ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯ ಕಾಂಗ್ರೆಸ್ ಸರ್ಕಾರವು ಬಂಜಾರ ಸಮುದಾಯದ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಟಾರ್ಗೆಟ್ ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಈ ಸಮುದಾಯ ಕಳೆದ 30-40 ವರ್ಷಗಳಿಂದ ಬಿಜೆಪಿ ಜತೆಗೆ ಗಟ್ಟಿಯಾಗಿ ನಿಂತಿದೆ. ಈ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಈ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಇತ್ತೀಚೆಗೆ ಸೂರಗೊಂಡನಕೊಪ್ಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಂಜಾರ ಸಮುದಾಯದ ಯುವಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಸಹಜವಾಗಿ ಹರಿಹಾಯ್ದರು. ಯಾವುದಕ್ಕೂ ಉತ್ತರ ಕೊಡದೆ ಶಿವಕುಮಾರ್ ಓಡಿ ಹೋದರು. ನ್ಯಾಯಯುತ ಬೇಡಿಕೆ ಮುಂದಿಟ್ಟ ಆ ಬಂಜಾರ ಯುವಕರ ವಿರುದ್ಧವೇ ಎಫ್ಐಆರ್ ದಾಖಲಿಸಿದ್ದಾರೆ ಎಂದು ಕಿಡಿಕಾರಿದರು.ಚಂದ್ರು ಲಮಾಣಿ ಟಾರ್ಗೆಟ್:
ನಮ್ಮ ಶಾಸಕ ಚಂದ್ರು ಲಮಾಣಿ ವಿಚಾರ ನ್ಯಾಯಾಲಯದಲ್ಲಿದೆ. ಅವರು ಆರೋಪ ಎದುರಿಸಲು ಸಮರ್ಥರಿದ್ದಾರೆ. ಈಗಾಗಲೇ ಆಡಿಯೋ ಲೀಕ್ ಆಗಿರುವ ಬಗ್ಗೆ ಚರ್ಚೆಯಾಗುತ್ತಿದೆ. ಚಂದ್ರು ಲಮಾಣಿ ಯಾವ ರೀತಿ ಟಾರ್ಗೆಟ್ ಆಗಿದ್ದಾರೆ ಎಂಬುದು ಬಹಿರಂಗವಾಗಿದೆ. ಈ ಕಾಂಗ್ರೆಸ್ ಸರ್ಕಾರ ಬಂಜಾರ ಸಮುದಾಯದ ಬಗ್ಗೆ ದ್ವೇಷ ರಾಜಕಾರಣ ಮಾಡುತ್ತಿರುವುದರಲ್ಲಿ ಅನುಮಾನವಿಲ್ಲ ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ಗೆ ನೈತಿಕತೆ ಇಲ್ಲ:
ಈ ಅಯೋಗ್ಯ ಕಾಂಗ್ರೆಸ್ ನಾಯಕರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಸಚಿವ ಪ್ರಿಯಾಂಕ್ ಖರ್ಗೆ ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡುತ್ತಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯೋಗ್ಯತೆ ಇದೆಯಾ? ಸಿದ್ದರಾಮಯ್ಯ ಸಿಎಂ ಆದ ಆರು ತಿಂಗಳಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪ್ರಾಮಾಣಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರು. ಮಂತ್ರಿ ರಾಜೀನಾಮೆ ಕೊಟ್ಟರು. ಪರಿಶಿಷ್ಟ ಸಮುದಾಯಗಳಿಗೆ ಮೀಸಲಾದ ನೂರಾರು ಕೋಟಿ ರು. ತೆಲಂಗಾಣ ಚುನಾವಣೆಗೆ ಬಳಸಿಕೊಳ್ಳಲಿಲ್ಲವಾ ಎಂದು ಪ್ರಶ್ನಿಸಿದರು.ಬಜೆಟ್ ಅಧಿವೇಶನ ಬಗ್ಗೆ ಅಶೋಕ್ ಜತೆ ಚರ್ಚೆ ಮಾಡುವೆ:
ಮಾರ್ಚ್ ಮೊದಲ ವಾರ ಬಜೆಟ್ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರೊಂದಿಗೆ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಜೆಟ್ ಅಧಿವೇಶನದಲ್ಲಿ ಯಾವ ರೀತಿ ಸದನವನ್ನು ಎದುರಿಸಬೇಕು, ರಾಜ್ಯದಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚಿಸುತ್ತೇನೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ವೇಳೆಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ಆರ್.ಅಶೋಕ್ ಮತ್ತು ಪಕ್ಷದ ಪ್ರಮುಖರೊಂದಿಗೆ ಚರ್ಚಿಸುವುದಾಗಿಯೂ ಅವರು ಹೇಳಿದರು.-ಕೋಟ್-
ಭ್ರಷ್ಟಾಚಾರಕ್ಕೆ ಜಾತಿ ಲೇಪನ ಬಳಿಯುತ್ತಿಲ್ಲ. ನಮ್ಮ ಶಾಸಕ ಚಂದ್ರು ಲಮಾಣಿ ವಿಚಾರದಲ್ಲಿ ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ ಹೊರಗೆ ಬರಬೇಕು. ತನಿಖೆ ಬಗ್ಗೆ ನಾವು ಚಕಾರ ಎತ್ತಲ್ಲ.- ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ.ಬಿವೈವಿ ಸಿಎಂ ಆಗಲೆಂದು ಮಾದೇಶ್ವರ ಬೆಟ್ಟದಲ್ಲಿ ಅಭಿಮಾನಿಗಳು ಉರುಳುಸೇವೆ:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಯಾಗಲಿ ಎಂಬ ಸಂಕಲ್ಪದಿಂದ ಸುಮಾರು 600ಕ್ಕೂ ಹೆಚ್ಚು ಅಭಿಮಾನಿಗಳು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ದೇಗುಲಕ್ಕೆ ಪಾದಯಾತ್ರೆಯಲ್ಲಿ ತೆರಳಿದ್ದಾರೆ. ಅದರಲ್ಲಿ ಕೆಲವರು ಸೋಮವಾರ ದೇಗುಲದಲ್ಲಿ ಉರುಳು ಸೇವೆ ಸಲ್ಲಿಸಿದರು. ಬೆಂಗಳೂರು ಮಂಡಲ ಅಧ್ಯಕ್ಷ ಶಶಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವಿಜಯೇಂದ್ರ ಅವರು ರಾಜ್ಯದಲ್ಲಿ ಪಕ್ಷದ ಶಕ್ತಿ ಹೆಚ್ಚಿಸುತ್ತಿದ್ದಾರೆ. ಅವರ ನೇತೃತ್ವದಲ್ಲಿಯೇ ಚುನಾವಣೆ ಗೆದ್ದು, ವಿಜಯೇಂದ್ರ ಅವರು ಸಿಎಂ ಆಗಲಿದ್ದಾರೆ. ಪ್ರತಿ ವರ್ಷವೂ ಪಾದಯಾತ್ರೆ ನಡೆಸಲಿದ್ದೇವೆ ಎಂದರು. ಸಿಎಂ ಆಗುವ ಹರಕೆ ಹೊತ್ತ ಅಭಿಮಾನಿಗಳು ಬೆಂಗಳೂರಿನಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ಬಂದು, ಉರುಳು ಸೇವೆ ನೆರವೇರಿಸಿದರು. ಬಳಿಕ ಮಾದಪ್ಪನಿಗೆ ಜೈಕಾರ ಕೂಗಿದರು. ಅಭಿಮಾನಿಗಳು ಕಾಡಿನ ಮಧ್ಯೆ ಹೆಜ್ಜೆ ಹಾಕುತ್ತಿದ್ದಂತೆ ಸ್ಥಳೀಯ ಬಿಜೆಪಿಗರು ಅವರನ್ನು ಬರಮಾಡಿಕೊಂಡರು. ಬಿಜೆಪಿ ಮುಖಂಡ ರುದ್ರೇಶ್ ಹಾಗೂ ಜನಧನಿ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಬಿಜೆಪಿ ಮುಖಂಡ ನಿಶಾಂತ್ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.ಪ್ರತಿ ವರ್ಷ ಪಾದಯಾತ್ರೆಮಹದೇಶ್ವರ ಬಿಜೆಪಿ ಮಂಡಲದ ಅಧ್ಯಕ್ಷ ಮುರುಗೇಶ್ ಮಾತನಾಡಿ, ‘ಇಡೀ ರಾಜ್ಯದಲ್ಲಿ ವಿಜಯೇಂದ್ರ ಅವರೇ ಹೆಚ್ಚು ಅಭಿಮಾನಿ ಬಳಗ ಹೊಂದಿರುವವರಾಗಿದ್ದು, ಅವರೇ ಮುಖ್ಯಮಂತ್ರಿಯಾಗಲಿದ್ದಾರೆ’ ಎಂದು ತಿಳಿಸಿದರು.