ಕನ್ನಡಪ್ರಭ ವಾರ್ತೆ ದಾವಣಗೆರೆ

ಕಾಂಗ್ರೆಸ್ ದುರಾಡಳಿತದ ಕುರಿತಂತೆ ಆರೋಪ ಪಟ್ಟಿಯನ್ನು ನಾವು ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿಗಳೇ ಒಳ್ಳೆಯ ಕಾರಣಕ್ಕೆ ನಿಮ್ಮ ಸರ್ಕಾರ ಯಾವಾಗ ಸುದ್ದಿಯಾಗಿದೆ ಹೇಳಿ ನೋಡೋಣ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿ, 3 ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಒಳ್ಳೆಯ ಕೆಲಸಕ್ಕೆ ಯಾವಾಗ ಹೆಸರಾಗಿತ್ತೆಂದರೆ ಹೇಳುವುದಕ್ಕೆ ಏನೂ ಸಿಗುವುದಿಲ್ಲ ಎಂದರು

ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣ ಸುದ್ದಿಯಾದವು. ಕಾಂಗ್ರೆಸ್ ಅಧಿಕಾರಾವದಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಬಿಡುಗಡೆ ಮಾಡಿದ್ದೇವೆ. ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ದೇಶಕ್ಕೆ 2ನೇ ಸ್ಥಾನದಲ್ಲಿದೆ. ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿ, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು ಎಂದು ದೂರಿದರು.

ಸರ್ಕಾರಿ ಆಸ್ಪತ್ರೆ ಔಷಧಿ ಕೊರತೆಗೆ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂಬ ಹೋರಾಟ, ಗುತ್ತಿಗೆ ನೌಕರರ ಹೋರಾಟ ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ. ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿರಲಿಲ್ಲ. 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿರಲಿಲ್ಲ ಎಂದು ಟೀಕಿಸಿದರು.


ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ. ರಸ್ತೆ ಗುಂಡಿ ಕಾರಣಕ್ಕೆ ಸರ್ಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಮಾತ್ರ. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿರಲಿಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರು ಮಾನಗೆಟ್ಟವರೆಂದು ಭಾಷಣದಲ್ಲಿ ಹೇಳಿದ್ದು, ಮಾನಗೆಟ್ಟವರು ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದರು.

ಮುಡಾ ಸೈಟ್‌ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ನಿಮ್ಮೊಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್‌ನಿಂದ ಮದ್ಯ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೆ ಸಿದ್ದರಾಮಯ್ಯನವರೆ ಎಂದು ಕುಟುಕಿದರು.

ಬಿಜೆಪಿ ಮೇಲೆ ಶೇ.40 ಕಮೀಷನ್‌ ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಕಾಂಗ್ರೆಸ್ ಸರ್ಕಾರವೇ ಶೇ.60 ಕಮಿಷನ್‌ ಸರ್ಕಾರವೆಂದು ನಿಮ್ಮ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಇಂತಹ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ? ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುತ್ತಿರುವ ಬಗ್ಗೆ ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಹರಿಹಾಯ್ದರು.

ಮುಖ್ಯಮಂತ್ರಿಗಳೇ, ನಿಮ್ಮ ಇಡೀ ಸಂಪುಟದಲ್ಲಿ ಮಾನಗೆಟ್ಟವರಿದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ? ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರಾಗಿ ಮಾಡಿ, ಶೇ.60 ಕಮೀಷನ್‌ ಆರೋಪ ಹೊತ್ತ ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಮೇಲೆ ಆರೋಪ ಮಾಡುತ್ತೀರಲ್ಲಾ ನಿಮ್ಮದು ದರೋಡೆಕೋರ ಸರಕಾರವಲ್ಲವೇ? ಬಿಜೆಪಿಯನ್ನು ಜೇಬುಗಳ್ಳರೆಂದು ನಿಮ್ಮ ಸುರ್ಜೇವಾಲಾ ಹೇಳಿದ್ದು, ನಿಮ್ಮ ಸರ್ಕಾರವನ್ನು ದರೋಡೆಕೋರರ ಸರಕಾರವೆಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕಿಡಿಕಾರಿದರು.

ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ಎಂ.ಬಸವರಾಜ ನಾಯ್ಕ, ವೈ.ಸಂಪಂಗಿ, ಮಾಾಳ ಮಲ್ಲಿಕಾರ್ಜುನ, ಬಿ.ಎಸ್.ಜಗದೀಶ, ಎಂ.ಪಿ.ಕೃಷ್ಣಮೂರ್ತಿ ಪವಾರ್, ಬಾತಿ ವೀರೇಶ ದೊಗ್ಗಳ್ಳಿ, ಡಿ.ಎಸ್.ಶಿವಶಂಕರ ಇತರರು ಇದ್ದರು.