ಸಾರಾಂಶ
ಕನ್ನಡಪ್ರಭ ವಾರ್ತೆ ಅರಸೀಕೆರೆ
ಹಾಸನದಲ್ಲಿ ನಡೆಯುತ್ತಿರುವ ಬೃಹತ್ ಸ್ವಾಭಿಮಾನಿ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಿಕೊಳ್ಳೋಣ ಎಂದು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಕರೆ ನೀಡಿದರು.ಆದರ್ಶ ಫಾರ್ಮ್ ಹೌಸ್ನಲ್ಲಿ ನಡೆದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳ ಅನುಷ್ಠಾನದ ಜತೆಗೆ ಸಮರ್ಥ ಆಡಳಿತದ ಮೂಲಕ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸರ್ಕಾರದ ಬಹುತೇಕ ಮಂತ್ರಿಗಳು ಹಾಗೂ ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅರಸೀಕೆರೆ ತಾಲೂಕು ಸೇರಿದಂತೆ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ರಾಜ್ಯ ಸರ್ಕಾರದೊಟ್ಟಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡೋಣ ಎಂದು ಮನವಿ ಮಾಡಿದರು.
ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು ಮಾತನಾಡಿ, ಸ್ವಾಭಿಮಾನಿ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದು, ಜಿಲ್ಲಾ ಕಾಂಗ್ರೆಸ್ ಘಟಕ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ರಾಜಣ್ಣ ಸಚಿವರಾದ ಮಾದೇವಪ್ಪನವರು ಹಾಗೂ ಶಾಸಕ ಶಿವಲಿಂಗೇಗೌಡರು ಹಾಗೂ ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್ ಮಾರ್ಗದರ್ಶನದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಗಂಜಿಗೆರೆ ಚಂದ್ರಶೇಖರ್, ಮುಖಂಡರಾದ ಗೊಲ್ಲರಹಳ್ಳಿ ಹನುಮಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಧರ್ಮಶೇಖರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾಬಾಯಿ ಚಂದ್ರನಾಯ್ಕ, ಜಿಪಂ ಮಾಜಿ ಸದಸ್ಯೆ ಸುಲೋಚನಾ ಬಾಯಿ ಸೇರಿದಂತೆ ಮತ್ತು ಇತರರು ಪಾಲ್ಗೊಂಡಿದ್ದರು.