದೆ. ಇದರ ಉಸ್ತುವಾರಿಯನ್ನು ತಾಲೂಕು ಮಟ್ಟದ ಪದಾಧಿಕಾರಿಗಳು, ಜನಪ್ರನಿಧಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.
10 ಸಾವಿರ ಜನ:ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಸಮಾವೇಶದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ 10 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಲಿದ್ದಾರೆ ಎಂದರು.
ಈ ಕಾರ್ಯಕ್ರಮ ಇತಿಹಾಸದ ಪುಟ ಸೇರಲಿದೆ. ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ, ಮಾಜಿ ಜಿಪಂ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದ್ರಿ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕೃಷ್ಣ ಇಟ್ಟಂಗಿ, ಕೃಷ್ಣರಡ್ಡಿ ಗಲಬಿ, ಕಾಟನ್ ಪಾಷಾ, ಗೂಳಪ್ಪ ಹಲಿಗೇರಿ, ಗಾಳೆಪ್ಪ ಪೂಜಾರ, ಮಾಲತಿ ನಾಯಕ, ಕೆ.ಎಂ. ಸೈಯದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.