ಕನ್ನಡಪ್ರಭ ವಾರ್ತೆ ತುಮಕೂರುನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನ್ಯಾಯಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದ ದೌರ್ಜನ್ಯ ಎಸಗಿದೆ ಎಂದು ಆರೋಪಿಸಿ ಹಾಗೂ ನೀಟ್ ಪರೀಕ್ಷೆ ಹಗರಣದ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾನೂನು ಮತ್ತು ಮಾನವ ಹಕ್ಕುಗಳು ಹಾಗೂ ಮಾಹಿತಿ ಹಕ್ಕು ವಿಭಾಗದ ನೇತೃತ್ವದಲ್ಲಿ ವಕೀಲರು ಗುರುವಾರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ಟಿ.ಎನ್. ಸುರೇಶ್, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೇ ನೀಡಬೇಕು, ತಪ್ಪಿದಲ್ಲಿ ರಾಷ್ಟ್ರಪತಿಗಳು ಸಂವಿಧಾನ ಅನುಚ್ಛೇಧ 75 (2) ಪ್ರಕಾರ ಕೇಂದ್ರ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಹೇಳಿದರು.ಕೇಂದ್ರ ಸರ್ಕಾರದ ಹಾಗೂ ಪೊಲೀಸರ ದೌರ್ಜನ್ಯ ಖಂಡಿಸಿ ಪ್ರಧಾನಿ ನಿವಾಸದೆದುರು ಧರಣಿ ಮಾಡುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರ ಬಂಧನ ಪ್ರಜಾಪ್ರಭುತ್ವದ ಕಗ್ಗೋಲೆ. ಪ್ರತಿಭಟನೆ ನಡೆಸಲು ಭಾರತದ ಸಂವಿಧಾನದಲ್ಲಿ ಎಲ್ಲರಿಗೂ ಅವಕಾಶವಿದೆ, ಪ್ರಜೆಗಳಿಗೆ ಕಾನೂನು ಅಭಿವ್ಯಕ್ತಿ ಸ್ವಾತಂತ್ರ್ಯೆ ಕೊಟ್ಟಿದೆ. ಆದರೆ ಈ ಮೂಲಭೂತ ಹಕ್ಕನ್ನು ಕೇಂದ್ರ ಸರ್ಕಾರ ಕಸಿಯುತ್ತಿದೆ ಎಂದು ಟೀಕಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ತಮ್ಮ ಭವಿಷ್ಯದ ಆತಂಕದಿಂದ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಅವರ ಕುಟುಂಬಕ್ಕೆ ತಲಾ ಒಂದು ಕೋಟಿ ರು. ಪರಿಹಾರ ನೀಡಬೇಕು. ಮಾಡಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು. ಈ ಹಗರಣಕ್ಕೆ ಕಾರಣವಾಗಿರುವ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಟಿ.ಎನ್. ಸುರೇಶ್ ಒತ್ತಾಯಿಸಿದರು.ಹಿರಿಯ ವಕೀಲ ವಿ.ಆರ್. ವೆಂಕಟೇಶಪ್ಪ ಮಾತನಾಡಿ, ನೀಟ್ ಪರೀಕ್ಷೆಯ ಹಗರಣದಿಂದ ಅನೇಕ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಇತರೆ ವಿದ್ಯಾರ್ಥಿಗಳ ಭವಿಷ್ಯದ ಕನಸುಗಳಿಗೆ ಬೆಂಕಿ ಹಚ್ಚಿದೆ. ನ್ಯಾಯ ಕೇಳಿ ಹೋರಾಟ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿರುವುದು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ. ಈ ಹಗರಣಕ್ಕೆ ಕಾರಣವಾಗಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲೇಬೇಕು. ರಾಷ್ಟ್ರಪತಿಗಳು ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದರು.ನೀಟ್ ಹಗರಣ ತನಿಖೆಯನ್ನು ಕೇಂದ್ರ ಸರ್ಕಾರ ಕೈಗೊಂಬೆಯಂತಹ ತನಿಖಾ ಸಂಸ್ಥೆಗಳು ನಡೆಸುತ್ತಿರುವುದರಿಂದ ಸತ್ಯ ಹೊರಬರುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಈ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಪತ್ರ ಸಲ್ಲಿಸಿದರು. ವಕೀಲ ಎಚ್. ನಾಗರಾಜು, ಎಚ್.ಎಲ್. ವಸಂತಕುಮಾರ್, ಕೆ.ಸಿ. ವೆಂಕಟೇಶ್, ಮಲ್ಲಿಕಾರ್ಜುನ್, ಶಿವಣ್ಣ, ಕೆ.ಎನ್. ಹರೀಶ್, ಶಿವಕುಮಾರಸ್ವಾಮಿ, ಎನ್.ಆರ್. ರವಿ, ನವೀನ್ ನಾಯಕ್, ನಾಗರಾಜ್ ಪಾವಗಡ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.