ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಸಭೆಯ ಸ್ಥಳ ಅಶುದ್ಧವಾಗಿದೆ ಎಂದು ಹೇಳಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ ಸೋಮವಾರ ಶಿವಮೊಗ್ಗ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ದೇಶದ ಹಿರಿಯ ರಾಷ್ಟ್ರೀಯ ನಾಯಕರೊಬ್ಬರು ಭಾಗವಹಿಸಿದ ಸಭೆಯ ಸ್ಥಳವನ್ನು ಜಾತಿ ಆಧಾರದ ಮೇಲೆ ಅವಮಾನಿಸುವುದು ಖಂಡನೀಯ. ಇದು ಸಂವಿಧಾನ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ. ಬಿಜೆಪಿಯವರ ಜಾತೀಯ ಮತ್ತು ಸಂಕುಚಿತ ಮನಸ್ಥಿತಿ ಈ ಘಟನೆಯಿಂದ ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವವರು ಇಂತಹ ಹೇಯ ಕೃತ್ಯಕ್ಕೆ ಕೈ ಹಾಕಿರುವುದು ವಿಷಾದನೀಯ. 80 ವರ್ಷಗಳ ಸ್ವಾತಂತ್ರ್ಯದ ನಂತರವೂ ಇಂತಹ ಘಟನೆಗಳು ನಡೆಯುತ್ತಿರುವುದು ದೇಶಕ್ಕೆ ಅವಮಾನವಾಗಿದೆ. ಕಾಂಗ್ರೆಸ್ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಟೀಕಿಸಿದರು. ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ ಜಾಗವನ್ನು ಶ್ರೀರಾಮ ಸೇನಾ ಧರ್ಮಸ್ಥಳ ಸೇವನ್ಯಾಸ್ ಮತ್ತು ಬಿಜೆಪಿ ಬೆಂಬಲಿಗರು ಶುದ್ಧೀಕರಣ ಮಾಡಿರುವುದು ಜಾತೀಯತೆ ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿದೆ. ಈ ಮೂಲಕ ಸಂವಿಧಾನವನ್ನು ಅವಮಾನಿಸಿದ್ದಾರೆ ಎಂದು ದೂರಿದರು.ಸ್ವಾತಂತ್ರ್ಯ ದೊರೆತು 80 ವರ್ಷ ಕಳೆದರೂ ಮನುವಾದಿತನ ಇನ್ನೂ ಜೀವಂತವಾಗಿರುವುದು ಆತಂಕಕಾರಿಯಾಗಿದೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕರಿಗೆ ಈ ಗತಿಯಾದರೆ ಸಾಮಾನ್ಯ ದಲಿತರ ಪರಿಸ್ಥಿತಿ ಏನು? ಅಸ್ಪೃಶ್ಯತೆ ಆಚರಣೆ ಮಾಡಿ, ಶುದ್ಧೀಕರಣ ಮಾಡಿರುವ ಎಲ್ಲರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಜವಳಿ ನಿಗಮದ ಅಧ್ಯಕ್ಷ ಕೆ. ಚೇತನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ವೇತಾ ಬಂಡಿ, ಪ್ರಮುಖರಾದ ಜಿ.ಡಿ. ಮಂಜುನಾಥ್, ರಮೇಶ್ ಶಂಕರಘಟ್ಟ, ಎಸ್.ಟಿ. ಚಂದ್ರಶೇಖರ್, ವಿಜಯಕುಮಾರ್, ವೇದಾ ವಿಜಯಕುಮಾರ್, ಭಾರತಿ ರಾಮಕೃಷ್ಣ, ನೇತ್ರಾವತಿ ಗೌಡ, ಆರೀಫ್, ಪಾಲಾಕ್ಷಿ, ಎಸ್.ಟಿ. ಹಾಲಪ್ಪ, ಕಲೀಂ ಪಾಶ, ಶಿವಕುಮಾರ್, ಹೆಚ್.ಸಿ. ಯೋಗೀಶ್, ರಂಗನಾಥ್, ಮಧುಸೂದನ್ ಸಿ.ಜಿ., ದೇವೇಂದ್ರಪ್ಪ, ಆರ್. ರಾಜಶೇಖರ್, ವಿಶ್ವನಾಥ್ ಕಾಶಿ, ನೇತಾಜಿ, ಶಿವಾನಂದ್, ದೇವಿಕುಮಾರ್ ಮೊದಲಾದವರು ಇದ್ದರು.---------------------ಪೋಟೋ: 17ಎಸ್ಎಂಜಿಕೆಪಿ03
ಶಿವಮೊಗ್ಗ ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಸಭೆಯ ಸ್ಥಳ ಅಶುದ್ಧವಾಗಿದೆ ಎಂದು ಹೇಳಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆ ಖಂಡಿಸಿ ಸೋಮವಾರ ಶಿವಮೊಗ್ಗ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.