ಕಾಂಗ್ರೆಸ್ ಸರ್ಕಾರ ಬಡವರ ಹೊಟ್ಟೆ ತುಂಬಿಸುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

| Published : Jun 22 2025, 01:18 AM IST

ಕಾಂಗ್ರೆಸ್ ಸರ್ಕಾರ ಬಡವರ ಹೊಟ್ಟೆ ತುಂಬಿಸುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
Share this Article
  • FB
  • TW
  • Linkdin
  • Email

ಸಾರಾಂಶ

ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳು ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಬೈಂದೂರಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 94ಸಿ ಹಕ್ಕುಪತ್ರ ವಿತರಣೆ

ಕನ್ನಡಪ್ರಭ ವಾರ್ತೆ ಬೈಂದೂರು

ಜನಸಾಮಾನ್ಯರ ದೃಷ್ಟಿಯಿಂದ ಯೋಜನೆಗಳನ್ನು ರೂಪಿಸಿ, ಬದ್ಧತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಅವರು ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳು ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ನೀಡುವ‌ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನಲ್ಲಿ‌ ಬಡವರ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.ಬೈಂದೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಗೋಪಾಲ್ ಪೂಜಾರಿ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ ಇಬ್ಬರು ಕ್ಷೇತ್ರದ‌ ದೃಷ್ಟಿಯಿಂದ ಯಾವುದೇ ರಾಜಕೀಯ ಇಲ್ಲದೆ, ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ರಾಜಕಾರಣಿಗಳಿಗೆ ಬೇಕಿರುವ ಬದ್ಧತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಇಂದಿರಾಗಾಂಧಿ ಅವರು ಹುಟ್ಟುಹಾಕಿದ ಅಂಗನವಾಡಿ ಯೋಜನೆಗೆ ‌50 ವರ್ಷಗಳಾಯಿತು, ಈ ಹಿನ್ನೆಲೆಯಲ್ಲಿ ಅ.2ರಂದು ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಲಾಗುವುದು ಎಂದರು.ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕಾಂಗ್ರೆಸ್ ನಾಯಕರಾದ ಉದಯ್ ಕುಮಾರ್ ಶೆಟ್ಟಿ, ನಾಗರಾಜ್ ಗಾಣಿಗ, ರಾಜು ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಉಪವಿಭಾಗಧಿಕಾರಿ ರಶ್ಮಿ ಎಸ್.ಆರ್., ತಹಸೀಲ್ದಾರ್‌ ಪ್ರದೀಪ್ ಕುರುಡೇಕರ್ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸಚಿವೆ, ಕಾಪು ಪುರಸಭೆಯ ಮುಂಭಾಗದಲ್ಲಿಯೂ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಶಾಸಕ ಸುರೇಶ್ ಶೆಟ್ಟಿ, ಮಾಜಿ ಶಾಸಕ ವಿನಯಕುಮಾರ್ ಸೊರಕೆ, ಮುಖಂಡರಾದ ಎಂ.ಎ.ಗಫೂರ್, ನವೀನ್ ಚಂದ್ರ ಶೆಟ್ಟಿ, ಸರಸು ಬಂಗೇರ, ದಿವಾಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.----------------ವಿದ್ಯಾರ್ಥಿಗಳಿಗೆ ಊಟ ಕೊಡಿಸಿದ ಸಚಿವೆ

ಕ್ಯಾಂಟೀನ್ ಉದ್ಘಾಟಿಸಿ ವಾಪಸ್ ತೆರಳುವ ವೇಳೆ, ಸಚಿವೆ ಅವರನ್ನು ಸ್ವಾಗತಿಸಲು‌ ಕರೆ ತರಲಾಗಿದ್ದ ವಿದ್ಯಾರ್ಥಿಗಳನ್ನು ಕಂಡ ಸಚಿವರು, ಮತ್ತೆ ಕಾರಿನಿಂದ ಕೆಳಗಿಳಿದು ಇಂದಿರಾ ಕ್ಯಾಂಟೀನ್ ಒಳಗೆ ಕರೆದೊಯ್ದು ಊಟ ನೀಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು.ಸಚಿವೆ ಕಾರಿನಲ್ಲಿ ಕುಳಿತಾಗ ಕೆಲವು ವಿದ್ಯಾರ್ಥಿಗಳು ಸೆಲ್ಫಿ‌ ಕ್ಲಿಕಿಸಿಕೊಳ್ಳಲು ಬಂದಾಗ, ಬನ್ನಿ ಕ್ಯಾಂಟೀನ್‌ನಲ್ಲಿ ತಿಂಡಿ ತಿನ್ನಿ ಎಂದು ವಿದ್ಯಾರ್ಥಿನಿಯರನ್ನು ಕೈಹಿಡಿದು ಒಳಗೆ ಕರೆದುಕೊಂಡು ಹೋಗಿ ತಿಂಡಿ ತಿನ್ನಿಸಿದರು.