ಸಾರಾಂಶ
ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಕಾರ್ಕಳದಲ್ಲಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಕಾರ್ಕಳಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂಬ ಜಾಣಮಾತು ಹೇಳಿಕೆಯಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇಂದು ಬಡವರ ಶೋಷಣೆಗೆ ಇಳಿದಿದ್ದು, ಭ್ರಷ್ಟಾಚಾರದದಿಂದ ಮುಳುಗುತ್ತಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.ಸೋಮವಾರ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಡವರಿಗೆ ಒಂದು ಮನೆಯನ್ನು ಮಂಜೂರು ಮಾಡಿಲ್ಲ. ನಿವೇಶನ ಹಂಚಿಕೆ ಸಾಧ್ಯವಾಗಿಲ್ಲ. ಭೂ ಪರಿವರ್ತನೆ ಹಾಗೂ 9/11 ಸಮಸ್ಯೆಯಿಂದ ಜನ ಪರದಾಟ ಪಡುತ್ತಿದ್ದಾರೆ. ಬಡ ಕೃಷಿಕರ ಅಕ್ರಮ-ಸಕ್ರಮ ಅರ್ಜಿಗಳನ್ನು ಕೂಡ ಕಾರಣವಿಲ್ಲದೆ ತಿರಸ್ಕರಿಸಲಾಗುತ್ತಿದೆ ಎಂದರು.ಯೋಜನೆಗಳಿಗೆ ಕತ್ತರಿ:
ರಾಜ್ಯ ಸರ್ಕಾರ ಈಗಾಗಲೇ ಸುಮಾರು 25,000ಕ್ಕೂ ಹೆಚ್ಚು ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿಗಳನ್ನು ರದ್ದುಪಡಿಸಲು ಮುಂದಾಗಿದೆ. ಇದು ಶೇ.60 ಕಮಿಷನ್ ಸರ್ಕಾರವಾಗಿದೆ ಎಂದು ಆರೋಪಿಸಿದರು.ಪಂಚಾಯಿತಿ ಅಭಿವೃದ್ಧಿಗೆ ಅನುದಾನವಿಲ್ಲ:
ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ನಯಾಪೈಸೆ ಅನುದಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು, ನಗರ ಘಟಕ ಅಧ್ಯಕ್ಷ ನಿರಂಜನ್ ಜೈನ್, ಬಿಜೆಪಿ ವಕ್ತಾರ ಹರೀಶ್ ಶೆಣೈ, ಕೃಷಿ ಉತ್ಪನ್ನ ಮಾರುಕಟ್ಟೆ ಮಾಜಿ ಅಧ್ಯಕ್ಷ ಅಂತೋನಿ ಡಿಸೋಜ, ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಮಾಜಿ ಅಧ್ಯಕ್ಷರಾದ ಶೋಭಾ ದೇವಾಡಿಗ, ಸುಮಾ ಕೇಶವ್, ಮಾಜಿ ಉಪಾಧ್ಯಕ್ಷರಾದ ಪೂರ್ಣಿಮಾ ಪಲ್ಲವಿ ಪ್ರವೀಣ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರದೀಪ್ ಮಾರಿಗುಡಿ, ಮಾಜಿ ಅಧ್ಯಕ್ಷ ರಾಮಚಂದ್ರ ನಾಯಕ್, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಹಾಗೂ ಪುರಸಭಾ ಸದಸ್ಯರು ಹಾಗೂ ಅನೇಕ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಸ್ಥಳೀಯ ಮುಖಂಡರಾದ ನಿತ್ಯಾನಂದ ಪೈ, ಗಿರಿಧರ್ ನಾಯಕ್, ಪ್ರಕಾಶ್ ರಾವ್ ಮಾತನಾಡಿದರು.