ದೇವನಹಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ, ಯಾವ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಮುನಿಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಅವರ ಪಕ್ಷದ ಶಾಸಕರು, ಸಚಿವರೇ ಅಭಿವೃದ್ಧಿ ಕೆಲಸಗಳು ಆಗುತಿಲ್ಲವೆಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿದ್ದಾರೆ. ಈ ಹಗರಣದಲ್ಲಿ ಪ್ರಮುಖ ಆರೋಪಿ ಸಿದ್ದರಾಮಯ್ಯನವರು ಅವರನ್ನು ಮೊದಲು ಬಂಧಿಸಬೇಕು. ಸ್ಮಾರ್ಟ್ ಮೀಟರ್ ಅಳವಡಿಸುವುದಾಗಿ ೧೫ ಸಾವಿರ ಕೋಟಿ ಲೂಟಿ ಮಾಡಿದ್ದಾರೆ. ರಾಜ್ಯದಲ್ಲಿ ಗುತ್ತಿಗೆದಾರರ ೩೨ ಸಾವಿರ ಕೋಟಿ ಬಿಲ್ ಬಾಕಿ ಇದೆ, ಬಿಲ್ ಪಾವತಿಸಲು ಶೇ.೬೦-೬೫ರಷ್ಟು ಕಮಿಷನ್ ಕೊಡಬೇಕೆಂದು ಗುತ್ತಿಗೆದಾರರು ಆರೋಪಿಸುತ್ತಿದ್ದಾರೆ. ಸಾಲು ಸಾಲು ಆರೋಪಗಳಿರು ಸಂದರ್ಭದಲ್ಲಿ ಸಾವಿರ ದಿನದ ಸಮಾವೇಶ ಯಾರ ಪುರುಷಾರ್ಥಕ್ಕಾಗಿ ಸಾರ್ವಜನಿಕರ ಹಣ ಪೋಲು ಮಾಡುತ್ತಿದ್ದಾರೆಂದು ಪ್ರಶ್ನಿಸಿದರು.ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಅವಧಿಯಲ್ಲಿ ವಿದ್ಯಾನಿಧಿ ಪ್ರಾರಂಭಿಸಿದರು. ಆದರೆ ಸಿದ್ದರಾಮಯ್ಯ ಸರ್ಕಾರ ಅದನ್ನು ವಾಪಸ್ ಪಡೆದರು. ರೈತರು ಬೆಳೆದ ಬೆಳಗಳಿಗೆ ಖರೀದಿ ಕೇಂದ್ರ ತೆರಯಲು ಮೀನಮೇಷ ಎಣಿಸುತ್ತಿದ್ದಾರೆ. ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ದಲಿತರ ವಿರೋಧಿಗಳಾಗಿದ್ದಾರೆ. ರೈತರು, ಸಾರ್ವಜನಿಕರ ಲಕ್ಷಾಂತರ ಎಕರೆ ಭೂಮಿಯನ್ನು ವಕ್ಫ್ ಬೋರ್ಡ್‌ಗೆ ನೀಡಿ ಬಹುಸಂಖ್ಯಾತರಿಗೆ ಅನ್ಯಾಯ ಮಾಡಿದ್ದಾರೆ. ರಾಜ್ಯದಲ್ಲಿ ೨ ಲಕ್ಷ ಸರ್ಕಾರಿ ಹುದ್ದೆಖಾಲಿ ಇದ್ದು, ನೇಮಕಾತಿಗೆ ಅನುಮತಿ ನೀಡಿಲ್ಲ, ನಿರುದ್ಯೋಗ ತಾಂಡವವಾಡುತ್ತಿದೆ. ೨ ವರ್ಷದಲ್ಲಿ ೨ ಲಕ್ಷ ಕೋಟಿ ಸಾಲ ಮಾಡಿ ಅದರನ್ನು ಸಾರ್ವಜನಿಕರ ತಲೆ ಮೇಲೆ ಹೊರಿಸಿದೆ. ಕನ್ನಡ ಶಾಲೆ ಮಕ್ಕಳಿಗೆ ಸೌಲಭ್ಯಗಳನ್ನು ನೀಡುತ್ತಿಲ್ಲ. ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದಿವೆ. ಆದರೆ ಉರ್ದು ಶಾಲೆಗಳಿಗೆ ೧೦೦ ಕೋಟಿ ಅನುದಾನ ನೀಡಿದ್ದಾರೆ. ಸಾವಿರ ದಿನಗಳ ಸಾಧನಾ ಸಮಾವೇಶ ನಡೆಸುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಕ್ತ ಭಾರತವಾಗಲಿದೆ ಎಂದರು.

ಇದೆ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲೂಕು ಅಧ್ಯಕ್ಷ ಎನ್.ಎಲ್.ಅಂಬರೀಶ್ ಗೌಡ, ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್, ತಾಲೂಕು ಉಪಾಧ್ಯಕ್ಷ ತಮ್ಮಯ್ಯಣ್ಣ, ಪ್ರಧಾನ ಕಾರ್ಯದರ್ಶಿ ಅನಿಲ್, ಮುಖಂಡರಾದ ಬಿ.ಕೆ.ನಾರಾಯಣಸ್ವಾಮಿ, ಆರ್.ಕೆ.ನಂಜೇಗೌಡ, ದೇಸುನಾಗರಾಜ್, ಗೋವಿಂದರಾಜು, ಸಿದ್ದಲಿಂಗಣ್ಣ, ಮುರಳಿ ಬಿಜೆಪಿ ಮುಖಂಡರು ಕಾರ್ಯಕರ್ತರು ಇದ್ದರು.

೧೫ ದೇವನಹಳ್ಳಿ ಚಿತ್ರಸುದ್ದಿ: ೧

ದೇವನಹಳ್ಳಿ ಬಿಜೆಪಿ ಕಚೇರಿಯಲ್ಲಿ ಮಾಜಿ ಸಂಸದ ಮುನಿಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.