ಕನ್ನಡಪ್ರಭ ವಾರ್ತೆ ಬೆಂಗಳೂರು
ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಜನ ಮೃತಪಟ್ಟಿರುವ ಘಟನೆ ಸಂಬಂಧ ರಾಜ್ಯ ಸರ್ಕಾರವೇ ನೈತಿಕ ಹೊಣೆ ಹೊರಬೇಕು ಮತ್ತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.ದುರ್ಘಟನೆ ಹಿನ್ನೆಲೆಯಲ್ಲಿ ಅವರು ಬುಧವಾರ ರಾತ್ರಿ ಘಟನಾ ಸ್ಥಳಕ್ಕೆ ಸಂಸದ ಪಿ.ಸಿ.ಮೋಹನ್ ಮತ್ತಿತತರೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಇಂತಹ ಘಟನೆ ಸಂಭವಿಸಿದೆ. ಈ ಸರ್ಕಾರ ಬಂದ ಬಳಿಕ ಕೆ.ಆರ್.ಪುರದಲ್ಲಿ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ನಡೆದು 11 ಮಂದಿ ಮೃತಪಟ್ಟಿದ್ದರು. ಈಗ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವನಪ್ಪಿದ್ದಾರೆ. ಇದರ ನೈತಿಕ ಹೊಣೆ ಸರ್ಕಾರವೇ ಹೊರಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಕನಸು ಕಾಣುತ್ತಾ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ತಮ್ಮ ಸುತ್ತ ಗೋಡೆ ಕಟ್ಟಿಕೊಂಡಿದ್ದಾರೆ. ಒಳ್ಳೇಯ ಸ್ಟೀಲ್ ಬಳಸಿ ಗೋಡೆ ಕಟ್ಟಿಕೊಂಡಿದ್ದಾರೆ. ಅವರ ಗೋಡೆ ಗಟ್ಟಿ ಮಾಡಲು ಹೋಗಿ ಈ ರೀತಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.