ಜನರ ವಿಶ್ವಾಸ ಪಡೆದಿರುವ ಕಾಂಗ್ರೆಸ್ ಸರ್ಕಾರ: ಶಿವಗಂಗಾ

| Published : Jun 10 2025, 01:14 AM IST

ಜನರ ವಿಶ್ವಾಸ ಪಡೆದಿರುವ ಕಾಂಗ್ರೆಸ್ ಸರ್ಕಾರ: ಶಿವಗಂಗಾ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದೆ. ಸಮಾಜದ ಎಲ್ಲ ವರ್ಗಗಳ ಜನರು ನೆಮ್ಮದಿಯಿಂದ ಜೀವಿಸುವಂತಹ ಜನಹಿತ ಆಡಳಿತವನ್ನು ನಮ್ಮ ಸರ್ಕಾರ ನೀಡುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಸರ್ಕಾರ ಜನತೆಯ ವಿಶ್ವಾಸವನ್ನು ಗಳಿಸಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

ದೇವರಹಳ್ಳಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದೆ. ಸಮಾಜದ ಎಲ್ಲ ವರ್ಗಗಳ ಜನರು ನೆಮ್ಮದಿಯಿಂದ ಜೀವಿಸುವಂತಹ ಜನಹಿತ ಆಡಳಿತವನ್ನು ನಮ್ಮ ಸರ್ಕಾರ ನೀಡುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಸರ್ಕಾರ ಜನತೆಯ ವಿಶ್ವಾಸವನ್ನು ಗಳಿಸಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯದ ಬಳಿ ಸೋಮವಾರ ₹5 ಕೋಟಿ ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ, ₹25 ಲಕ್ಷ ವೆಚ್ಚದ ನಾಡ ಕಚೇರಿ ಕಟ್ಟಡದ ಉದ್ಘಾಟನೆ, ₹1.20 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸರ್ಕಾರಿ ಪದವಿಪೂರ್ವ ಕಾಲೇಜು ಕಟ್ಟಡದ ಉದ್ಘಾಟನೆ ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ನಿವೇಶನ ಮತ್ತು ವಸತಿ ರಹಿತ 95 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಚನ್ನಗಿರಿ ವಿಧಾನಸಭಾ ಕ್ಷೇತ್ರ ದಿನದಿಂದ ದಿನಕ್ಕೆ ಪ್ರಗತಿ ಹೊಂದುತ್ತಿದೆ. ಪ್ರತಿ ಗ್ರಾಮಗಳಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕೊಡಿಸುತ್ತಿದ್ದೇನೆ. ಅಧಿಕಾರಿಗಳಾದವರು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಕೊಡಬೇಕು ಎಂದರು.

ರೈತರು, ಸಾರ್ವಜನಿಕರು ಕಚೇರಿ ಕೆಲಸಗಳಿಗಾಗಿ ಅಧಿಕಾರಿಗಳ ಬಳಿ ಬಂದಾಗ ಸೌಜನ್ಯದಿಂದ ಮಾತನಾಡಿಸಬೇಕು. ಅವರ ಕಷ್ಟಗಳನ್ನು ಆಲಿಸಿ ನಿಮ್ಮ ಕೈಲಾದ ಕೆಲಸವನ್ನು ಮಾಡಿಕೊಡಬೇಕು. ವಿನಾಕಾರಣ ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದು ಕಂಡುಬಂದರೆ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ದೇವರಹಳ್ಳಿ ಇತಿಹಾಸ ಪ್ರಸಿದ್ಧ ಗ್ರಾಮವಾಗಿದೆ. ಈ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಲಿದ್ದೇನೆ ಎಂದು ಭರವಸೆ ನೀಡಿದರು.

ತಹಸೀಲ್ದಾರ್ ಎನ್.ಜೆ. ನಾಗರಾಜ್ ಮಾತನಾಡಿ, ಚನ್ನಗಿರಿ ವಿಧಾನಸಭಾ ಕ್ಷೇತ್ರ ಅಭಿವೃದ್ದಿಗೆ ಕ್ಷೇತ್ರದ ಶಾಸಕರ ಮಾರ್ಗದರ್ಶನದಲ್ಲಿ ನಮ್ಮ ಅಧಿಕಾರಿಗಳ ತಂಡ ಕೆಲಸ ಮಾಡುತ್ತಿದೆ. ಶಾಸಕರ ಸಹಕಾರ ಅಧಿಕಾರಿಗಳ ಮೂಲಕ ಕ್ಷೇತ್ರದ ಪ್ರತಿಯೊಬ್ಬರಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ತಾಪಂ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ, ಲೋಕೋಪಯೋಗಿ ಇಲಾಖೆ ಅಭಿಯಂತರ ರವಿಕುಮಾರ್, ಎಂ.ಜಿ.ಕೆ. ಹನುಮಂತಪ್ಪ, ನೀಲಪ್ಪ, ಶ್ರೀಕಾಂತ್, ಗ್ರಾಪಂ ಅಧ್ಯಕ್ಷೆ ಲಕ್ಕಮ್ಮ ರುದ್ರಪ್ಪ, ರಂಗಸ್ವಾಮಿ, ಕೆಂಚಪ್ಪ, ಸಂಜು ಪಾಟೀಲ್, ಹಾಲಪ್ಪ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

- - -

-9ಕೆಸಿಎನ್‌ಜಿ1.ಜೆಪಿಜಿ:

ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ₹5 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಬಸವರಾಜು ವಿ. ಶಿವಗಂಗಾ ಗುದ್ದಲಿ ಪೂಜೆ ನೆರವೇರಿಸಿದರು.