ಹೊಸಪೇಟೆ: ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಹೊಸಪೇಟೆ ನಗರಸಭೆ ಸದಸ್ಯರು ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದಿಂದ ವಿಶ್ವವಿಖ್ಯಾತ ಹಂಪಿ ವಿರೂಪಾಕ್ಷೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವ ಮುಖಂಡ ಭರತಕುಮಾರ್ ಸಿ.ಆರ್. ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನೀಡಿದೆ. ಸಿದ್ದರಾಮಯ್ಯ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ, ಉತ್ತಮ ಮುಖ್ಯಮಂತ್ರಿ ಎಂದು ಹೆಸರು ಗಳಿಸಿದ್ದರು. ಅದೇ ನಿಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿ, ಸುಭದ್ರ ಸರ್ಕಾರ ನಡೆಸಲು ಹಂಪಿ ವಿರೂಪಾಕ್ಷೇಶ್ವರ ಶಕ್ತಿ ನೀಡಲಿ. ಮುಂದಿನ ಅವಧಿಗೂ ಡಿ.ಕೆ. ಶಿವಕುಮಾರ್ ಅಧಿಕಾರದಲ್ಲಿ ಇರಲಿ ಎಂದು ಪ್ರಾರ್ಥಿಸಿಕೊಂಡಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ದಾದಾ ಕಲಂದರ್, ನಗರಸಭಾ ಸದಸ್ಯರಾದ ಮಂಜುನಾಥ, ಹುಲುಗಪ್ಪ, ಗೌಸ್, ಮುಖಂಡರಾದ ವೆಂಕಟೇಶ, ಶೇಖರ, ರಾಜು ಗುಜ್ಜಲ್, ಮಹಮ್ಮದ್ ಸುಹೇಲ್, ಆಕಾಶ, ನವೀನ್ ಕುಮಾರ್ ಉಪಸ್ಥಿತರಿದ್ದರು.

ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ವಿರೂಪಾಕ್ಷೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು.