ಎಲ್ಲ ಸಮುದಾಯಗಳನ್ನು ಒಟ್ಟಾಗಿ ಕೊಂಡೊಯ್ಯುವ ಶಕ್ತಿ ಸಾಮರ್ಥ್ಯವಿರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ, ಬಡವರು ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿದ್ದು ಕೂಡ ನಾವೇ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಹಾನಗಲ್ಲ: ಎಲ್ಲ ಸಮುದಾಯಗಳನ್ನು ಒಟ್ಟಾಗಿ ಕೊಂಡೊಯ್ಯುವ ಶಕ್ತಿ ಸಾಮರ್ಥ್ಯವಿರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ, ಬಡವರು ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿದ್ದು ಕೂಡ ನಾವೇ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು. ತಾಲೂಕಿನ ಶಂಕರಿಕೊಪ್ಪ ಗ್ರಾಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಶಂಭು ಮಲಕಣ್ಣನವರ, ವಿಎಸ್ಎಸ್ ಬ್ಯಾಂಕಿನ ಮಾಜಿ ನಿರ್ದೇಶಕ ಶಿವಬಸಪ್ಪ ಮಲಕಣ್ಣನವರ ಸೇರಿದಂತೆ ಹಲವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ ವರ್ಗಗಳ ಬಂಧುಗಳನ್ನು ಜೊತೆಗೆ ಕರೆದೊಯ್ಯಬಲ್ಲ ಶಕ್ತಿ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬಡವರು, ಜನಸಾಮಾನ್ಯರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದೀಗ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದೆ ಎಂದು ಹೇಳಿದ ಅವರು ತಾಲೂಕಿನಲ್ಲಿ ಹತ್ತಾರು ವರ್ಷಗಳಿಂದ ಪರಿಹಾರ ಕಾಣದ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ. ಅತಂತ್ರ ಸ್ಥಿತಿಯಲ್ಲಿದ್ದ ೧೩ ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ದೊರಕಿಸಿ ಸ್ವತಂತ್ರಗೊಳಿಸಲಾಗುತ್ತಿದೆ. ರಸ್ತೆಗಳ ನಿರ್ಮಾಣ, ಕುಡಿಯುವ ನೀರಿನ ಯೋಜನೆ, ಏತ ನೀರಾವರಿ ಯೋಜನೆ ಸೇರಿದಂತೆ ಜನಪರ ಯೋಜನೆಗಳಿಗೆ ನೂರಾರು ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಭರಮಣ್ಣ ಶಿವೂರ, ಅನಿತಾ ಶಿವೂರ, ಮಲ್ಲಪ್ಪ ಕೋರಿ, ಪ್ರಕಾಶ ನಂದಿಹಳ್ಳಿ, ಬಾನಪ್ಪ ಬಿದರಿ, ಗುಡ್ಡಪ್ಪ ಗಡಿಯಂಕನಹಳ್ಳಿ, ನಿಂಗಪ್ಪ ತಳವಾರ, ನಿಂಗಪ್ಪ ಜಾಡಬಡಿಗೇರ, ಗಂಗಪ್ಪ ಗುಳಪಣ್ಣನವರ, ಚನ್ನಬಸಪ್ಪ ಬೆನಕಣ್ಣನವರ, ಸಿದ್ದಪ್ಪ ಕಾಳಂಗಿ, ಬಾಬಪ್ಪ ಕೆರಿಮತ್ತಿಹಳ್ಳಿ ಇದ್ದರು.